ವಿಶೇಷ ಉಪನ್ಯಾಸ ಮಾಲೆ-ಪರಿಸರ ಮತ್ತು ಹವಾಮಾನ ಬದಲಾವಣೆ
ವಿಜಯನಗರ:ಭೂಮಿಯಲ್ಲಿ ಜೀವಿಗಳ ಸೃಷ್ಠಿಗೆ ಪಂಚಭೂತಗಳೇ ಮೂಲ ಕಾರಣ. ಜೀವಿಯ ಉಗಮದಲ್ಲಿ ಮಹತ್ವದ ಪಾತ್ರವಹಿಸುವ ಗಾಳಿ, ನೀರು ಮತ್ತು ಬೆಳಕನ್ನು ಇಂದು ನಾವು ಬಂಧನಗೊಳಿಸುತ್ತಿದ್ದೇವೆ. ಇದು ಪ್ರಕೃತಿಯ ವಿನಾಶಕ್ಕೆ ಪ್ರಮುಖ ಕಾರಣವಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವ ವಿಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಗಿರೀಶ್ ಎಸ್.ಟಿ. ಅವರು ಅಭಿಪ್ರಾಯಪಟ್ಟರು. ಕನ್ನಡ ವಿಶ್ವವಿದ್ಯಾಲಯದ ವಿಜ್ಞಾನಗಳ ಇತಿಹಾಸ ವಿಭಾಗದಿಂದ ಪಂಪ ಸಭಾಂಗಣದಲ್ಲಿ ಆಯೋಜಿಸಿದ್ದ ಪರಿಸರ ಮತ್ತು ಹವಾಮಾನ ಬದಲಾವಣೆ ವಿಷಯದ ಕುರಿತು ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಮಾಲೆ-5ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಂದುವರೆದು ಮಾತನಾಡುತ್ತ ಜೀವ ವಿಜ್ಞಾನದಿಂದ ನಾವು ಹೊಸ ಹೊಸ ಜೀವಿಗಳನ್ನು ಸೃಷ್ಠಿಸಲು ಸಾಧ್ಯವಿದೆ. ಆದರೆ ಅದು ಎಷ್ಟರ ಮಟ್ಟಿಗೆ ಸರಿ ಎಂಬ ಚರ್ಚೆಗಳು ನಡೆಯುತ್ತಿವೆ. ಪ್ರತಿಯೊಂದು ಜೀವಿಗೂ ಅದರದೇ ಆದ ವೈಶಿಷ್ಟ್ಯವಿದ್ದು, ಅದರ ಅಸ್ಮಿತೆಯನ್ನು ಉಳಿಸಿಕೊಳ್ಳುವುದು ಕೂಡ ಮುಖ್ಯವಾಗುತ್ತದೆ. ನಮಗೆ ಪ್ರಕೃತಿ ಬೇಕೆ ಹೊರತು, ಪ್ರಕೃತಿಗೆ ನಮ್ಮ ಅವಶ್ಯಕತೆಯಿಲ್ಲ. ಪರಿಸರ ಇಲ್ಲದಿದ್ದರೆ ನಾವು ಬದುಕಲು ಸಾಧ್ಯವಿಲ್ಲ. ಆದ್ದರಿಂದ ಪರಿಸರವನ್ನು ಉಳಿಸುವುದು ನಮ್ಮೆಲ್ಲರ ಜೀವನದ ಪಾಠವಾಗಬೇಕು ಎಂದು ಅವರು ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಪರಿಸರ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಬಿ.ಸಿ.ನಾಗರಾಜ ಅವರು ವಿಶೇಷ ಉಪನ್ಯಾಸ ನೀಡುತ್ತ ಒಂದು ದೇಶದ ಅಭಿವೃದ್ಧಿಯಲ್ಲಿ ಪರಿಸರ, ಸಮಾಜ ಮತ್ತು ಆರ್ಥಿಕತೆಗಳು ಪ್ರಮುಖ ಪಾತ್ರವಹಿಸುತ್ತವೆ. ಅಭಿವೃದ್ಧಿಯ ಹೆಸರಿನಲ್ಲಿ ಇಂದು ಪರಿಸರದ ವಿನಾಶ ಹೆಚ್ಚುತ್ತಿದೆ. 1972 ರಲ್ಲಿ ಮೊದಲ ಬಾರಿಗೆ ಪರಿಸರ ಜಾಗೃತಿ ಕುರಿತಂತೆ ವಿಶ್ವಸಂಸ್ಥೆಯಲ್ಲಿ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಜಗತ್ತಿನ ವಿವಿಧ ದೇಶಗಳು ಪಾಲ್ಗೊಂಡು ಪರಿಸರ ಸಂರಕ್ಷಣೆ ಬಗ್ಗೆ ಚರ್ಚೆ ನಡೆಸಿದವು. ಇದರ ಸವಿನೆನಪಿಗಾಗಿ ಪ್ರತಿವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಭೂಪಾಲ್ ಅನಿಲ್ ದುರಂತದ ನಂತರ ಎಚ್ಚೆತ್ತುಕೊಂಡ ಸರ್ಕಾರ 1985 ರಲ್ಲಿ ಪರಿಸರ ಸಚಿವಾಲಯವನ್ನು ಆರಂಭಿಸಿತು. ನಮ್ಮ ದೇಶದಲ್ಲಿ 1974ರಲ್ಲಿ ಸುಂದರಲಾಲ್ ಬಹುಗುಣ ಅವರ ಚಿಪ್ಕೋ ಚಳುವಳಿ, ಪಾಂಡುರಂಗ ಅವರ ನೇತೃತ್ವದಲ್ಲಿ ನಡೆದ ಅಪ್ಪಿಕೋ ಚಳುವಳಿ, ಸಾಲುಮರದ ತಿಮ್ಮಕ್ಕ, ರಾಜೇಂದ್ರ ಸಿಂಗ್ ಅವರ ಪರಿಸರ ಕಾಳಜಿ ಹೀಗೆ ಹಲವಾರು ಜನರು ಪರಿಸರ ಸಂರಕ್ಷಣೆಯಲ್ಲಿ ನಿರ್ವಹಿಸಿದ ಪಾತ್ರ ಅಪಾರವಾದುದು ಎಂದು ತಿಳಿಸಿದರು.
ವಾತಾವರಣದಲ್ಲಿ ಹಸಿರುಮನೆ ಅನಿಲಗಳ ಪ್ರಮಾಣ ಹೆಚ್ಚುತ್ತಿರುವುದರಿಂದ ಉಷ್ಣಾಂಶವು ಏರುಗತಿಯನ್ನು ತಲುಪಿದೆ. ಈ ಹಿನ್ನೆಲೆಯಲ್ಲಿ ಜಾಗತೀಕ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿಯ ಕುರಿತಂತೆ ದೊಡ್ಡ ಮಟ್ಟದಲ್ಲಿ ಚರ್ಚೆಗಳು ಮಾಡುತ್ತವೆ. ಸುಸ್ಥಿರತೆಯನ್ನು ಕಾಪಾಡುವಲ್ಲಿ ಉಳ್ಳವರು ಮತ್ತು ಇಲ್ಲದವರ ನಡುವಿನ ಅಸಮಾನತೆಯನ್ನು ತೊಡೆದು ಹಾಕಬೇಕು. ಅತಿವೃಷ್ಠಿ-ಅನಾವೃಷ್ಠಿಯಿಂದ ತೊಂದರೆಗೊಳಾಗುವ ಜನರನ್ನು ನಿರಾಶ್ರಿತರೆಂದು ಪರಿಗಣಿಸಿ ಅವರಿಗೆ ಪರಿಹಾರ ಧನವನ್ನು ನೀಡಬೇಕೆಂದು ವಿಶ್ವಸಂಸ್ಥೆ ಹೇಳುತ್ತದೆ. ಸುಸ್ಥಿರ ಅಭಿವೃದ್ಧಿಯ 17 ಗುರಿಗಳನ್ನು ಯುವ ಸಂಶೋಧಕರು ತಮ್ಮ ಸಂಶೋಧನೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ.ಡಿ.ವಿ.ಪರಮಶಿವಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತ ಉತ್ತಮ ವಾತಾವರಣದಲ್ಲಿದ್ದಾಗ ನಮಗೆ ಅದರ ಅರಿವು ಆಗುವುದಿಲ್ಲ. ಗಣಿಗಾರಿಕೆ, ಕಾರ್ಖಾನೆ, ಟ್ರಾಫಿಕ್ ಜಾಮ್ನಿಂದ ಆಗುವ ಮಾಲಿನ್ಯದಿಂದ ಕೂಡಿದ ಪರಿಸರಕ್ಕೆ ಹೋದಾಗ ನಮಗೆ ಪರಿಸರದ ಮಹತ್ವ ಗೊತ್ತಾಗುತ್ತದೆ. ಪರಿಸರವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಮಾತನಾಡಿದರು. ವಿಜ್ಞಾನಗಳ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ.ಶೈಲಜ ಇಂ.ಹಿರೇಮಠ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರು, ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ