ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ ಭೇಟಿ
ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.
ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾ ಸಂಭ್ರಮದಲ್ಲಿ ಜನರು ಭಕ್ತಿಭಾವದಿಂದ ತಲ್ಲೀನರಾಗಿರುವಾಗ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದರು.
ದೇವರ ಬಲಿ ಉತ್ಸವದ ಶುಭ ಸಂಧರ್ಭದಲ್ಲಿ ದೇವಸ್ಥಾನ ಪ್ರವೇಶಿಸಿದ ಉಪಮುಖ್ಯಮಂತ್ರಿಗಳು, ಸಂಪ್ರದಾಯದಂತೆ ದೇವರ ರಥಾರೋಹಣ ನಂತರ ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದು, ಭಕ್ತರೊಂದಿಗೆ ರಥೋತ್ಸವದಲ್ಲಿ ಭಾಗಿಯಾದರು. ದೇವಳ ಸ್ಥಾಪಿಸಿದ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಸನ್ನಿಧಿಗೆ ನಮಿಸಿ, ಸರ್ವ ದೇವರ ದರ್ಶನ ಪಡೆದು, ದರ್ಬಾರ್ ಮಂಟಪದಲ್ಲಿ ಶಾರದೆ ಮತ್ತು ನವದುರ್ಗೆಯರಿಗೆ ವಂದಿಸಿದರು. ಶಾರದೆಯ ಸನ್ನಿಧಿಯಲ್ಲಿ ಉಪಮುಖ್ಯಮಂತ್ರಿಗಳಿಗೆ ಪ್ರಸಾದ ನೀಡಿ, ದೇವಳದ ವತಿಯಿಂದ ಗೌರವಿಸಲಾಯಿತು.
ಬಳಿಕ ಮಾತನಾಡಿದ ಅವರು, ನಾನು ಇಂದು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಆದರೆ, ಸಾಕ್ಷಾತ್ ಶಾರದಾ ಮಾತೆಯೇ ನನ್ನನ್ನು ಇಲ್ಲಿಗೆ ಕರೆಸಿಕೊಂಡಂತಿದೆ. ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಈ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿರುವುದು ನನ್ನ ಸೌಭಾಗ್ಯ ಮಂಗಳೂರು ದಸರಾ ವೈಭವ ಕಂಡು ಬಹಳ ಸಂತೋಷವಾಯಿತು ಎಂದರು.
ದೇವಸ್ಥಾನದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ ಮಾಲಾರ್ಪಣೆಗೈದು ಸ್ವಾಗತಿಸಿದರು. ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಪೂಜಾರಿ, ಕೃತಿನ್ ಅಮೀನ್, ಕಿಶೋರ್ ದಂಡಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಹರೀಶ್ ಕುಮಾರ್ (ಮೆಸ್ಕಾಂ ಅಧ್ಯಕ್ಷರು), ಪಿ.ಕೆ.ಗೌರವಿ, ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು, ಶಾಸಕರಾದ ಅಶೋಕ್ ಕುಮಾರ್ ರೈ, ಎಂ.ಎಲ್. ಸಿ. ಮಂಜುನಾಥ ಭಂಡಾರಿ, ರಕ್ಷಿತ್ ಶಿವರಾಂ ಬೆಳ್ತಂಗಡಿ, ಇನಾಯತ್ ಆಲಿ, ಶ್ರೀನಿವಾಸ್ ಬಿ.ವಿ., ದೇವಳದ ಆಡಳಿತ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

