ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಿ, ಅವಕಾಶಗಳನ್ನು ಸದ್ಬಳಕೆ ಮಾಡಿ: ಡಿ. ವೀರೇಂದ್ರ ಹೆಗ್ಗಡೆ

Upayuktha
0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳ ವಿತರಣೆ ಹಾಗೂ ಶಾಲೆಗಳಿಗೆ ಡೆಸ್ಕ್-ಬೆಂಚುಗಳ ವಿತರಣೆ



• ಉಜಿರೆಯಲ್ಲಿ ನಿರ್ಮಾಣವಾಗುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರಕ್ಕೆ ರೂ. 46.65 ಲಕ್ಷ ಮೌಲ್ಯದ ಸಾಗಾಟ ವಾಹನ ಮತ್ತು ಯಂತ್ರೋಪಕರಣಗಳ ಮಂಜೂರಾತಿ ಪತ್ರವನ್ನು  ದ.ಕ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ  ಕೆ. ಅವರಿಗೆ ಹಸ್ತಾಂತರಿಸಲಾಯಿತು.

• ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ 507 ಶಾಲೆಗಳಿಗೆ 4,044 ಜೊತೆ ಡೆಸ್ಕ್-ಬೆಂಚುಗಳನ್ನು ವಿತರಿಸಲಾಯಿತು.

• ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿದರು.

ಉಜಿರೆ: ಇಂದು ಎಲ್ಲಾ ಸರ್ಕಾರಿ ಶಾಲೆಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಆದುದರಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಅಲ್ಲಿ ಸಿಗುವ ಅವಕಾಶಗಳ ಸದುಪಯೋಗ ಪಡೆದು ಮಕ್ಕಳು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.


ಅವರು ಮಂಗಳವಾರ ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಉಜಿರೆಯ ಸಮಗ್ರ ಘನತ್ಯಾಜ್ಯ ನಿರ್ವಹಣಾಕೇಂದ್ರಕ್ಕೆ ಸಾಗಾಟವಾಹನ ಮತ್ತು ಯಂತ್ರೋಪಕರಣಗಳ ವಿತರಣೆ ಮತ್ತು 507 ಶಾಲೆಗಳಿಗೆ 4,044 ಜೊತೆ ಡೆಸ್ಕ್-ಬೆಂಚುಗಳ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಸರ್ಕಾರ ಭರ್ತಿ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೀಡಿದ ಪೀಠೋಪಕರಣಗಳು, ಶಾಲಾಕೊಠಡಿ ನಿರ್ಮಾಣ, ಕ್ರೀಡಾಂಗಣ, ಆಟದಸಾಮಾಗ್ರಿಗಳು ಹಾಗೂ ಬೋಧನೋಪಕರಣಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.


ಸ್ವಚ್ಛತೆ ಕಾಪಾಡುವ ಬಗ್ಯೆ ಸಾರ್ವಜನಿಕರು ಹೆಚ್ಚಿನ ಆಸಕ್ತಿ, ಕಾಳಜಿ ಮತ್ತು ಸಾಮಾಜಿಕಪ್ರಜ್ಞೆ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್, ಎಸ್.ಎಸ್., ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ವರ್ಷ 1030 ಅತಿಥಿಶಿಕ್ಷಕರನ್ನು ಸರ್ಕಾರಿ ಶಾಲೆಗಳಲ್ಲಿ ನೇಮಿಸಲಾಗಿದೆ ಎಂದರು.


ದಕ್ಷಿಣಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಆನಂದ, ಕೆ. ಮಾತನಾಡಿ ಸ್ವಚ್ಛತೆ ನಿರ್ವಹಣೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳದ ಸೇವೆಯನ್ನು ಶ್ಲಾಘಿಸಿ ಅಭಿನಂದಿಸಿದರು.


ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ದ.ಕ. ಜಿಲ್ಲಾ ಉಪನಿರ್ದೇಶಕ ವೆಂಕಟೇಶ್ ಸುಬ್ರಾಯ ಪಟಗಾರ್ ಮಾತನಾಡಿ, ಧರ್ಮಸ್ಥಳದ ಕೊಡುಗೆಯಿಂದಾಗಿ ಜಿಲ್ಲೆಯಲ್ಲಿ ಉತ್ತಮ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಾಗಿದ್ದು, ಶಿಕ್ಷಣ ಇಲಾಖೆ ವತಿಯಿಂದ ಕೃತಜ್ಞತೆ ವ್ಯಕ್ತಪಡಿಸಿದರು.


ಹೇಮಾವತಿ ವೀ. ಹೆಗ್ಗಡೆ, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಪ್ರಭಾರ ಕ್ಷೇತ್ರಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಮಲಾ  ಉಪಸ್ಥಿತರಿದ್ದರು.


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಸ್ವಾಗತಿಸಿದರು. ಶಿವಾನಂದ ಆಚಾರ್ಯ ಧನ್ಯವಾದವಿತ್ತರು.


ಮುಖ್ಯಾಂಶಗಳು:

• ರೂ.2.65 ಕೋಟಿ ರೂ. ವೆಚ್ಚದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ 507 ಶಾಲೆಗಳಿಗೆ 4,044 ಜೊತೆ ಡೆಸ್ಕ್-ಬೆಂಚುಗಳನ್ನು ವಿತರಿಸಲಾಯಿತು.

• ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ರೂ. 38.01 ಕೋಟಿ ವಿನಿಯೋಗಿಸಲಾಗಿದೆ.

• ರಾಜ್ಯದ 11,000 ಶಾಲೆಗಳಿಗೆ 26 ಕೋಟಿ ರೂ. ವೆಚ್ಚದಲ್ಲಿ 72,000 ಜೊತೆ ಬೆಂಚು-ಡೆಸ್ಕ್ಗಳನ್ನು ಈ ವರೆಗೆ ವಿತರಿಸಲಾಗಿದೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top