ಸಮಾಜದಲ್ಲಿ ಶಿಕ್ಷಣದಿಂದ ಬದಲಾವಣೆ ಸಾಧ್ಯ : ಯಶ್‍ಪಾಲ್ ಎ ಸುವರ್ಣ

Upayuktha
0


ಉಡುಪಿ: ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯುವಂತೆ ಹಾಗೂ ಭವಿಷ್ಯದ ಕನಸನ್ನು ನನಸು ಮಾಡುವ ಶಕ್ತಿ ಶಿಕ್ಷಣಕ್ಕೆ ಇದ್ದು, ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ನೀಡುವ ಕಾರ್ಯ ಶಿಕ್ಷಕರ ಮೇಲಿದ್ದು, ಇದನ್ನು ಜವಾಬ್ದಾರಿಯುತವಾಗಿ ಮಾಡಬೇಕು ಎಂದು ಶಾಸಕ ಯಶ್‍ಪಾಲ್ ಎ ಸುವರ್ಣ ಕರೆ ನೀಡಿದರು.  

 

ಅವರು ಬುಧವಾರ ನಗರದ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ, ಮಾರ್ಚ್ 2022-23 ಮತ್ತು 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 


ಶೈಕ್ಷಣಿಕ ವ್ಯವಸ್ಥೆಯಲ್ಲಿ ಉಡುಪಿ ಜಿಲ್ಲೆಯು ಶಿಕ್ಷಣದ ಕಾಶಿ ಎಂದೇ ಹೆಸರುವಾಸಿಯಾಗಿದೆ. ಶಿಕ್ಷಣ ಹಾಗೂ ಆರೋಗ್ಯದಲ್ಲಿ ರಾಜಿ ಮಾಡಿಕೊಳ್ಳಬಾರದು. ಜಿಲ್ಲೆಯ ಶಿಕ್ಷಕರುಗಳು ತಮ್ಮ ವೃತ್ತಿಯನ್ನು ಉತ್ತಮವಾಗಿ ನಿರ್ವಹಿಸುವುದರೊಂದಿಗೆ ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ದೊರೆತಿದೆ ಎಂದರು.


ವಿದ್ಯಾರ್ಥಿಗಳು ಇಂಜಿನಿಯರ್, ಡಾಕ್ಟರ್ ವೃತ್ತಿಗಳ ಕಡೆಗೆ ಗಮನಹರಿಸುತ್ತಿದ್ದಾರೆ. ಇದರೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಯೂ ಸಹ ಎದುರಿಸಿ, ಐ.ಎ.ಎಸ್, ಐ.ಪಿ.ಎಸ್ ನಂತಹ ಉತ್ತಮ ಹುದ್ದೆಯನ್ನು ಪಡೆದುಕೊಂಡು ಜಿಲ್ಲೆ, ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದರು. 


ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಪ್ರೌಢಶಾಲೆಗಳು ಸರ್ಕಾರ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿದೆ. ಕೆಲ ಶಾಲೆಗಳಿಗೆ ಸಂಜೆಯ ವೇಳೆಯಲ್ಲಿ ಅನಿರೀಕ್ಷತ ಭೆüೀಟಿ ನೀಡಿದಾಗಲೂ ಸಹ ವಿದ್ಯಾರ್ಥಿಗಳು ಗಂಭೀರತೆಯಿಂದ ಅಧ್ಯಯನ ಮಾಡುವುದನ್ನು ಗಮನಿಸಿದ್ದು, ಜಿಲ್ಲೆಯ ಶೈಕ್ಷಣಿಕ ಮಟ್ಟ ಹೆಚ್ಚಿಸಲು ಸಹ ಇಂತಹ ವಿಶೇಷ ತರಗತಿಗಳು ಸಹಕಾರಿಯಾಗಿವೆ ಎಂದರು.


ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಶಿಕ್ಷಕರುಗಳು ಹಲವಾರು ಆಯಾಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ, ಫಲಿತಾಂಶ ಸುಧಾರಣೆಗೆ ಶ್ರಮವಹಿಸಿದ್ದಾರೆ. ಮುಂದಿನ ವರ್ಷ ನಮ್ಮ ಗುರಿ ಏನು ಎಂಬುದನ್ನು ಈಗಿನಿಂದಲೇ ರೂಢಿಸಿಕೊಳ್ಳಬೇಕು. ಪ್ರಾರಂಭಿಕ ಹಂತದಿಂದಲೇ ಮಕ್ಕಳು ನಿಗಧಿತ ಗುರಿ ಸಾಧನೆಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರಸ್ತಕ್ತ ಸಾಲಿನಲ್ಲಿ ಪಡೆದ ಸ್ಥಾನವನ್ನು ಉಳಿಸಿಕೊಳ್ಳುವುದರೊಂದಿಗೆ ಅದನ್ನು ಮತ್ತಷ್ಟು ಹೆಚ್ಚಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು. 


ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಸ್ವಸ್ತಿ ಕಾಮತ್, ನಿಧಿ ಪೈ ಹಾಗೂ ಸಾಯಿಸ್ಪರ್ಶ ಅವರನ್ನು ಸನ್ಮಾನಿಸಲಾಯಿತು. 2022-23 ಮತ್ತು 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ಪಡೆದ ಜಿಲೆಯ 147 ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳಿಗೆ ನಗದು ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಬ್ರಹ್ಮಾವರ ತಾಲೂಕು ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಅನ್ನು ವಿತರಿಸಲಾಯಿತು


ಇದೇ ಸಂದರ್ಭದಲ್ಲಿ ಈ ತಿಂಗಳ ಅಂತ್ಯಕ್ಕೆ ನಿವೃತ್ತಿ ಹೊಂದಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಅವರನ್ನು ಸನ್ಮಾನಿಸಲಾಯಿತು. 


ಕಾರ್ಯಕ್ರಮದಲ್ಲಿ ಉಡುಪಿ, ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಕಾರ್ಕಳ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಹೆಗಡೆ, ಶಿಕ್ಷಕರ ಸಂಘದ ಪ್ರತಿನಿಧಿ ಪ್ರಭಾಕರ ಶೆಟ್ಟಿ, ಕೊಂಡಳ್ಳಿ, ಸೈಂಟ್ ಸಿಸಿಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪ್ರೀತಿ ಸಿಸ್ಟರ್, ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

 


ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಪ್ರಾಸ್ತಾವಿಕವಾಗಿ ಮಾತನಾಡಿ ಸಾಗತಿಸಿ, ಮುಖ್ಯ ಶಿಕ್ಷಕ ರಾಜೇಂದ್ರ ಭಟ್ ನಿರೂಪಿಸಿ, ವಿಷಯ ಪರಿವೀಕ್ಷಕ ನಾಗರಾಜ ಮೈರ್‍ಕೊಮೆ ವಂದಿಸಿದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top