ಉಪಪ್ರಾಂಶುಪಾಲರಾಗಿ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ನೇಮಕ
ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಶ್ರೀಧರ ನಾಯಕ್ ಹಾಗೂ ಉಪಪ್ರಾಂಶುಪಾಲರಾಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ನೇಮಕಗೊಂಡಿದ್ದಾರೆ.
ಡಾ.ಶ್ರೀಧರ ನಾಯಕ್ ಇವರು ಸುಮಾರು 30 ವರ್ಷಗಳಿಂದ ಕಾಲೇಜಿನಲ್ಲಿ ಇತಿಹಾಸ ವಿಭಾಗದಲ್ಲಿ ಉಪನ್ಯಾಸಕರಾಗಿ, ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಬಂಧ ಮಂಡನೆಗಳನ್ನು ಮಾಡಿರುತ್ತಾರೆ. ಕಾಲೇಜಿನ ರೋವರ್ಸ್ ರೇಂಜರ್ಸ್ ತಂಡದ ಸಂಯೋಜಕರಾಗಿ, ಶ್ರವಣ ಬೆಳಗೋಳ ನಡೆಸುವ ಪ್ರಾಕೃತ ಭಾಷಾ ಡಿಪ್ಲೊಮಾ ಪರೀಕ್ಷೆಯ ಸಂಯೋಜಕರಾಗಿಯೂ ಬಹಳ ವರ್ಷ ಸೇವೆ ಸಲ್ಲಿಸಿರುವ ಇವರು "ದಿ ಸೊಸೈಟಿ ಆ್ಯಂಡ್ ಪಾಲಿಟಿಕ್ಸ್ ಇನ್ ಸೌತ್ ಕೆನರಾ" ಎನ್ನುವ ಮಹಾಪ್ರಬಂಧಕ್ಕೆ ಪಿಎಚ್.ಡಿ ಪಡೆದಿರುತ್ತಾರೆ. ಸಾಹಿತ್ಯ ಹಾಗೂ ಇತಿಹಾಸ ಸಂಬಂಧಿತ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕಾಲೇಜಿನ ಉಪಪ್ರಾಂಶುಪಾಲರಾಗಿ ನೇಮಕಗೊಂಡಿರುವ ಶ್ರೀಕೃಷ್ಣ ಗಣರಾಜ ಭಟ್ ಇವರು ಸಸ್ಯಶಾಸ್ತ್ರ ವಿಭಾಗದಲ್ಲಿ ಸುಮಾರು 30 ವರ್ಷಗಳಿಂದ ಉಪನ್ಯಾಸಕರಾಗಿ ಹಾಗೂ ವಿಭಾಗ ಮುಖ್ಯಸ್ಥ ರಾಗಿ ಸೇವೆ ಸಲ್ಲಿಸಿದ್ದಾರೆ.
ಇವರು ಎಂಫಿಲ್ ಪದವೀಧರರಾಗಿದ್ದು "ಬಯೋಡೈವರ್ಸಿಟಿ ಆಫ್ ಮೂಕಾಂಬಿಕಾ ವೈಲ್ಡ್ ಲೈಫ್ ಸಾಂಕ್ಚುರಿ ಇನ್ ಕೊಡಚಾದ್ರಿ ಹಿಲ್ಸ್" ಎನ್ನುವ ವಿಷಯದ ಮೇಲೆ ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ. ವಿಭಾಗದ ನೂರಾರು ವಿದ್ಯಾರ್ಥಿಗಳಿಗೆ ಸಸ್ಯಶಾಸ್ತ್ರ ಕುರಿತು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಪ್ರಬಂಧಗಳನ್ನು ರಚಿಸಲು ಮಾರ್ಗದರ್ಶನ ನೀಡಿರುತ್ತಾರೆ ಎಂದು ಪ್ರಕಟಣೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ