ಕುಂಬಳೆ: ಕಾಸರಗೋಡಿನ ಹಿರಿಯ ಸಾಹಿತಿ, ಕವಿ, ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ ಅವರ ಮುಕ್ತಕಗಳ ಸಂಕಲನ 'ಕಂದನ ಮುತ್ತು' ಭಾನುವಾರ ಲೋಕಾರ್ಪಣೆಗೊಂಡಿತು.
ಕುಂಬಳೆ ಸಮೀಪದ ನಾರಾಯಣಮಂಗಲದಲ್ಲಿರುವ ಅವರ ನಿವಾಸದಲ್ಲಿ ನಡೆದ ಸರಳ ಸುಂದರ ಕಾರ್ಯಕ್ರಮದಲ್ಲಿ ಮದುರೈ ಕಾಮರಾಜ ಯುನಿವರ್ಸಿಟಿಯ ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥರಾಗಿರುವ ಡಾ. ಹರಿಕೃಷ್ಣ ಭರಣ್ಯ ಅವರು ಕೃತಿ ಬಿಡುಗಡೆ ಮಾಡಿದರು.
ಸಿರಿಗನ್ನಡ ವೇದಿಕೆಯ ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಜರಗಿದ ಈ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅವರು ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ವಾಂಸ, ನಿವೃತ್ತ ಶಿಕ್ಷಕ, ಬಳ್ಳಂಬೆಟ್ಟು ಈಶ್ವರ ಭಟ್ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ಎಣ್ಮಕಜೆ ಗ್ರಾಮ ಪಂಚಾಯತು ಸದಸ್ಯೆ ಶ್ರೀಮತಿ ಆಯಿಶಾ ಪೆರ್ಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಕೃತಿಕಾರರು ಮತ್ತು ಕೃತಿಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಕೃತಿಯನ್ನು ಪ್ರಕಟಿಸಿದ ಮಂಗಳೂರಿನ ಕಥಾಬಿಂದು ಪ್ರಕಾಶನದ ಪಿ.ವಿ. ಪ್ರದೀಪ್ ಕುಮಾರ್ (ಲೇಖಕ, ಪ್ರಕಾಶಕ) ಅವರು ವೇದಿಕೆಯಲ್ಲಿದ್ದರು.
ಕೃತಿಕಾರರಾದ ವಿ.ಬಿ ಕುಳಮರ್ವ ಅವರು ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. 10,000ಕ್ಕೂ ಅಧಿಕ ಮುಕ್ತಕಗಳು ಇದುವರೆಗೆ ರಚನೆಯಾಗಿದ್ದು, ಮೊದಲ ಹಂತದಲ್ಲಿ 1000 ಮುಕ್ತಕಗಳನ್ನು ಒಳಗೊಂಡ ಸಂಕಲನ 'ಕಂದನ ಮುತ್ತು' ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು.
ಕವಿ, ಸಾಹಿತಿ, ರಾಧಾಕೃಷ್ಣ ಉಳಿಯತ್ತಡ್ಕ ಶುಭಾಶಂಸನೆ ಮಾಡಿದರು. ಬೆಳ್ತಂಗಡಿ ನಡ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕಿ ವಸಂತಿ ಜಿ. ಭಟ್ ಕುಳಮರ್ವ ಅವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಕಾಸರಗೋಡಿನ ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಲಲಿತಾ ಲಕ್ಷ್ಮಿ ಕುಳಮರ್ವ ಅವರು ವಂದನಾರ್ಪಣೆ ನೆರವೇರಿಸಿದರು.
ಪುಸ್ತಕ ಬಿಡುಗಡೆಯ ಬಳಿಕ ಕೃತಿಯಿಂದ ಆಯ್ದ ಕೆಲವು ಮುಕ್ತಕಗಳ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು. ನಿವೃತ್ತ ಪ್ರಾಂಶುಪಾಲರಾದ ಉಂಡೆಮನೆ ವಿಶ್ವೇಶ್ವರ ಭಟ್ ಹಾಗೂ ಪ್ರೊ. ಗಣಪತಿ ಭಟ್ ಕುಳಮರ್ವ ಅವರು ಈ ಕಾರ್ಯಕ್ರಮ ನಡೆಸಿಕೊಟ್ಟರು. ಅನಂತರ ಕೊಳಚಿಪ್ಪು ಗೋವಿಂದ ಭಟ್ಟರ ಅಧ್ಯಕ್ಷತೆಯಲ್ಲಿ ಕಿರು ಕವಿಗೋಷ್ಠಿ ನಡೆಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ