ಸೇವೆ ಮೂಲಕ ಬದುಕನ್ನು ಸಾರ್ಥಕ ಪಡಿಸಿಕೊಳ್ಳಿ: ಗೀತಾ ದಾಮೋದರ್‌

Upayuktha
0



ಮಂಗಳೂರು: ವಿದ್ಯಾರ್ಥಿಗಳೆಲ್ಲರೂ ಒಂದೇ ಮನಸ್ಸಿನಿಂದ ಸೇವೆ ಮಾಡುವ ಮೂಲಕ ಬದುಕನ್ನು ಸಾರ್ಥಕ ಪಡಿಸಿಕೊಳ್ಳಿ. ಆ ಮೂಲಕ ದೇಶಕ್ಕೆ ನಿಮ್ಮದೇ ಕೊಡುಗೆ ನೀಡುವ ಕೆಲಸದಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಿ ಎಂದು ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ದಾಮೋದರ್‌ ಅವರು ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕೊಣಾಜೆ ಪದವು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿರುವ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು. 


ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್‌ ಸದಸ್ಯ ಅಚ್ಯುತ್‌ ಗಟ್ಟಿ, ನಾವು ಮಾಡಿದ ಸಾಧನೆ ಮಾತನಾಡಬೇಕೇ ಹೊರತು ಮಾತೇ ಸಾಧನೆಯಾಗಬಾರದು. ನುಡಿದಂತೆ ನಡೆಯಬೇಕು. ವಿದ್ಯಾರ್ಥಿ ದೆಸೆಯಲ್ಲಿಯೇ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಶಿಸ್ತು, ಬ್ರಾತೃತ್ವ, ಸಮಾನತೆ ಹಾಗೂ ಸೇವಾ ಮನೋಭಾವ ಕಲಿಸುವುದೇ ರಾಷ್ಟ್ರೀಯ ಸೇವಾ ಯೋಜನೆಯ ಪ್ರಮುಖ ಉದ್ದೇಶವಾಗಿರುತ್ತದೆ. ಸಮಾಜದಲ್ಲಿ ಮುಂದಿನ ಜನಾಂಗದ ನಾಯಕರಾಗಲು ಪ್ರೇರಣೆ ನೀಡುತ್ತದೆ ಎಂದು ಹೇಳಿದರು. 


ರಾಜ್ಯ ವಕ್ಫ್‌ ಮಂಡಳಿ ಸದಸ್ಯ ಅಬ್ದುಲ್‌ ರಹಿಮಾನ್‌ ಕೆ. ಎಸ್.‌, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದಲ್ಲಿ ಭಾಗವಹಿಸುವುದೇ ವಿಭಿನ್ನ ಅನುಭವ. ಶಿಬಿರಾರ್ಥಿಗಳೆಲ್ಲರೂ ಸೇವಾ ಮನೋಭಾವದೊಂದಿಗೆ ಸಮಾನವಾಗಿ ಎಲ್ಲರೂ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು. 


ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್‌, ಯಾವುದೇ ಜಾತಿ, ಧರ್ಮಕ್ಕೆ ಅಂಟಿಕೊಳ್ಳದೇ ಭಾರತಾಂಬೆಯ ಮಕ್ಕಳು ಎಂಬುದನ್ನು ಅರಿತು ದೇಶ ಸೇವೆ ಮಾಡಬೇಕಿದೆ. ಜಾತಿ, ಧರ್ಮ, ವರ್ಗ ಬೇಧ ಮರೆತು ಸಹಿಷ್ಣುತೆಯೊಂದಿಗೆ ಬದುಕನ್ನು ಕಟ್ಟಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು. 


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ, ಒಬ್ಬ ವ್ಯಕ್ತಿ ತನ್ನ ಬದುಕಿನಲ್ಲಿ ಏನೆಲ್ಲಾ ಕಲಿಯಲು ಸಾಧ್ಯ ಎಂಬುದನ್ನು ಈ ರಾಷ್ಟ್ರೀಯ ಸೇವಾ ಯೋಜನೆ ಕಲಿಸಿಕೊಡುತ್ತದೆ. ವಿದ್ಯಾರ್ಥಿಗಳು ಕೇವಲ ತರಗತಿಗಳಿಗೆ ಮಾತ್ರ ಸೀಮಿತವಾಗದೇ ಸಮುದಾಯದ ಜೊತೆಗೆ ಬೆರೆಯುವ ಮೂಲಕ ಸಮುದಾಯದ ಜೊತೆಗೆ ಸಂಪರ್ಕ ಸಾಧಿಸುವ ಮೂಲಕ ಪ್ರಾಯೋಗಿಕ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕು. ಇದು ಬದುಕಿನ ಯಾವುದೇ ಸಂಕಷ್ಟ ಎದುರಿಸಲು ಸಹಾಯ ಮಾಡುತ್ತದೆ. ಶ್ರಮದ ಮಹತ್ವ ಅರಿಯಲು ಶ್ರಮದಾನದಂತಹ ಕಾರ್ಯಕ್ರಮ ಸಹಕಾರಿಯಾಗುತ್ತದೆ ಎಂದರು. 


ಕಾರ್ಯಕ್ರಮದಲ್ಲಿ ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಆಡಳಿತ ಮಂಡಳಿ ಸದಸ್ಯ ಪ್ರಸಾದ್‌ ರೈ, ಜಮೀತುಲ್‌ ಫಲಹ ಉಳ್ಳಾಲ ಘಟಕದ ಅಧ್ಯಕ್ಷ ಅಬ್ದುಲ್‌ ನಾಸಿರ್‌ ಕೆ.ಕೆ., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷ ದಯಾನಂದ ಗಟ್ಟಿ, ಶಾಲೆಯ ಮುಖ್ಯೋಪಾಧ್ಯಾಯ ಸಿಲ್ವಿಯಾ ಬಿ.ಎಂ. ಮಿನೇಜಸ್‌, ಸರ್ಕಾರಿ ಪ್ರೌಢ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್‌ ಖಾದರ್‌, ವಿಶ್ವವಿದ್ಯಾನಿಲಯ ಕಾಲೇಜಿನ ಪ್ರೊ. ಜಯವಂತ ನಾಯಕ್‌, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ. ಗಾಯತ್ರಿ ಎನ್‌., ಡಾ. ಸುರೇಶ್‌ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top