ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, DAY NRLM-DDUGKY ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಆಶ್ರಯದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ 2026 ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆವರಣದಲ್ಲಿ ಫೆಬ್ರವರಿ 21 ಶನಿವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಸಾಫ್ಟ್ವೇರ್, ಉತ್ಪಾದನೆ, ಅಟೋಮೊಬೈಲ್, ಬ್ಯಾಂಕಿಂಗ್, ಹಣಕಾಸು, ವಿಮಾವಲಯ, ರಿಟೇಲ್ ಮತ್ತು ಗ್ರಾಹಕ ಸೇವಾ ವಲಯ, ನಿರ್ಮಾಣ ಮತ್ತು ರಿಯಲ್ ಎಸ್ಟೇಟ್, ಶಿಕ್ಷಣ, ಆರೋಗ್ಯ ಕ್ಷೇತ್ರ, ಹಾಸ್ಪಿಟಾಲಿಟಿ, ಹೊರಗುತ್ತಿಗೆ, ಜೀವ ವಿಜ್ಞಾನ ಆಹಾರ ತಂತ್ರಜ್ಞಾನ ಹೀಗೆ ವಿವಿಧ ವಲಯಗಳ 125ಕ್ಕೂ ಮಿಕ್ಕಿ ಕಂಪೆನಿಗಳು ಇದರಲ್ಲಿ ಪಾಲ್ಗೊಳ್ಳುತ್ತವೆ. ಎಸ್ಎಸ್ಎಲ್ಸಿ ಯಿಂದ ಸ್ನಾತಕೋತ್ತರ ಪದವಿಯವರೆಗೆ ವಿದ್ಯಾರ್ಹತೆಯನ್ನು ಹೊಂದಿರುವ ಉದ್ಯೋಗಾಕಾಂಕ್ಷಿಗಳು ಇದರಲ್ಲಿ ಭಾಗವಹಿಸಿ ತಮ್ಮ ಜೀವನವನ್ನು ರೂಪುಗೊಳಿಸಬಹುದು. 5000ಕ್ಕೂ ಮಿಕ್ಕಿ ಉದ್ಯೋಗ ಆಕಾಂಕ್ಷಿಗಳು ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಆ ದಿನ ಸ್ಥಳದಲ್ಲೇ ಹೆಸರನ್ನು ನೋಂದಾಯಿಸುವ ವ್ಯವಸ್ಥೆಯೂ ಇರುತ್ತದೆ. ಕಂಪೆನಿಗಳ ಆವಶ್ಯಕತೆಗೆ ತಕ್ಕಂತೆ ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದ್ದು, ಪೂರಕ ವ್ಯವಸ್ಥೆಗಳನ್ನು ಮಾಡುವ ಕಾರ್ಯ ಭರದಿಂದ ಸಾಗುತ್ತಿದೆ.
ಅಂದು ಬೆಳಿಗ್ಗೆ ಕಾಲೇಜಿನ ಆವರಣದಲ್ಲಿ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ.ಖಾದರ್ ಅವರ ಘನ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ದಿನೇಶ್ ಗುಂಡೂರಾವ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕರ್ನಾಟಕ ಸರ್ಕಾರದ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಸನ್ಮಾನ್ಯ ಡಾ.ಶರಣ ಪ್ರಕಾಶ ಆರ್ ಪಾಟೀಲ್ ಅವರ ಗೌರವ ಉಪಸ್ಥಿತಿಯಲ್ಲಿ ಸಮಾರಂಭವು ನಡೆಯಲಿದೆ.
ಪುತ್ತೂರು ಕ್ಷೇತ್ರದ ಶಾಸಕ ಸನ್ಮಾನ್ಯ ಅಶೋಕ್ ಕುಮಾರ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಕ್ಷೇತ್ರದ ಸಂಸದ ಸನ್ಮಾನ್ಯ ಕ್ಯಾಪ್ಟನ್ ಬೃಜೇಶ್ ಚೌಟ, ಭಾರತ ಸರ್ಕಾರದ ರಾಜ್ಯ ಸಭೆಯ ಸಂಸದರಾದ ಸನ್ಮಾನ್ಯ ವೀರೇಂದ್ರ ಹೆಗ್ಗಡೆ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ದಕ್ಷಿಣ ಕನ್ನಡದ ವಿವಿಧ ಕ್ಷೇತ್ರಗಳ ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವಿಧ ಅಕಾಡಮಿಗಳ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ. ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಜಿಲ್ಲಾದಿಕಾರಿಗಳು, ಪೋಲಿಸ್ ಆಯುಕ್ತರು, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೋಲೀಸ್ ಅಧೀಕ್ಷಕರು ಮತ್ತು ಪುತ್ತೂರು ನಗರಸಭೆಯ ಆಯುಕ್ತರ ವಿಶೇಷ ಉಪಸ್ಥಿತಿ ಸಮಾರಂಭದಲ್ಲಿ ಇರುತ್ತದೆ.
ಎಲ್ಲಾ ಉದ್ಯೋಗಾಕಾಂಕ್ಷಿಗಳು ಬೆಳಿಗ್ಗೆ 9 ಗಂಟೆಗೆ ಮುಂಚಿತವಾಗಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಹಾಜರಿದ್ದು ತಮ್ಮ ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳುವುದರ ಜತೆಯಲ್ಲಿ ತಮ್ಮ ಆಯ್ಕೆಯ ಕಂಪೆನಿಗಳ ಸಂದರ್ಶನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpeg)
