ಪುತ್ತೂರು: ಪ್ರತಿಯೊಬ್ಬರೂ ಸಮಸ್ಯೆಗಳನ್ನು ಸರಿಯಾಗಿ ಗುರುತಿಸಿ ಅದಕ್ಕೆ ವಿಮರ್ಶಾತ್ಮಕ ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಚಿಂತನೆಯನ್ನು ಬೆಳೆಸಿಕೊಳ್ಳಬೇಕು, ಜೀವನದಲ್ಲಿ ನಾವು ಮಾಡುವ ಕೆಲಸವನ್ನು ಪ್ರಮಾಣಿಕವಾಗಿ ಪ್ರೀತಿಸಿ ಅದರ ಬಗ್ಗೆ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು.
ಕಾಲೇಜಿನ ಸಭಾಭವನದಲ್ಲಿ ನಡೆದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ 2023--24ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಎಂಬಿಎ ಮತ್ತು ಎಂಸಿಎ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಸ್ನಾತಕೋತ್ತರ ಪದವೀಧರರಾದ ಅರ್ಹ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮಾತಾಡಿದರು.
ನಿಮ್ಮ ಜೀವನವನ್ನು ರೂಪಿಸುವಲ್ಲಿ ಅಪಾರ ತ್ಯಾಗವನ್ನು ಮಾಡಿದ ಮಾತಾ ಪಿತರನ್ನು ಮತ್ತು ಕಲಿತ ವಿದ್ಯಾಸಂಸ್ಥೆಯನ್ನು ಸದಾ ನೆನಪಿನಲ್ಲಿಕೊಳ್ಳಿ. ಈ ಮಣ್ಣಿನ, ನೆಲ, ಜಲದ ಬಗ್ಗೆ ಪ್ರೀತಿ ಗೌರವವಿರುವ ಪ್ರಜ್ಞಾವಂತ ಪ್ರಜೆಗಳಾಗಿ ಎಂದು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ಪ್ರಸನ್ನ.ಕೆ ಮಾತನಾಡಿ, ನೀವು ಗಳಿಸಿರುವ ಪದವಿ ನಿಮ್ಮ ಆತ್ಮವಿಶ್ವಾಸದ ಮಟ್ಟವನ್ನು ಹೆಚ್ಚಿಸಿರುತ್ತದೆ. ಈ ಪದವಿ ಅವಕಾಶಗಳ ಬಾಗಿಲನ್ನು ತೆರೆಯುವ ಕೀಲಿಕೈ ಮಾತ್ರ. ದೊರೆತ ಅವಕಾಶಗಳನ್ನು ಉಳಿಸಿ ಜೀವನದಲ್ಲಿ ಹೆಚ್ಚಿನದ್ದನ್ನು ಸಾಧಿಸುವ ಗುರಿ ನಿಮ್ಮದಾಗಬೇಕು ಎಂದರು.
ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಸತ್ಯನಾರಾಯಣಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂಸಿಎ ವಿಭಾಗದ ನಿರ್ದೇಶಕಿ ಡಾ.ಜ್ಯೋತಿಮಣಿ.ಕೆ ಸ್ವಾಗತಿಸಿದರು. ಡಾ.ರಾಜೇಶ್ವರಿ.ಎಂ ಪ್ರಮಾಣವಚನ ಬೋಧಿಸಿದರು. ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಸ್ವಸ್ತಿಕಾ ಮತ್ತು ಜೋವಿಟಾ ರೀಮಾ ಡಿ’ಕೋಸ್ಟ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ