ಮಂದಾರ್ತಿ: "ವಿಕಸಿತ ಭಾರತವೆಂದರೆ ಅದೊಂದು ಪ್ರತಿ ಕುಟುಂಬದ ಬದುಕನ್ನು ಸಮೃದ್ಧಿಗೊಳಿಸುವ ಅಭಿಯಾನದ ಪರಿಕಲ್ಪನೆ. ವಿಕಸಿತ ಭಾರತದಲ್ಲಿ ಬಡತನ ನಿರುದ್ಯೋಗ ತೊಡೆದು ಹಾಕಿ ದೇಶದಲ್ಲಿ ಆಧುನಿಕ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವುದೇ ಸುಂದರವಾದ ಪರಿಕಲ್ಪನೆ. ಇದನ್ನು ನಾವು ಸಾಧಿಸಬೇಕಾದರೆ ನಮ್ಮಮೊದಲ ಆದ್ಯತಾ ವಲಯವಾಗಿ ಸಹಕಾರ ಕ್ಷೇತ್ರವನ್ನು ಒಪ್ಪಿಕೊಂಡು ನಡೆಯಬೇಕಾದ ಅನಿವಾರ್ಯತೆ ಇದೆ. ಬರೇ ಕೈಗಾರಿಕೆ ಉದ್ಯಮವನ್ನೇ ಬೆಳೆಸುವುದರ ಮೂಲಕ ವಿಕಸಿತ ಭಾರತದಲ್ಲಿ ಹಸಿವು ನಿರುದ್ಯೋಗ ತೊಡೆದು ಹಾಕಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯ ತಲಾ ಆದಾಯ ಹೆಚ್ಚಿಸುವಲ್ಲಿ ಈ ಸಹಕಾರ ವ್ಯವಸ್ಥೆಯನ್ನು ಗ್ರಾಮೀಣ ಮಟ್ಟದಿಂದ ಇನ್ನಷ್ಟು ವಿಸ್ತರಣೆ ಮಾಡಬೇಕಾದ ಅಗತ್ಯ ಇದೆ" ಎಂದು ಉಡುಪಿ ಎಂಜಿಎಂ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅಭಿಪ್ರಾಯಿಸಿದರು.
ಮಂದಾರ್ತಿಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಮತ್ತು ಮಂದಾರ್ತಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಉಪನ್ಯಾಸ ನೀಡಿ ಅಭಿಪ್ರಾಯಿಸಿದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಚ್. ಧನಂಜಯ ಶೆಟ್ಟಿ ಉದ್ಘಾಟನೆ ನೆರವೇರಿಸಿದರು. ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕಿ ಕೆ.ಆರ್. ಲಾವಣ್ಯ ಸಮಾರಂಭಕ್ಕೆ ಶುಭ ಹಾರೈಸಿದರು.
ಮಂದಾರ್ತಿ ಸಹಕಾರ ಸಂಸ್ಥೆಯ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಕಾರ ಸಂಸ್ಥೆಯಲ್ಲಿ ಸಾಧನೆಗೈದವರನ್ನು ಇದೇ ಸಂದರ್ಭದಲ್ಲಿ ವಿಶೇಷವಾಗಿ ಸಮ್ಮಾನಿಸಲಾಯಿತು. ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಪ್ರಸ್ತಾವನೆಗೈದು ಮಾತನಾಡಿದರು. ಅನೂಷಾ ಕೇೂಟ್ಯಾನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಇವರು ಸ್ವಾಗತಿಸಿದರು. ಮಂದಾರ್ತಿ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಶೆಟ್ಟಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ