ಮಾನವಿಕ ವಿಭಾಗಗಳ ಅಸ್ಮಿತೆಯನ್ನು ಉಳಿಸಬೇಕಾಗಿದೆ: ಡಾ. ತಾಳ್ತಜೆ ವಸಂತ ಕುಮಾರ್

Upayuktha
0

 ವಿವೇಕಾನಂದ ಕಾಲೇಜಿನಲ್ಲಿ  ರಾಷ್ಟ್ರೀಯ ವಿಚಾರ ಸಂಕಿರಣ



ಪುತ್ತೂರು: ನಾವು ಆಯ್ದುಕೊಳ್ಳುವ ಜ್ಞಾನದ ಶಾಖೆ ಯಾವುದೇ ಆಗಿದ್ದರು ಕೂಡ ಅದರಲ್ಲಿ ಮುಖ್ಯವಾಗಿ ನಮಗೆ ತೃಪ್ತಿ ಇರಬೇಕು, ಹಾಗೆಯೇ ಮಾನವಿಕ ವಿಯಷಯಗಳಲ್ಲಿ ಪ್ರತಿಯೊಂದು ವಿಷಯವು ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗೆಯೇ ಈ ತಂತ್ರಜ್ಞಾನ ಯುಗದಲ್ಲಿ ಮಾನವಿಕ ವಿಷಯಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಮುಂಬೈ ವಿಶ್ವವಿದ್ಯಾಲಯದ, ಕನ್ನಡ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ  ವಸಂತ ಕುಮಾರ್  ಹೇಳಿದರು.


ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ ಐಕ್ಯೂಎಸಿ ಘಟಕ ಮತ್ತು ಸಮಾಜ ವಿಜ್ಞಾನ ವಿಭಾಗದ (ಇತಿಹಾಸ, ಅರ್ಥಶಾಸ್ತ್ರ, ರಾಜಕೀಯ ವಿಜ್ಞಾನ,  ಸಮಾಜ ಶಾಸ್ತ್ರ, ಮನೋವಿಜ್ಞಾನ, ಪತ್ರಿಕೋದ್ಯಮ) ಜಂಟಿ ಆಶ್ರಯದಲ್ಲಿ ಸಮಾಜ ವಿಜ್ಞಾನ ಶಿಕ್ಷಣದ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ಸಾಧ್ಯತೆಗಳು ಎಂಬ ವಿಷಯದ ಕುರಿತು ಆಯೋಜಿಸಿದ ರಾಷ್ಟ್ರೀಯ ವಿಚಾರ ಸಂಕಿರಣವನ್ನು  ಉದ್ಘಾಟಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಭಾರತವು ವಿಶ್ವದ ಅತಿ ದೊಡ್ಡ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದೆ. ಅದರಲ್ಲಿ ಸಮಾಜ ವಿಜ್ಞಾನ ವಿಭಾಗಗಳು ತನ್ನದೇ ಆದ ಮಹತ್ವವನ್ನು ಒಳಗೊಂಡಿದೆ ಅದನ್ನು ನಾವು ಅರ್ಥೈಸಿಕೊಳ್ಳಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.


ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್, ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಮತ್ತು ಕಾರ್ಯಕ್ರಮದ ಸಂಯೋಜಕಿ ಡಾ. ವಿಜಯಸರಸ್ವತಿ ಬಿ, ಕಲಾ ವಿಭಾಗದ ಡೀನ್ ಹಾಗೂ ಕರ‍್ಯಕ್ರಮದ ಸಂಯೋಜಕಿ ಡಾ.ದುರ್ಗಾರತ್ನ. ಸಿ ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮದ ಬಳಿಕ ಸಮಾಜ ವಿಜ್ಞಾನ ಶಿಕ್ಷಣದ ಪ್ರಸ್ತುತ ಸ್ಥಿತಿ ಮತ್ತು ಭವಿಷ್ಯದ ಸಾಧ್ಯತೆಗಳು ವಿಷಯದ ಕುರಿತು ಸಮಗ್ರಗೋಷ್ಠಿ ನಡೆಯಿತು. ಈ ಗೋಷ್ಠಿಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹಾಗೂ  ಹಾವೇರಿ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಹಾಗೂ ರಿಜಿಸ್ಟ್ರಾರ್ ಪ್ರೊ. ಸಿದ್ದಪ್ಪ ಬಾಗಲಕೋಟೆ ಭಾಗವಹಿಸಿದರು.


ಈ ಸಂದರ್ಭದಲ್ಲಿ ಬೇರೆ ಬೇರೆ ಕಡೆಗಳಿಂದ ಆಗಮಿಸಿದ ಸಂಶೋಧನಾರ್ಥಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಂದ ಮಾನವಿಕ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಬಂಧ ಮಂಡನೆ ನಡೆಯಿತು.


ಸಮಾರೋಪ ಸಮಾರಂಭ

ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ ತುಮಕೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರವೀಂದ್ರ ಬೈಪದವು ಮಾತನಾಡಿ, ಮಾನವಿಕ ವಿಷಯಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಏಳುಬೀಳುಗಳನ್ನು ಎದುರಿಸುತ್ತಿದೆ ಹಾಗೂ ಮೌಲ್ಯಗಳನ್ನು ಕಳೆದುಕೊಳ್ಳುತ್ತಿವೆ. ಸಮಾಜ ವಿಜ್ಞಾನ ವಿಷಯಗಳ ಮೌಲ್ಯವರ್ಧನೆಯ ಜೊತೆಗೆ ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುವ ರೀತಿಯಲ್ಲಿ ಸಿಲಬಸ್ ನ ರಚನೆಗಳನ್ನು ವಿಶ್ವವಿದ್ಯಾನಿಲಯಗಳು ಅಗತ್ಯವಾಗಿ ಆಗಬೇಕಾಗಿದೆ ಎಂದರು. 


ಕಾರ್ಯಕ್ರಮವನ್ನು ಕಾಲೇಜಿನ ಐಕ್ಯೂಎಸಿ ಸಂಯೋಜಕ ಹಾಗೂ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಪ್ರಸಾದ್ ಕೆ ಎಸ್ ಸ್ವಾಗತಿಸಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿ  ಭಟ್ ವಂದಿಸಿ, ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ಪ್ರಜ್ಞಾ ಪಿ.ಪಿ ಹಾಗೂ ದೇಚಮ್ಮ ನಿರ್ವಹಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top