ಮಂಗಳೂರು: ಗ್ರಾಮೀಣ ಜನರ ಬದುಕಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ ಅವುಗಳ ನಿವಾರಣೆಗೆ ಹೊಸ ತಂತ್ರಜ್ಞಾನವನ್ನು ಆವಿಷ್ಕಾರ ಮಾಡಲು ಮುಂದಾಗಬೇಕು. ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಕಂಪನಿಗಳಲ್ಲಿ ಕೆಲಸ ಮಾಡುವುದಕ್ಕಿಂತಲೂ ಮುಖ್ಯವಾಗಿ ತಮ್ಮದೇ ಆದ ಸ್ಟಾರ್ಟ್ –ಅಪ್ಗಳನ್ನು ಅಭಿವೃದ್ಧಿಗೊಳಿಸಬೇಕೆಂಬ ಧ್ಯೇಯವಿರಬೇಕು ಎಂದು ಸೆಕ್ಷನ್ ಇನ್ಫಿನ್ -8 ಫೌಂಡೇಶನ್ ನ ಸಿಇಒ ಅರವಿಂದ್ ಕುಮಾರ್ ಹೇಳಿದರು.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಎಐಸಿಟಿಇ ಐಡಿಯಾ ಲ್ಯಾಬ್ ಸಹಯೋಗದೊಂದಿಗೆ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಐಟಿಐ ವಿದ್ಯಾರ್ಥಿ ಗಳಿಗೆ ಶುಕ್ರವಾರ ಆಯೋಜಿಸಿದ್ದ ‘ಇನ್ನೊವೇಶನ್ ಫೇರ್ʼ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರ್ಥಿಕ ಸಹಾಯ, ಮಾರ್ಕೆಟಿಂಗ್ ಇತ್ಯಾದಿಗಳ ಬಗ್ಗೆ ಗಮನ ಹರಿಸಿ ಕಂಪನಿ ಸ್ಥಾಪನೆಗೆ ಮುಂದಾಗುವುದು ಅಗತ್ಯ ಎಂದರು.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಉಪ ಪ್ರಾಂಶುಪಾಲ ಡಾ|ಪುರುಸೋತ್ತಮ ಚಿಪ್ಪಾರ್ ಅವರು ಮಾತನಾಡಿ, ಕೈಗಾರಿಕೆ ಮತ್ತು ಸಂಶೋಧನಾ ಸಹಯೋಗಗಳು ಉತ್ತಮ ಯೋಜನಾ ಸಂಬಂಧಿ ಆಲೋಚನೆಗಳನ್ನು ಉಂಟುಮಾಡುತ್ತವೆ. ಇವತ್ತಿನ ಆಲೋಚನೆಗಳು ಮುಂದಿನ ಯೋಜನೆಗಳನ್ನು ಕೈಗೊಳ್ಳಲು ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಅಗತ್ಯ ತರಬೇತಿ ಮತ್ತು ನೆಟ್ವರ್ಕಿಂಗ್ ಅವಕಾಶಗಳೊಂದಿಗೆ ಸಬಲೀಕರಣಗೊಳ್ಳಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಮಾತನಾಡಿ ಗತಕಾಲದ ಜೀವನ ಶೈಲಿ ಸಂಪೂರ್ಣವಾಗಿ ಬದಲಾವಣೆ ಹೊಂದಿದೆ. ದೇಶವು ಯುವ ಜನರ ಪ್ರತಿಭೆಯ ಮೇಲೆ ಸಾಕಷ್ಟು ಭರವಸೆಗಳನ್ನು ಇಟ್ಟುಕೊಂಡಿದೆ. ಇಂದಿನ ಗ್ರಾಮೀಣ ಭಾಗದ ಜನರ ಆಶೋತ್ತರಗಳನ್ನು ಮುಂದಿಟ್ಟು ಆಧುನಿಕ ತಂತ್ರಜ್ಞಾನ ಮತ್ತು ಉದ್ಯಮಗಳನ್ನು ಅಭಿವೃದ್ಧಿಗೊಳಿಸಬೇಕು ಎಂದರು.
ನಂತರ ನಡೆದ ವಿಷಯ ತಜ್ಞರ ಸಮಿತಿ ಚರ್ಚೆಯಲ್ಲಿ ಎಮ್ಎಸ್ಎಂಇ ಜಂಟಿ ನಿರ್ದೇಶಕ ದೇವರಾಜ್.ಕೆ ಅವರು ಸರ್ಕಾರದ ಯೋಜನೆಗಳು, ಆರ್ಥಿಕ ಅನುದಾನಗಳ ಬಗ್ಗೆ ವಿವರಿಸಿದರು. ಸಸ್ಯಾನಿಯ ವ್ಯವಸ್ಥಾಪಕ ನಿರ್ದೇಶಕಿ ಡಾ| ರಂಜನಿ ಚಿತ್ರಾಪುರ ಅವರು ಸ್ಟಾರ್ಟ್ – ಅಪ್ಗಳ ಸ್ಥಾಪನೆ ತಯಾರಿಸಿದ ವಸ್ತುಗಳ ಮಾರ್ಕೆಟಿಂಗ್ ಬಗ್ಗೆ ಮಾಹಿತಿ ನೀಡಿದರು.
ಡಾ| ಚಿಪ್ಪಾರ್ ಅವರು ಕಾಲೇಜುಗಳಲ್ಲಿ ಪ್ರಾಜೆಕ್ಟ್ಗಳ ಆಯ್ಕೆ, ಅವುಗಳನ್ನು ಕೈಗಾರಿಕೆಗೆ ಅನುವು ಮಾಡುವ ಬಗ್ಗೆ ಪ್ರಯತ್ನಗಳು, ಯಾವ ರೀತಿಯಲ್ಲಿ ಸಂಸ್ಥೆಗಳು ಇವುಗಳನ್ನು ಕಾರ್ಯಗತ ಗೊಳಿಸಬಹುದು ಎಂದು ತಮ್ಮ ಅನಿಸಿಕೆಗಳನ್ನು ಹೇಳಿದರು. ಡಾ| ವಿಜಯ್ ವಿ.ಎಸ್. ಸಮನ್ವಯಕಾರರಾಗಿದ್ದರು.
ಕಾರ್ಯಕ್ರಮದ ಅಂಗವಾಗಿ ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಐಟಿಐ ವಿದ್ಯಾರ್ಥಿಗಳಿಗೆ ಮಾದರಿಗಳ ಮತ್ತು ಪ್ರಾತ್ಯಕ್ಷಿಕೆಗಳ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವೈಜ್ಞಾನಿಕಾಧಿಕಾರಿ ವಿಘ್ನೇಶ್ ಭಟ್ ಸ್ವಾಗತಿಸಿದರು. ಇನ್ನೊವೇಶನ್ ಹಬ್ನ ಮೆಂಟರ್ ಸಹನಾ ಕಾರ್ಯಕ್ರಮ ನಿರೂಪಿಸಿ, ಅಂಬಿಕಾ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ