ಉಜಿರೆ: ಉಜಿರೆಯ ಶ್ರೀ ಧ. ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ಮಂಗಳೂರಿನ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್, ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ, ಬೆಳ್ತಂಗಡಿಯ ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ರಕ್ತದಾನ ಶಿಬಿರ ಜ. 27ರಂದು ನಡೆಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, "ರಕ್ತದಾನವು ಶ್ರೇಷ್ಠ ದಾನವಾಗಿದೆ. ಒಬ್ಬರ ಜೀವವನ್ನು ಉಳಿಸಲು ರಕ್ತದಾನ ಬಹಳ ಮಹತ್ವದ್ದಾಗಿದೆ. ರಕ್ತದಾನದ ಮಹತ್ವವನ್ನು ಇನ್ನೊಬ್ಬರಿಗೆ ತಿಳಿಸಲು ಇಂತಹ ಕಾರ್ಯಕ್ರಮ ಅಗತ್ಯವಾಗಿದೆ" ಎಂದರು.
ಮುಖ್ಯ ಅತಿಥಿ, ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಜನಾರ್ದನ್ ಮಾತನಾಡಿ, "ವಿಜ್ಞಾನ ಎಷ್ಟೇ ಮುಂದುವರಿದಿದ್ದರೂ ರಕ್ತವನ್ನು ಉತ್ಪಾದಿಸಲು ಸಾಧ್ಯವಾಗಿಲ್ಲ. ಯಾವಾಗ ಅನಿವಾರ್ಯ ಆಗುತ್ತದೆಯೋ ಆಗ ರಕ್ತದ ಮಹತ್ವ ತಿಳಿಯುತ್ತದೆ" ಎಂದರು.
ಆಸ್ಪತ್ರೆಯ ಪಥೋಲಜಿಸ್ಟ್ ಡಾ. ವಿನೀತಾ ರಕ್ತದಾನ ಮಾಡಲು ಇರಬೇಕಾದ ಅರ್ಹತೆಗಳು ಮತ್ತು ರಕ್ತದಾನದ ಮಹತ್ವವನ್ನು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಮಾತನಾಡಿ, "ರಕ್ತದಾನ ಎನ್ನುವುದು ಸಾವು ಬದುಕಿನ ನಡುವೆ ಹೋರಾಟ ಮಾಡುವ ಅದೆಷ್ಟೋ ಜನರಿಗೆ ಜೀವ ನೀಡುವ ಪುಣ್ಯದ ಕೆಲಸ. ರಕ್ತದಾನವು ದೇಹಕ್ಕೆ ಹೊಸ ಚೈತನ್ಯ ನೀಡುತ್ತದೆ. ಸಂಶೋಧನೆಗಳ ಪ್ರಕಾರ ನಿರಂತರವಾಗಿ ರಕ್ತದಾನ ಮಾಡುವವರ ಆರೋಗ್ಯ ಇತರರಿಗೆ ಹೋಲಿಕೆ ಮಾಡಿದರೆ ಇನ್ನಷ್ಟು ಉತ್ತಮವಾಗಿರುತ್ತದೆ. ಹಾಗಾಗಿ ಇಂತಹ ಪುಣ್ಯದ ಕೆಲಸದಲ್ಲಿ ತೊಡಗಿಕೊಳ್ಳಬೇಕು" ಎಂದರು.
ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ನ ಕ್ಯಾಂಪ್ ಸಂಯೋಜಕ ಪ್ರವೀಣ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಎಸ್.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಯೋಗಾಲಯ ಮುಖ್ಯಸ್ಥ ಶಿತಿಕಂಠ ಭಟ್, ಎಸ್.ಡಿ.ಎಂ. ಕಾಲೇಜಿನ ಎನ್ನೆಸ್ಸೆಸ್ ಯೋಜನಾಧಿಕಾರಿ ದೀಪಾ ಆರ್. ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿದರು. ಸ್ವಯಂಸೇವಕಿಯರಾದ ಮಾನ್ಯ ಮತ್ತು ವರ್ಷ ಕಾರ್ಯಕ್ರಮ ನಿರೂಪಿಸಿದರು.
ಸುಮಾರು 200 ಯೂನಿಟ್ ಗಳಷ್ಟು ರಕ್ತ ಸಂಗ್ರಹಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ