ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ ನೇತೃತ್ವ
ಮಂಗಳೂರು: ನಗರದ ಕುದ್ಮುಲ್ ರಂಗರಾವ್ ಪುರಭವನ ಕಡೆಯಿಂದ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ತೆರಳುವ ರಸ್ತೆಗೆ ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣ ಲಕವನ್ನು ಮಂಗಳೂರು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಆಗಸ್ಟ್ 10ರಂದು ಅನಾವರಣಗೊಳಿಸಿದರು.
ಮಂಗಳೂರಿನ ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ನಾಮಕರಣ ಲಕವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಂಗಳೂರು ನಗರದಲ್ಲಿ ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣ ಲಕವನ್ನು ಅನಾವರಣಗೊಳಿಸುವ ಮೂಲಕ ಮಂಗಳೂರಿಗೆ ಇವತ್ತು ಐತಿಹಾಸಿಕ ದಿನವಾಗಿದೆ. ಬ್ರಿಟಿಷರ ದಾಸ್ಯದಿಂದ ದೇಶವನ್ನು ಬೇರ್ಪಡಿಸಿ ಎಲ್ಲರನ್ನು ಒಗ್ಗೂಡಿಸಿದ ಸ್ವಾತಂತ್ರ್ಯ ಯೋಧ ಡಾ. ಬಾಳಪ್ಪರ ಜೀವನ ನಮಗೆಲ್ಲ ಆದರ್ಶ ಹಾಗೂ ಪ್ರೇರಣೆ ಎಂದು ಹೇಳಿದರು.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಸ್ವಾತಂತ್ರ್ಯ ಬಂದು 77 ವರ್ಷವಾದರೂ ಡಾ. ಬಾಳಪ್ಪರಂತಹ ಸ್ವಾತಂತ್ರ್ಯ ಯೋಧರ ಹೆಸರು ಎಲ್ಲೂ ಪ್ರಸ್ತಾಪವಾಗದೆ ಇರುವುದು ಬೇಸರದ ಸಂಗತಿ. ಈ ಸಂದರ್ಭದಲ್ಲಿ ಮಂಗಳೂರಿನ ಹೃದಯಭಾಗದಲ್ಲಿ ತುಳುನಾಡಿನ ಕುವರ ಡಾ. ಬಾಳಪ್ಪರ ಹೆಸರನ್ನು ರಸ್ತೆಗೆ ಇಡುವ ಮೂಲಕ ಮುಂದಿನ ತಲೆಮಾರಿಗೆ ಡಾ ಬಾಳಪ್ಪರ ಜೀವನ ಸಾಧನೆಯ ಬಗ್ಗೆ ನೆನಪಿಸುವ ಕಾರ್ಯವಾಗಿದೆ, ಇದೊಂದು ಅರ್ಥಪೂರ್ಣ ಹಾಗೂ ನಮ್ಮೆಲ್ಲರಿಗೆ ಹೆಮ್ಮೆಯ ಕ್ಷಣ ಎಂದು ಹೇಳಿದರು.
ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ ಸಮಾಜದಲ್ಲಿ ಶೋಷಿತರ, ದುರ್ಬಲರ ಅವಕಾಶವಂಚಿತರ ಗೇಣಿದಾರರ ಪರ ಧ್ವನಿಯಾಗಿ ಹೋರಾಟ ಮಾಡಿದಂತ ಧೀಮಂತ ನಾಯಕ ಡಾ. ಅಮ್ಮೆಂಬಳ ಬಾಳಪ್ಪರ ನಾಮಕರಣ ಲಕ ಅನಾವರಣ ಮಾಡಿದ್ದು ಬಂಟ್ವಾಳದ ಜನತೆಗೆ ಸಂದ ಗೌರವ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಲಾಲ ಕುಂಬಾರರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮಾತನಾಡಿ, ಮುಂದಿನ ದಿನಗಳಲ್ಲಿ ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ಗೆ ಕೂಡ ಡಾ. ಅಮ್ಮೆಂಬಳ ಬಾಳಪ್ಪರ ಹೆಸರನ್ನು ಇಡುವಂತೆ ಜನ ಪ್ರತಿನಿಧಿಗಳಿಗೆ ಮನವಿ ಮಾಡಿದರು.
ಡಾ. ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣದ ಅನುಮತಿಗಾಗಿ ಸರಕಾರ ಮಟ್ಟದಲ್ಲಿ ಪ್ರಯತ್ನಿಸಿದ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಾಜಿ ಮೇಯರ್ ದಿವಾಕರ ಪಾಂಡೇಶ್ವರ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಇನಾಯತ್ ಆಲಿ, ಜಿಲ್ಲಾ ಪಂ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ನಿವೃತ್ತ ಕಮಂಡೆಂಟ್ ಚಂದಪ್ಪ ಮೂಲ್ಯ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮಾಜಿ ಕಾರ್ಪೋರೇಟರ್ ರೂಪ ಡಿ. ಬಂಗೇರ, ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಅಧ್ಯಕ್ಷ ಸುಂದರ ಕುಲಾಲ್, ಪೊಲೀಸ್ ಲೇನ್ನಲ್ಲಿರುವ ಶ್ರೀ ದೇವಿ ದೇವಸ್ಥಾನದ ಅಧ್ಯಕ್ಷ ಸದಾಶಿವ ಕುಲಾಲ್, ಬಂಟ್ವಾಳ ಸಮಾಜ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕುಲಾಲ, ಉಪಾಧ್ಯಕ್ಷ ಜನಾರ್ದನ ಬೊಂಡಲ,ಶ್ರೀ ವೀರನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಪ್ರೇಮಾನಂದ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.
ಸಹಭಾಗಿತ್ವವನ್ನು ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ವಹಿಸಿದ್ದವು. ನವೀನ್ ಪುತ್ತೂರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ಅಭಿನಂದನಾ ಸಮಾರಂಭ ಹಾಗೂ ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


