ದಡಾರ-ರೂಬೆಲ್ಲಾ ಲಸಿಕೆ ಹಾಕಿಸಿ: ಡಾ.ಹನುಮಂತಪ್ಪ

Upayuktha
0



ಬಳ್ಳಾರಿ: ನಿರ್ಲಕ್ಷಿಸಿದರೆ ಅಪಾಯಕಾರಿಯಾಗುವ ದಡಾರವನ್ನು ತಡೆಯಲು ಮಗುವಿನ ವಯಸ್ಸು ಒಂಬತ್ತು ತಿಂಗಳು ತುಂಬಿದ ನಂತರ ತಪ್ಪದೇ ದಡಾರ-ರೂಬೆಲ್ಲಾ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನ ಮಾರ್ಗದರ್ಶನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾಯಾದ್ಯಂತ ದಡಾರ ಪ್ರಕರಣಗಳು ಈ ಪೂರ್ವದಲ್ಲಿ ವರದಿಯಾದ ಗ್ರಾಮ, ಬಡಾವಣೆಗಳನ್ನು ಗುರಿಯಾಗಿಟ್ಟುಕೊಂಡು ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಂಡ ಹಿನ್ನಲೆಯಲ್ಲಿ ನಗರದ ಗುಗ್ಗರಹಟ್ಟಿ, ಕಾರ್ಕಲತೋಟ ಕೌಲ್‌ಬಜಾರ್, ಆಶ್ರಯ ಕಾಲೋನಿಗಳಲ್ಲಿ ಲಸಿಕಾ ಕಾರ್ಯ ಪರಿಶೀಲಿಸಿ ಅವರು ಮಾತನಾಡಿದರು.


ಸಾಮಾನ್ಯವಾಗಿ ಬೇಸಿಗೆಯಲ್ಲಿ ಬೆವರುಸಾಲೆಯಿಂದ ದೇಹದ ಮೇಲೆ ನುಚ್ಚು ಗುಳ್ಳೆಗಳು ಕಂಡು ಬರುವುದು ಸಹಜವಾಗಿದ್ದು, ಇದೇ ರೀತಿ ಕಂಡು ಬರುವ ದಡಾರ ಸೋಂಕು ಹರಡುವ ಮೈತುಂಬಾ ನುಚ್ಚು ಗುಳ್ಳೆಗಳ ಹಾಗೂ ಅಂತಹ ಮಕ್ಕಳಿಗೆ ಕೆಮ್ಮು, ಜ್ವರ, ಮೂಗಿನಿಂದ ಸುರಿಯುವುದು ಕಂಡು ಬಂದು ಆರೋಗ್ಯದಲ್ಲಿ ಗಂಭೀರ ಪರಿಣಾಮ ಉಂಟಾಗಬಹುದು. ಮುಂಜಾಗೃತೆಗಾಗಿ ಮಕ್ಕಳಿಗೆ ದಡಾರ-ರೂಬೆಲ್ಲಾ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು. 


ಸಮುದಾಯದಲ್ಲಿ ಅಮ್ಮ, ತಟ್ಟು ಎಂದು ಕರೆಯಲ್ಪಡುವ ದಡಾರ ರೋಗವು ವೈರಸ್‌ನಿಂದ ಹರಡುತ್ತದೆ. ಸೋಂಕು ಹೊಂದಿದ ವ್ಯಕ್ತಿಯಿಂದ ವ್ಯಕ್ತಿ ಸಂಪರ್ಕದ ಮೂಲಕ ಕೆಮ್ಮು ಮತ್ತು ಸೀನುವಿಕೆಯಿಂದ ಇನ್ನೊಬ್ಬರಿಗೆ ಹರಡುತ್ತದೆ. ರೋಗವನ್ನು ನಿರ್ಲಕ್ಷಿಸಿದಲ್ಲಿ ಮಾರಣಾಂತಿಕವಾಗಬಹುದು. ಹಾಗಾಗಿ ಸಾರ್ವಜನಿಕರು ತಮ್ಮ ಮಕ್ಕಳಿಗೆ 9 ತಿಂಗಳು ತುಂಬಿದ ನಂತರ ಹಾಗೂ ಒಂದುವರೆ ವರ್ಷದ ಅವಧಿಯಲ್ಲಿ ತಪ್ಪದೆ ಲಸಿಕೆ ಹಾಕಿಸಿ ಎಂದು ವಿನಂತಿಸಿದರು.


ವಿಶ್ವ ಆರೋಗ್ಯ ಸಂಸ್ಥೆಯ ಸರ್ವೇಕ್ಷಣಾ ವೈದ್ಯಾಧಿಕಾರಿ ಡಾ.ಆರ್.ಎಸ್ ಶ್ರೀಧರ ಅವರು ಮಾತನಾಡಿ, ದಡಾರ ಸೋಂಕಿತ ವ್ಯಕ್ತಿಗೆ ಸುಮಾರು 10 ದಿನಗಳ ನಂತರ ದಡಾರದ ಲಕ್ಷಣಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ. ದಡಾರದ ಅತ್ಯಂತ ಪ್ರಮುಖ ಲಕ್ಷಣವೆಂದರೆ ಕೆಂಪು ಬಣ್ಣದ ದದ್ದು (ಗುಳ್ಳೆ), ಆದರೆ ಇದು ಸಾಮಾನ್ಯವಾಗಿ ಮೊದಲ ಲಕ್ಷಣವಲ್ಲ. ದಡಾರವು ಸಾಮಾನ್ಯವಾಗಿ ಜ್ವರ ತರಹದ ಕಾಯಿಲೆಯಾಗಿ ಪ್ರಾರಂಭವಾಗುತ್ತದೆ. 2 ರಿಂದ 4 ದಿನಗಳವರೆಗೆ ಇರುತ್ತದೆ ಎಂದು ತಿಳಿಸಿದರು. 


ಲಕ್ಷಣಗಳು:-ಜ್ವರ, ಆಯಾಸ, ತೀವ್ರ ಕೆಮ್ಮು, ಕಾಂಜಂಕ್ಟಿವಿಟಿಸ್ (ಕೆಂಪು ಕಣ್ಣುಗಳು), ಸ್ರವಿಸುವ ಮೂಗು, ಬಾಯಿಯಲ್ಲಿ ಬಿಳಿ ಚುಕ್ಕೆಗಳು (ಕೊಪ್ಲಿಕ್ ಚುಕ್ಕೆಗಳು ಎಂದು ಕರೆಯಲಾಗುತ್ತದೆ) ಇವು ಅನಾರೋಗ್ಯದ 3 ರಿಂದ 7 ದಿನಗಳಲ್ಲಿ ದದ್ದು ಕಾಣಿಸಿಕೊಳ್ಳುತ್ತದೆ. ಇದು ಸಾಮಾನ್ಯವಾಗಿ ಕೆಂಪು ಮತ್ತು ಮಚ್ಚೆಯಿಂದ ಕೂಡಿರುತ್ತದೆ, ಆದರೆ ತುರಿಕೆ ಇರುವುದಿಲ್ಲ ಎಂದು ಅವರು ವಿವರಿಸಿದರು.


ದಡಾರದ ದದ್ದು ಸಾಮಾನ್ಯವಾಗಿ ತಲೆಯ ಮೇಲೆ ಪ್ರಾರಂಭವಾಗುತ್ತದೆ ಮತ್ತು ನಂತರ ದೇಹದ ಉಳಿದ ಭಾಗಗಳಿಗೆ ಹರಡುತ್ತದೆ. ಇದು ಸಾಮಾನ್ಯವಾಗಿ 4 ರಿಂದ 7 ದಿನಗಳವರೆಗೆ ಇರುತ್ತದೆ. ಒಂದು ವೇಳೆ ನಿರ್ಲಕ್ಷಿಸಿದರೆ ವಾಂತಿ-ಭೇದಿ, ನ್ಯೂಮೋನಿಯಾ ಉಂಟಾಗಿ ಮಗು ಮರಣ ಸಹ ಹೊಂದಬಹುದು. ಈ ಹಿನ್ನಲೆಯಲ್ಲಿ ಪ್ರಸ್ತುತ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಹೆಚ್ಚುವರಿಯಾಗಿ ಒಂದು ಡೊಸ್ ಲಸಿಕೆ ಹಾಗೂ ಇದರೊಂದಿಗೆ ವಿಟಾಮಿನ್-ಎ ಅನ್ನಾಂಗ ದ್ರಾವಣ ಸಹ ನೀಡಲಾಗುತ್ತಿದ್ದು, ತಪ್ಪದೇ ಹಾಕಿಸಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ಡಾ.ಕಾಶಿಪ್ರಸಾದ್, ಡಾ.ಶಗುಪ್ತಾ ಶಾಹೀನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂಜುಳಾ, ನಾಗಲಕ್ಷ್ಮಿ, ಜ್ಯೋತಿ, ಆರೋಗ್ಯ ನಿರೀಕ್ಷಣಾಧಿಕಾರಿ ಈರಯ್ಯ, ಮುದಸ್ಸೀರ್ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top