ಬಳ್ಳಾರಿ:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗಂಗಾ ಕಲ್ಯಾಣ ಯೋಜನೆಗೆ ಜೆಸ್ಕಾಂ ವ್ಯಾಪ್ತಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಉಚಿತವಾಗಿ ಕೊಳವೆ ಬಾವಿ/ತೆರೆದ ಬಾವಿ ನಿರ್ಮಾಣಕ್ಕೆ ಈ ಯೋಜನೆಯಡಿ ಧನ ಸಹಾಯ ನೀಡಲಾಗುತ್ತಿದ್ದು, ಪಂಪ್ಸೆಟ್ನ ವಿದ್ಯುದ್ದೀಕರಣಕ್ಕೆ ಸರಾಸರಿ 1.20 ರಿಂದ 2.5 ಲಕ್ಷ ರೂ. ವೆಚ್ಚವಾಗುತ್ತಿದೆ. 2022 ರಿಂದ 2024 ರ ಅವಧಿಯಲ್ಲಿ ಒಟ್ಟು 7,191 ಅರ್ಜಿಗಳ ಪೈಕಿ 5692 ಅರ್ಜಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಜೆಸ್ಕಾಂ ತಿಳಿಸಿದೆ.
ಇನ್ನು ಹಣಕಾಸಿನ ವರ್ಷ 2024-25 ರಲ್ಲಿ ಏಪ್ರಿಲ್ನಿಂದ ಆಗಸ್ಟ್ವರೆಗೆ 1924 ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ. ಪ್ರಸ್ತುತ ಜೆಸ್ಕಾಂವತಿಯಿಂದ 1287 ಅರ್ಜಿಗಳು ಬಾಕಿ ಉಳಿದಿವೆ. 15 ವಿವಿಧ ಅಭಿವೃದ್ಧಿ ನಿಗಮಗಳು ಗಂಗಾ ಕಲ್ಯಾಣ ಯೋಜನೆ ಅಡಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ನೋಂದಣಿ ಮಾಡುತ್ತಾ ಯೋಜನೆ ಅನುಷ್ಠಾನ ಮಾಡುತ್ತಿವೆ.
ಇವುಗಳ ವತಿಯಿಂದ 282 ಅರ್ಜಿಗಳು ಬಾಕಿ ಉಳಿದಿವೆ. ಜೊತೆಗೆ ಜೆಸ್ಕಾಂಗೆ ನೀಡಬೇಕಾಗಿರುವ ಮೊತ್ತದಲ್ಲಿ 29.66 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅತಿ ಹೆಚ್ಚು ಬಾಕಿ ಉಳಿಸಿಕೊಂಡಿದೆ ಎಂದು ಜೆಸ್ಕಾಂ ತಿಳಿಸಿದೆ. ಗಂಗಾಕಲ್ಯಾಣ ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ.
"ಗಂಗಾ ಕಲ್ಯಾಣ ಯೋಜನೆ ಅಡಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಕೊಳವೆಬಾವಿ ಕೊರೆಸಿ ಕೊಡಲಾಗುತ್ತಿದ್ದು, ರಾಜ್ಯದಲ್ಲಿಈ ಯೋಜನೆಗೆ ಅರ್ಹ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಹೊಣೆ ಹೊತ್ತಿರುವ ಇಂಧನ ಇಲಾಖೆ, ಈ ಕೆಲಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸುತ್ತಿದೆ. ವಿಶೇಷವಾಗಿ ಜೆಸ್ಕಾಂ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವೆ."
- ಕೆ.ಜೆ.ಜಾರ್ಜ್, ಇಂಧನ ಸಚಿವರು
"ಗಂಗಾಕಲ್ಯಾಣ ಯೋಜನೆಯ ಅಡಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆಸಲಾಗುತ್ತಿದ್ದು, ಇದಕ್ಕೆ ತಗುಲುವು ವಿದ್ಯುತ್ ಸಂಪರ್ಕವನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಜೆಸ್ಕಾಂನ ಅರ್ಹ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಕೋರುವೆ. ಇದಕ್ಕೆ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು."
- ರವಿಂದ್ರ ಕರಲಿಂಗಣ್ಣವರ್, ವ್ಯವಸ್ಥಾಪಕ ನಿರ್ದೇಶಕರು, ಜೆಸ್ಕಾಂ ಕಲಬುರಗಿ
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


