ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ
ಹೊಸದಿಲ್ಲಿ: ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರು ಗುರುವಾರ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟ ಕಾರಣ ಗುರುವಾರ ಸಂಜೆ ಗಂಭೀರ ಸ್ಥಿತಿಯಲ್ಲಿ ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು.
ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಅವರ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆಯನ್ನೂ ಘೋಷಿಸಲಾಗಿದೆ.
1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅವರು ವಿತ್ತ ಸಚಿವರಾಗಿ ಪ್ರಾಮುಖ್ಯತೆ ಗಳಿಸಿದರು. ಆರ್ಥಿಕತೆಯನ್ನು ಅಮೂಲಾಗ್ರ ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು.
ಮಾಜಿ ಪ್ರಧಾನಿಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ಶ್ರೇಷ್ಠ ನಾಯಕನನ್ನು ಭಾರತ ಇಂದು ಕಳೆದುಕೊಂಡಿದೆ ಎಂದು ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.
ಎರಡು ಬಾರಿ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಮನಮೋಹನ ಸಿಂಗ್ ಅವರು ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ನರೇಂದ್ರ ಮೋದಿ ನಂತರ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ನಾಲ್ಕನೇ ಪ್ರಧಾನಿ ಎಂಬ ಖ್ಯಾತಿಗೆ ಪಾತ್ರರಾದವರು ಅವರು.
ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಕೊನೆಗೊಂಡಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು.
ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು. ಸಿಂಗ್ ಅವರು ಭಾರತದ ಹಣಕಾಸು ಸಚಿವರಾಗಿ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ. ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ