ಮಕ್ಕಳಿಗೆ ಬಾಲ್ಯದಿಂದಲೇ ಕಾನೂನಿನ ಸೂಕ್ತ ಅರಿವು ಮೂಡಿಸಿದಲ್ಲಿ ಅವರು ಭವಿಷ್ಯದಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ತಡೆಯಬಹುದು. ಇದರಿಂದ ಆರೋಗ್ಯಕರ ಸಮಾಜದ ನಿರ್ಮಾಣ ಸಾಧ್ಯ: ಹೈ ಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್
ಈ ಸಂವಾದದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ಹೆಚ್.ಪಿ. ಸಂದೇಶ್ ರವರು ಮಾತನಾಡಿ "ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಕಠಿಣ ಪರಿಶ್ರಮ ಹಾಗೂ ಗುರುಗಳ ಮಾರ್ಗದರ್ಶನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಮಕ್ಕಳಿಗೆ ಬಾಲ್ಯದಿಂದಲೇ ಕಾನೂನಿನ ಸೂಕ್ತ ಅರಿವು ಮೂಡಿಸಿದಲ್ಲಿ ಅವರು ಭವಿಷ್ಯದಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ತಡೆಯಬಹುದು. ಇದರಿಂದ ಆರೋಗ್ಯಕರ ಸಮಾಜದ ನಿರ್ಮಾಣ ಸಾಧ್ಯ" ಎಂದು ಹೇಳಿದರು.
"ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವಪೂರ್ಣವಾದುದು. ಪೂರ್ವ ಸಿದ್ಧತೆಯೊಂದಿಗೆ ಆತ್ಮವಿಶ್ವಾಸದಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಬೇಕು. ಉತ್ತಮ ವಿದ್ಯಾಭ್ಯಾಸ ಪಡೆಯುವ ಜೊತೆಗೆ ವ್ಯಕ್ತಿತ್ವ ರೂಪಿಸಿಕೊಳ್ಳುವ ಬಗ್ಗೆ ಚಿಂತನೆ ನಡೆಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಸಲಹೆ, ಮಾರ್ಗದರ್ಶನ ಅಗತ್ಯ" ಎಂದು ತಿಳಿಸಿದರು.
ಇದರೊಂದಿಗೆ "ಕೃಷಿ ದೇಶದ ಬೆನ್ನೆಲುಬು ಹೀಗಾಗಿ ವಿದ್ಯಾರ್ಥಿಗಳು ಕೃಷಿ ಕ್ಷೇತ್ರದತ್ತ ಹೆಚ್ಚು ಒಲವು ಬೆಳೆಸಿಕೊಳ್ಳಬೇಕು. ಈ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆಗಳ ಮೂಲಕ ಆರ್ಥಿಕ ಸದೃಢತೆಗೆ ಶ್ರಮಿಸಬೇಕು" ಎಂದು ಕೃಷಿ ಕ್ಷೇತ್ರದ ಬಗ್ಗೆಯೂ ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿಶೇಷವಾಗಿ ಕಾರ್ಯಕ್ರಮದ ಆಯೋಜಕ ಚಿಕ್ಕಮಗಳೂರಿನ ಯುವಸ್ಫೂರ್ತಿ ಅಕಾಡೆಮಿಯ ಸಂಸ್ಥಾಪಕ ಸಿ.ಬಿ.ಸುಂದರೇಶ್ ರವರು ಕರ್ನಾಟಕದ 22 ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ವ್ಯಕ್ತಿತ್ವ ವಿಕಸನದ ತರಬೇತಿ ಹಾಗೂ ಪರೀಕ್ಷಾ ತರಬೇತಿಯ ಜೊತೆಗೆ ಪರಿಸರ ಸಂರಕ್ಷಣೆಗಾಗಿ ಗಿಡ ನೆಡುವ ಕಾರ್ಯಕ್ರಮಗಳನ್ನು ಗಮನಿಸಿ ಶ್ಲಾಘನೆ ವ್ಯಕ್ತಪಡಿಸಿದರು.
ಯುವಸ್ಪೂರ್ತಿ ಅಕಾಡೆಮಿಯ ಸಂಸ್ಥಾಪಕ ಸುಂದರೇಶ್.ಸಿ.ಬಿಯವರು ಪ್ರಾಸ್ತಾವಿಕ ನುಡಿಗಳನ್ನಾ ಡುತ್ತಾ "ಯುವ ಜನತೆ ಸದೃಢ ದೇಶದ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು" ಎಂದರು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ಶ್ರೀ ದೊಡ್ಡಮ್ಮ ದೇವಿ ಉಪಾಸಕ ಶ್ರೀ ಸಿದ್ದಪ್ಪಾಜಿಯವರು ಆಶೀರ್ವಚನ ನೀಡಿದರು. ಕಾಲೇಜಿನ ಪ್ರಾಂಶುಪಾಲ ಲೋಕಪ್ಪ.ವಿ. ದಳವಾಯಿ ಯವರು ಅಧ್ಯಕ್ಷೀಯ ನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ನಿರ್ದೇಶಕ ಹೆಚ್.ಎನ್.ಜನಾರ್ಧನ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲೇಶಪ್ಪ, ಯುವ ಸ್ಫೂರ್ತಿ ಅಕಾಡೆಮಿಯ ಕಾನೂನು ಸಲಹೆಗಾರ ಗಿರೀಶ್ ಹುಣಸೂಡು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾಗರದ ರಾಮಕೃಷ್ಣ ವಿದ್ಯಾಲಯದ ಯೋಗಪಟು ಕು.ಪ್ರಜ್ಞಾ.ಕೆ.ಎ ಯವರಿಂದ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ ಕನ್ನಡ ಉಪನ್ಯಾಸಕ ಹೂವಪ್ಪ. ಸಿ.ಹೆಚ್ ರವರು ಸ್ವಾಗತಿಸಿ, ಮುರಳಿ ಎಸ್.ಡಿ ಯವರು ನಿರೂಪಿಸಿ, ರಸಾಯನಶಾಸ್ತ್ರ ಉಪನ್ಯಾಸಕಿ ಸುಶ್ಮಿತಾರವರು ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ