ಮಂಗಳೂರು: ಬದಲಾದ ಜೀವನಶೈಲಿ ಹಾಗೂ ವೃತ್ತಿ ಬದುಕಿನ ಒತ್ತಡದಿಂದ ಹೆಚ್ಚಿನವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇದನ್ನು ನಿವಾರಣೆ ಮಾಡಲು ಕೆಲಸ ಮಧ್ಯೆ ಒಂದಷ್ಟು ಹೊತ್ತು ಸರಳ ಯೋಗದ ಮೂಲಕ ವಿರಾಮ ಪಡೆಯಬೇಕು. ಇದರಿಂದ ಚೇತೋಹಾರಿಯಾಗಿ ಕೆಲಸ ಮಾಡಬಹುದೆಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಕೆ. ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್ ಮತ್ತು ದ.ಕ. ಜಿಲ್ಲಾ ಆಯುಷ್ ಇಲಾಖೆ ನಗರದ ಪತ್ರಿಕಾ ಭವನದಲ್ಲಿ ಬುಧವಾರ ಜಿಲ್ಲೆಯ ಪತ್ರಕರ್ತರಿಗೆ ನಡೆದ ವಿರಾಮ ಯೋಗದ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೂ.21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗಾಗಿ ಪೂರ್ವಭಾವಿಯಾಗಿ ಸಾರ್ವಜನಿಕರಿಗೆ ಯೋಗ ತರಬೇತಿ ನೀಡಲಾಗುತ್ತಿದೆ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿಯೇ ಕುಳಿತು ಮಾಡುವ ಯೋಗಾಸನ ಹಾಗೂ ಪ್ರಾಣಾಯಾಮದ ತರಬೇತಿಗಳನ್ನು ಆಯೋಜಿಸಲಾಗುತ್ತಿದೆ. ಯೋಗಾಭ್ಯಾಸದೊಂದಿಗೆ ಪರಿಸರ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಶಾರದಾ ನ್ಯಾಚುರೋಪತಿ ಕಾಲೇಜಿನ ಕಲಿಕಾ ವೈದ್ಯೆಯರಾದ ಗಾಯತ್ರಿ ಮತ್ತು ಸುಜಿತಾ ವಿರಾಮ ಯೋಗ ಪ್ರಾತ್ಯಕ್ಷಿಕೆ ನೀಡಿದರು. ವೆನ್ಲಾಕ್ ಆಯುಷ್ ಆಸ್ಪತ್ರೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ವೈದ್ಯಾಧಿಕಾರಿ ಡಾ.ಪ್ರಕಾಶ್.ಎ.ಜೆ. ಯೋಗ ಮತ್ತು ಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು.
ಉಳ್ಳಾಲ ತಾಲೂಕು ಆಯುಷ್ ಘಟಕದ ಆಡಳಿತ ವೈದ್ಯಾಧಿಕಾರಿ ಡಾ.ಸಹನಾ ಪಿ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು. ಪ್ರೆಸ್ ಕ್ಲಬ್ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ