ಸಂವಿಧಾನದ ಮೂಲ ಆಶಯಗಳನ್ನು ಅರ್ಥೈಸಿಕೊಳ್ಳಿ: ಯಶ್ ಪಾಲ್ ಸುವರ್ಣ

Upayuktha
0


ಉಡುಪಿ: ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ  ನವೆಂಬರ್ 26 ಮಹತ್ವದ ದಿನವಾಗಿದೆ. ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಲಾಗುತ್ತದೆ. 1949ರ ನವೆಂಬರ್ 26ರಂದು ಸಂವಿಧಾನ ಸಭೆಯು ಭಾರತೀಯ ಸಂವಿಧಾನವನ್ನು ಅಂಗೀಕರಿಸಿತು ಮತ್ತು 1950ರ ಜನವರಿ 26ರಂದು ಅದು ಜಾರಿಗೆ ಬಂದು ನಮ್ಮ ದೇಶ ಗಣರಾಜ್ಯವಾಯಿತು. ಸಂವಿಧಾನವನ್ನು ರಚಿಸುವಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಡುಗೆ ಅನನ್ಯವಾಗಿದ್ದು ನಾವೆಲ್ಲರೂ ಸಂವಿಧಾನದ ಮೂಲ ಆಶಯಗಳನ್ನು ಅರ್ಥೆಸಿಕೊಳ್ಳಬೇಕು ಎಂದು ಶಾಸಕ ಯಶ್‍ಪಾಲ್ ಸುವರ್ಣ ಹೇಳಿದರು. 


ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಗಳ ಆಶ್ರಯದಲ್ಲಿ ನಗರದ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಸ್ವಾತಂತ್ರ್ಯ ಪೂರ್ವದಿಂದಲೂ ದೇಶದ ಏಕತೆ ಮತ್ತು ಅಖಂಡತೆ ಹಾಗೂ ತಾರತಮ್ಯ ರಹಿತ ಸಮಾನತೆಯ ಸಮಾಜವನ್ನು ರಚಿಸುವ ದೂರದೃಷ್ಟಿ ಹೊಂದಿದ್ದ ಡಾ. ಬಿ. ಆರ್ ಅಂಬೇಡ್ಕರ್ ನೇತೃತ್ವದ ಸಂವಿಧಾನ ಸಮಿತಿಯು ಸಂವಿಧಾನವನ್ನು ರಚಿಸಿದೆ. ಸಂವಿಧಾನದ ಆಶಯಗಳಿಗೆ ಬದ್ದವಾಗಿ ದೇಶವು ಅಭಿವೃದ್ದಿ ಹೊಂದುತ್ತಿದ್ದು ವಿಶ್ವವು ಭಾರತದತ್ತ ತಿರುಗಿ ನೋಡುತ್ತಿದೆ. ಸಂವಿಧಾನದ ಆಶಯದಂತೆ ದೇಶದಲ್ಲಿ ಸಮಾನತೆಯ ಸಮಾಜ ರೂಪುಗೊಂಡಾಗ ಅಭಿವೃದ್ದಿಗೆ ಅರ್ಥಬರುತ್ತದೆ ಎಂದರು.


ಪ್ರಜೆಗಳು ಪ್ರಭುಗಳಾಗುವ ಅದ್ಭುತ ಕಲ್ಪನೆಯೊಂದಿಗೆ ನಮ್ಮ ಹಿರಿಯರು ಸಂವಿಧಾನವನ್ನು ರಚಿಸಿ, ಅಂಗೀಕರಿಸಿ ಪ್ರಜೆಗಳ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನಿರ್ದೇಶಿಸಿರುವ ಜಗತ್ತಿನ ಅತಿ ದೊಡ್ಡ ಸಂವಿಧಾನ ನಮ್ಮದು ಎನ್ನುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ. ಅಂಬೇಡ್ಕರ್ ಅವರ ದೂರದರ್ಶಿತ್ವ, ಅವರ ಚಿಂತನೆಗಳನ್ನು ಮನನ ಮಾಡಿಕೊಂಡು ನಮ್ಮೆಲ್ಲರ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಅವರು ಹೇಳಿದರು. 


ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ ಸಂವಿಧಾನದ ಮೂಲ ತತ್ವಗಳನ್ನು ಅತ್ಯಂತ ಸರಳವಾಗಿ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಕವಿತೆಯ ರೂಪದಲ್ಲಿರುವ ‘ಭಾರತದ ಸಂವಿಧಾನದ ಮೂಲ ಆಶಯಗಳು’ ಎನ್ನುವ ಪುಸ್ತಕವನ್ನು ಹೊರತರಲಾಗಿದೆ. ವಿದ್ಯಾರ್ಥಿಗಳು ಸಂವಿಧಾನದ ಮೂಲ ಭಾವವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಸಂವಿಧಾನ ಶಿಲ್ಪಿಗಳು ಸಂವಿಧಾನದ ಸ್ವರೂಪವನ್ನು ಬಹಳ ಸ್ಪಷ್ಟತೆ ಮತ್ತು ವೈಜ್ಞಾನಿಕತೆಯಿಂದ ರಚಿಸಿದ್ದಾರೆ. ಸಂವಿಧಾನ ಎಂದರೆ ಕೇವಲ ಪೀಠಿಕೆ ಅಲ್ಲ. ದೇಶದ ಭೌಗೋಳಿಕ ಸನ್ನಿವೇಶ, ಹೆಸರು, ನಾಗರಿಕರು ಹೊಂದಿರುವ ಹಕ್ಕು ಮತ್ತು ಕರ್ತವ್ಯಗಳು, ರಾಜ್ಯಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ಕಾರ್ಯಗಳನ್ನು ಸಂವಿಧಾನದಲ್ಲಿ ವಿಸ್ತಾರವಾಗಿ ವಿವರಿಸಲಾಗಿದೆ. ದೇಶದ ನಾಗರಿಕರೆಲ್ಲರೂ ಸಂವಿಧಾನವನ್ನು ಓದಿ, ಗೌರವಿಸಿ, ರಕ್ಷಿಸಿ ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಭಾರತದ ಸಂವಿಧಾನದ ಮೂಲ ಆಶಯಗಳು ಕವನ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ ಉಡುಪಿ ಬೋರ್ಡ್ ಹೈಸ್ಕೂಲಿನಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಿತು.


ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಕಪ್ಪ ಆರ್ ಲಮಾಣಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು.


ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top