ಸ್ವಾತಂತ್ರ್ಯ- ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ

Upayuktha
0

ಫೆಬ್ರವರಿ 02; ಕಿತ್ತೂರು ರಾಣಿ ಚೆನ್ನಮ್ಮ ಪುಣ್ಯ ಸ್ಮರಣೆ




ನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವ, ಸ್ವಾತಂತ್ರ್ಯಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ್ಯ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚೆನ್ನಮ್ಮನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ. ಚೆನ್ನಮ್ಮನಿಂದ ಕಿತ್ತೂರು ಪ್ರಸಿದ್ಧವಾಗಿದೆ.


ಕಿತ್ತೂರಿನ ಇತಿಹಾಸವು ಕ್ರಿ.ಶ. 1586ರಿಂದಲೇ ಆರಂಭವಾಗುತ್ತದೆ. ಮೂಲತಃ ಮಲೆನಾಡಿನ ಗೌಡ ಮನೆತನದಿಂದ ಬಂದ ಮಲ್ಲ ಹೆಸರಿನ ಸೋದರರಿಬ್ಬರು ವಿಜಾಪುರದ ಆದಿಲಶಾಹಿ ಸೈನ್ಯದಲ್ಲಿ ಸೇರಿಕೊಂಡಿದ್ದರು. ಈ ಸೋದರರಲ್ಲಿ ಹಿರಿಯ ಮಲ್ಲನಿಗೆ ‘ಶಮಶೇರ ಜಂಗಬಹಾದ್ದೂರ‘ ಎನ್ನುವ ಬಿರುದನ್ನು ಹಾಗೂ ಹುಬ್ಬಳ್ಳಿ ವಿಭಾಗದ ಸರದೇಶಮುಖಿಯನ್ನು ನೀಡಲಾಗಿತ್ತು.


ವಿಜಾಪುರದ ಪತನದ ನಂತರ ಕಿತ್ತೂರು ದೇಸಾಯಿಗಳು ತಮ್ಮ ರಕ್ಷಣೆಗಾಗಿ ಅನೇಕ ಕಾಳಗಗಳನ್ನು ಎದುರಿಸಬೇಕಾಯಿತು. ಬ್ರಿಟಿಷರು ಭಾರತದಲ್ಲಿ ಕಾಲೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ಬಹಳ ವಿಲಕ್ಷಣವಾಗಿತ್ತು. ಉತ್ತರ ಹಿಂದುಸ್ಥಾನದಲ್ಲಿ ಮೊಗಲ ಬಾದಶಾಹಿ ನಿರ್ಬಲವಾಗಿತ್ತು. ದಕ್ಷಿಣದಲ್ಲಿ ಸ್ವರಾಜ್ಯದ ವಿಸ್ತರಣೆಗಾಗಿ ಹೋರಾಡುತ್ತಿದ್ದ ಪೇಶವಾಯಿ, ಆಕ್ರಮಣಕಾರಿ ಧೋರಣೆಯ ಹೈದರಾಬಾದಿನ ನಿಜಾಮಶಾಹಿ ಹಾಗು ಮೈಸೂರಿನ ಹೈದರ್ ಅಲಿ ಇವರೆಲ್ಲರ ನಡುವೆ ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕ ಪುಟ್ಟ ಪಾಳೆಗಾರರು. ಇಂತಹ ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ ಧೋರಣೆಯ ಬ್ರಿಟಿಷ ಈಸ್ಟ ಇಂಡಿಯಾ ಕಂಪನಿಗೆ ಸುವರ್ಣಾವಕಾಶವನ್ನು ಒದಗಿಸಿತ್ತು. 


ಇಂತಹ ಸಮಯದಲ್ಲಿ ಮಲ್ಲಸರ್ಜನ ದೊರೆಯನ್ನು ಟಿಪ್ಪು ಸುಲ್ತಾನನು ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು. ಉಪಾಯದಿಂದ ತಪ್ಪಿಸಿಕೊಂಡ ದೊರೆ 1803ರಲ್ಲಿ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರಗೊಳಿಸಿದ್ದನು. 1809ರಲ್ಲಿ ಪೇಶವೆಯವರಿಗೆ ರೂ.1,75,000 ಕೊಟ್ಟು, ಅವರ ಸ್ಥಾನಿಕ ಕಾವಲು ಸೈನ್ಯದ ಖರ್ಚನ್ನು ನೀಡಿ ಅವರಿಂದ ಸನದು ಪಡೆದಿದ್ದನು. 


ಆದರೆ ಪೇಶ್ವೆಯವರು ವಿಶ್ವಾಸಘಾತ ಮಾಡಿ ಮಲ್ಲಸರ್ಜನನ್ನು ಸೆರೆ ಹಿಡಿದು 3 ವರ್ಷ ಕಾಲ ಪುಣೆಯಲ್ಲಿಟ್ಟರು. 1816ರಲ್ಲಿ ಬಿಡುಗಡೆ ಹೊಂದಿ ಮರಳುವಾಗ ದಾರಿಯಲ್ಲಿಯೆ ಮಲ್ಲಸರ್ಜನು ಕೊನೆಯುಸಿರನ್ನೆಳೆದ. ಅವನ ಮಗ ಶಿವಲಿಂಗ ರುದ್ರಸರ್ಜನು ಮರಾಠಾ ಹಾಗು ಟಿಪ್ಪು ಸುಲ್ತಾನ ಇವರ ಕಿರಿಕಿರಿ ತಪ್ಪಿಸಲು ಬ್ರಿಟಿಷರ ಜೊತೆಗೆ ಸ್ನೇಹದಿಂದಿದ್ದ. ಆದರೆ ಅದೆಂತಹ ಸ್ನೇಹ! ಪ್ರತಿ ವರ್ಷ ರೂ. 1,70,000 ಕಾಣಿಕೆ ಕೊಡುವ ಕರಾರಿನ ಮೇಲೆ ಬ್ರಿಟಿಷರು ಈ ದೊರೆಗೆ ಸನ್ನದು ನೀಡಿದರು. 


ಶಿವಲಿಂಗರುದ್ರ ಸರ್ಜನು 11 ಸೆಪ್ಟೆಂಬರ 1824 ರಂದು ವಾರಸದಾರರಿಲ್ಲದೆ ತೀರಿಕೊಂಡನು. ಈ ಎಳೆವಯಸ್ಸಿನ ದೊರೆಯ ಹೆಂಡತಿ ವೀರಮ್ಮನಿಗೆ ಆಗ 11 ವರ್ಷ ವಯಸ್ಸು! ಮರಣದ ಪೂರ್ವದಲ್ಲಿ ಶಿವಲಿಂಗರುದ್ರಸರ್ಜ ಮಾಸ್ತಮರಡಿ ಗೌಡರ ಪುತ್ರ ಶಿವಲಿಂಗಪ್ಪನನ್ನು ದತ್ತಕ ತೆಗೆದುಕೊಂಡ. ಈ ದತ್ತಕವನ್ನು ಧಾರವಾಡದ ಕಲೆಕ್ಟರ ಥ್ಯಾಕರೆ ತಿರಸ್ಕರಿಸುತ್ತಾನೆ!13 ಸೆಪ್ಟೆಂಬರ 1824ರಂದು ಥ್ಯಾಕರೆ ಸ್ವತಃ ಕಿತ್ತೂರಿಗೆ ಬಂದು ಕಂಪನಿ ಸರ್ಕಾರದಿಂದ ಮುಂದಿನ ಆದೇಶ ಬರುವವರೆಗೂ ತಾತ್ಕಾಲಿಕವಾಗಿ ಮಲ್ಲಪ್ಪಶೆಟ್ಟಿ ಹಾಗು ಹಾವೇರಿ ವೆಂಕಟರಾವ ಇವರನ್ನು ಸಂಸ್ಥಾನದ ವ್ಯವಹಾರ ನಿರ್ವಹಿಸಲು ನೇಮಕ ಮಾಡುತ್ತಾನೆ ಹಾಗು ಕಿತ್ತೂರಿನ ಭಂಡಾರಕ್ಕೆ ಬೀಗ ಮುದ್ರೆ ಹಾಕುತ್ತಾನೆ.


ಆದರೆ ಇದನ್ನು ಕೆಚ್ಚೆದೆಯಿಂದ ಎದುರಿಸಿದವಳು ಮೃತ ಶಿವಲಿಂಗರುದ್ರಸರ್ಜನ ಮಲತಾಯಿ ಚೆನ್ನಮ್ಮ.ಚೆನ್ನಮ್ಮ ಹುಟ್ಟಿದ್ದು 1778ರಲ್ಲಿ. ಬೆಳಗಾವಿಯಿಂದ ಉತ್ತರಕ್ಕೆ ಸುಮಾರು 6 ಕಿ.ಮಿ. ದೂರದಲ್ಲಿರುವ ಕಾಕತಿ ಅವಳ ಹುಟ್ಟೂರು. ತಂದೆ ಕಾಕತಿಯ ದೇಸಾಯಿ ಧೂಳಪ್ಪಗೌಡರು. ಚನ್ನಮ್ಮ ಎಳೆ ವಯಸ್ಸಿನಲ್ಲಿಯೆ ಕುದುರೆ ಸವಾರಿ ಹಾಗು ಬಿಲ್ಲುವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದಳು. ಈ ಕಠಿಣ ಪರಿಸ್ಥಿತಿಯಲ್ಲಿ ಎದೆಗುಂದದೆ ಅವಳು ರಾಜನಿಷ್ಠರಾದ ಗುರುಸಿದ್ದಪ್ಪ, ಹಿಮ್ಮತಸಿಂಗ, ನರಸಿಂಗರಾವ, ಗುರುಪುತ್ರ ಮತ್ತು ಇತರ ಬೆಂಬಲಿಗರ ನೆರವಿನಿಂದ ತನ್ನ ದತ್ತಕ ಮೊಮ್ಮಗನಿಗೆ ಪಟ್ಟಗಟ್ಟಿದಳು.


ಕಿತ್ತೂರಿನ ಮೇಲೆ ಬ್ರಿಟಿಷರು ಮಾಡಬಹುದಾದ ಆಕ್ರಮಣವನ್ನು ತಪ್ಪಿಸಲು ಚೆನ್ನಮ್ಮ ಥ್ಯಾಕರೆಗೆ, ಮನ್ರೋನಿಗೆ ಹಾಗು ಚಾಪ್ಲಿನ್ನನಿಗೂ ಸಹ ಸಂಧಾನಕ್ಕಾಗಿ ಪತ್ರ ಬರೆದಿದ್ದಾಳೆ. ಅದರೆ ಬ್ರಿಟಿಷರು ಕಿತ್ತೂರಿನ ಒಡೆತನವನ್ನೆ ಅಪೇಕ್ಷಿಸಿದಾಗ, ಚೆನ್ನಮ್ಮ ಮುಂದಾಲೋಚನೆಯಿಂದ ಕೊಲ್ಲಾಪುರ ಮೊದಲಾದ ನೆರೆಯ ಸಂಸ್ಥಾನಗಳ ಸಹಾಯ ಕೋರಿ ಪತ್ರವ್ಯವಹಾರ ಸಹ ಮಾಡಿದ್ದಾಳೆ. 21 ಅಕ್ಟೋಬರ 1824ರಂದು ಥ್ಯಾಕರೆ ಕಿತ್ತೂರಿಗೆ ಬಂದನು. 


ಮೂರನೆಯ ದಿನ ಅಂದರೆ ಅಕ್ಟೋಬರ 23 ರಂದು ಕೋಟೆಯ ಮೇಲೆ ತೋಪು ಹಾರಿಸಲು ತನ್ನ ಸೈನ್ಯಕ್ಕೆ ಅಪ್ಪಣೆ ಕೊಟ್ಟ. ಥಟ್ಟನೆ ತೆಗೆದ ಕೋಟೆಯ ಬಾಗಿಲಿನಿಂದ ಸಾವಿರಾರು ಜನ ಕಿತ್ತೂರು ವೀರರು ಸರದಾರ ಗುರುಸಿದ್ದಪ್ಪನವರ ಮುಂದಾಳ್ತನದಲ್ಲಿ ಥ್ಯಾಕರೆಯ ಸೈನ್ಯದ ಮೆಲೆ ಮುಗಿಬಿದ್ದರು. ಚೆನ್ನಮ್ಮ ರಾಣಿಯ ಅಂಗರಕ್ಷಕ ಅಮಟೂರು ಬಾಳಪ್ಪನ ಗುಂಡಿಗೆ ಥ್ಯಾಕರೆ ಬಲಿಯಾದ. ಸ್ಟೀವನ್ಸನ್ ಹಾಗು ಈಲಿಯಟ್ ಸೆರೆಯಾಳಾದರು. ದೇಶದ್ರೋಹಿಗಳಾದ ಕನ್ನೂರು ವೀರಪ್ಪ, ಸರದಾರ ಮಲ್ಲಪ್ಪ ಅವರೂ ಬಲಿಯಾದರು.


ಚೆನ್ನಮ್ಮನಿಗೆ ಹಾಗು ಬ್ರಿಟಿಷರಿಗೆ ಮತ್ತೆ ಪತ್ರವ್ಯವಹಾರ ನಡೆಯುತ್ತದೆ. 1824ಡಿಸೆಂಬರ್2 ರಂದು ಸ್ಟೀವನ್ಸನ್ ಹಾಗು ಈಲಿಯಟ್ ಇವರ ಬಿಡುಗಡೆಯಾಗುತ್ತದೆ. ಆದರೆ ಮಾತಿಗೆ ತಪ್ಪಿದ ಬ್ರಿಟಿಷರು ಡಿಸೆಂಬರ್ 3 ರಂದು ಅಪಾರ ಸೈನ್ಯದೊಂದಿಗೆ ಮುತ್ತಿಗೆ ಹಾಕಿ ಕೋಟೆಯನ್ನು ಒಡೆಯಲು ಪ್ರಾರಂಭಿಸುತ್ತಾರೆ. ಡಿಸೆಂಬರ್ 4 ರಂದು ಸರದಾರ ಗುರುಸಿದ್ದಪ್ಪ ಸೆರೆಯಾಳುಗುತ್ತಾರೆ. 


ಡಿಸೆಂಬರ್5 ರಂದು ಚೆನ್ನಮ್ಮ ತನ್ನ ಸೊಸೆಯರಾದ ವೀರಮ್ಮ ಮತ್ತು ಜಾನಕಿಬಾಯಿಯರ ಜೊತೆಗೆ ಕೈದಿಯಾಗುತ್ತಾಳೆ. ಡಿಸೆಂಬರ್12 ರಂದು ಚೆನ್ನಮ್ಮ ಹಾಗು ವೀರಮ್ಮರನ್ನು ಬೈಲಹೊಂಗಲಕ್ಕೆ ಒಯ್ಯಲಾಗುತ್ತದೆ. ಅಲ್ಲಿ 4 ವರ್ಷಗಳವರೆಗೆ ಸೆರೆಯಾಳಾಗಿ ಉಳಿದ ಚೆನ್ನಮ್ಮ 1825 ಫೆಬ್ರುವರಿ 2ರಂದು ನಿಧನಹೊಂದುತ್ತಾಳೆ. ಮುಂದೆ ಮೇ 20ರಂದು ಜಾನಕಿಬಾಯಿ ನಿಧನಳಾಗುತ್ತಾಳೆ.


ಆದರೆ ದೇಶ ನಿಷ್ಠರ ಹೋರಾಟ ನಿಂತಿರುವುದಿಲ್ಲ. ಕಾಳಗದಲ್ಲಿ ಸೆರೆ ಸಿಕ್ಕು ಆ ಮೇಲೆ ಬಿಡುಗಡೆಯಾದ ಸಂಗೊಳ್ಳಿ ರಾಯಣ್ಣ 1829ರಲ್ಲಿ ಹೋರಾಟ ಮುಂದುವರೆಸುತ್ತಾನೆ. ಇವನ ಹೋರಾಟಕ್ಕೆ ನೆರವು ನೀಡುತ್ತಿರುವ ಸಂಶಯದ ಮೇಲೆ ವೀರಮ್ಮನನ್ನು ಬ್ರಿಟಿಷರು ಮೊದಲು ಕುಸುಗಲ್ಲಿಗೆ, ಆ ಬಳಿಕ ಬೇರೊಂದು ಸ್ಥಳಕ್ಕೆ ಒಯ್ಯುತ್ತಾರೆ. ಇತ್ತ ರಾಯಣ್ಣನ ಹೋರಾಟ ಮುಂದುವರೆದಿರುತ್ತದೆ.


ವಿಶ್ವಾಸದ್ರೋಹಿಗಳು ಇವನ ಸಂಗಡಿಗರಂತೆ ನಟಿಸುತ್ತ 1830 ಫೆಬ್ರುವರಿಯಲ್ಲಿ ಇವನನ್ನು ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಕಂಪನಿ ಸರಕಾರ ಈ ಕಾರ್ಯಕ್ಕಾಗಿ ಲಿಂಗನಗೌಡ ಮತ್ತು ವೆಂಕನಗೌಡರಿಗೆ 300 ರೂಪಾಯಿ ಬಹುಮಾನ ಕೊಡುತ್ತದೆ. ಮೇ 1830 ರಲ್ಲಿ ದತ್ತುಪುತ್ರ ಶಿವಲಿಂಗಪ್ಪ ಹಾಗು ಇತರ 400 ಜನರು ಬ್ರಿಟಿಷರಿಗೆ ಸ್ವಯಂ ಸೆರೆಯಾಗುತ್ತಾರೆ. 


ಜುಲೈ 1830ರಂದು ವೀರಮ್ಮ ಸೆರೆಮನೆಯಲ್ಲಿ ಮರಣ ಹೊಂದುತ್ತಾಳೆ. ವಿಷ ತೆಗೆದುಕೊಂಡು ಮರಣ ಹೊಂದಿದಳೆಂದೂ, ಇಂಗ್ಲಿಷರೆ ವಿಷ ಹಾಕಿ ಕೊಂದರೆಂದೂ ಪ್ರತೀತಿಯಿದೆ. 1831 ಜನೆವರಿ 26 ರಂದು ಸಂಗೊಳ್ಳಿ ರಾಯಣ್ಣನನ್ನು ನಂದಗಡದಲ್ಲಿ ಗಲ್ಲಿಗೇರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top