ಕಾರ್ಕಳ: ಸಾಣೂರು ಇಲ್ಲಿನ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಮತ್ತು ಪಿ.ಯು ಕಾಲೇಜು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭಗೊಂಡಿದ್ದು ರಾಜ್ಯದಾದ್ಯಂತ ವಿದ್ಯಾರ್ಥಿಗಳು ಇಲ್ಲಿ ಪ್ರವೇಶಾತಿ ಪಡೆದು ವಿಭಿನ್ನ ಕಲಿಕಾ ಪದ್ಧತಿಯಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ತವಕದಲ್ಲಿದ್ದಾರೆ.
ಇಲ್ಲಿ ಪ್ರವೇಶಾತಿ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಸೋಮವಾರ (ಜೂ.9) ಕ್ಯಾಂಪಸ್ ಆವರಣದಲ್ಲಿ ವಿದ್ಯಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ಉಡುಪಿ ಅದಮಾರು ಮಠದ ಕಿರಿಯ ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಸರಸ್ವತಿ ವಂದನೆಯ ಮುಖಾಂತರ ಆರಂಭಿಸಲಾಯಿತು. ಶ್ರೀಪಾದರು ವಿದ್ಯಾರ್ಥಿಗಳಿಗೆ ಸರಸ್ವತಿ ವಂದನೆಯ ಮುಖಾಂತರ ವಿದ್ಯಾ ಬೋಧನೆಯನ್ನು ಆರಂಭಿಸಿದರು. ಕಾರ್ಯಕ್ರಮದಲ್ಲಿ ರಾಜೇಶ್ವರಿ ನ್ಯಾಷನಲ್ ಪಿ.ಯು ಮತ್ತು ಕಾಲೇಜ್ ಇದರ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಅವರ ಕನಸಿನ ಕೂಸಾದ ಈ ಸಂಸ್ಥೆಯು ಹೇಗೆ ತನ್ನ ಆರಂಭವನ್ನು ಪಡೆಯಿತು ಎನ್ನುವುದರ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಉಪಕುಲಪತಿ ಎಂ. ಎಸ್.ಮೂಡಿತ್ತಾಯ ಮತ್ತು ಎಸ್. ಕೆ ಎಫ್. ಎಲಿಕ್ಸರ್, ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮೂಡುಬಿದಿರೆ ಇದರ ಅಧ್ಯಕ್ಷ ಡಾ. ಜಿ. ರಾಮಕೃಷ್ಣ ಆಚಾರ್ ಇವರು ಪ್ರಧಾನ ಅತಿಥಿಗಳಾಗಿ ಭಾಗವಹಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶುಭಾಶಯಗಳನ್ನು ಆಶಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶ್ವೇತ ಶೆಟ್ಟಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಧುಸೂದನ್ ರೈ, ವಿಜಯ ಬ್ಯಾಂಕಿನ ನಿವೃತ್ತ ಪ್ರಬಂಧಕ ಪ್ರದೀಪ್ ನಾಯ್ಕ್, ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್ ಅಧ್ಯಕ್ಷ ಶ್ರೀಪತಿ ಭಟ್, ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ರಶ್ಮಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ವಿದ್ಯಾರ್ಥಿಗಳ ಜೊತೆ ಕಾಲೇಜಿನ ಸಂಗೀತ ಪ್ರಾಧ್ಯಾಪಕರಾದ ಪೂರ್ಣಿಮಾ ಗೋರೆ ಅವರು ಶಾರದೆಯ ಪ್ರಾರ್ಥನೆಗೈದರು. ಹಾಗೂ ಕಾಲೇಜಿನ ಪ್ರಾಂಶುಪಾಲ ಸಚಿನ್ ಏಓ ಇವರು ಅತಿಥಿಗಳಿಗೆ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಅಧ್ಯಾಪಕ ಸಮೂಹವನ್ನು ಉಲ್ಲೇಖಿಸಿ ಧನ್ಯವಾದ ಸಮರ್ಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ