ಮಂಗಳೂರು: ರಾಜ್ಯ ಸರ್ಕಾರ ಮಂಡಿಸಿದ ಕರ್ನಾಟಕ ಬಜೆಟ್ 2026 ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಫ್ಟನ್ ಗಣೇಶ್ ಕಾರ್ಣಿಕ್, ಇದನ್ನು “ಸಾಲದ ಗ್ಯಾರಂಟಿಯ ಬಜೆಟ್” ಎಂದು ಟೀಕಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಬಜೆಟ್ ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸುವಂತಿದೆ ಎಂದು ಅವರು ಆರೋಪಿಸಿದ್ದಾರೆ.
ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ರಾಜ್ಯದ ಒಟ್ಟು ಸಾಲ ಈಗಾಗಲೇ 8.24 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ ಎಂದು ಹೇಳಿ, ಇಂತಹ ಸಂದರ್ಭದಲ್ಲಿ 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸುವ ಮೂಲಕ ಸರ್ಕಾರ ಹೆಚ್ಚಿನ ಸಾಲದ ಅವಲಂಬನೆ ಮುಂದುವರೆಸಿದೆ ಎಂದು ಹೇಳಿದರು. ಈ ಸಾಲಿನಲ್ಲೇ ಬಹಿರಂಗ ಮಾರುಕಟ್ಟೆಯಿಂದ ಪಡೆಯಲಾಗುತ್ತಿರುವ ಸಾಲದ ಮೊತ್ತ 1,22,340 ಕೋಟಿ ರೂಪಾಯಿ ಆಗಿರುವುದು ಆತಂಕಕಾರಿ ಎಂದು ಅವರು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರದ ಬಜೆಟ್ ಹೊರಬಂದ ಕೂಡಲೇ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ ಕಾರ್ಣಿಕ್, ರಾಜ್ಯ ಸರ್ಕಾರ ತಪ್ಪು ಅಂಕಿ-ಅಂಶಗಳನ್ನು ನೀಡುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.
ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳನ್ನು ಘೋಷಿಸಿರುವುದನ್ನು ಉಲ್ಲೇಖಿಸಿದ ಅವರು, ವಕ್ಫ್ ಆಸ್ತಿ ಅಭಿವೃದ್ಧಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೆರವು, ಅಲ್ಪಸಂಖ್ಯಾತ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳು, ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಸಹಾಯಧನ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಅಲ್ಪಸಂಖ್ಯಾತ ಶಾಲೆಗಳ ಅಭಿವೃದ್ಧಿಗೆ 1000 ಕೋಟಿ ರೂಪಾಯಿ ಅನುದಾನ ಸೇರಿದಂತೆ ಹಲವು ಯೋಜನೆಗಳನ್ನು ಸರ್ಕಾರ ಘೋಷಿಸಿದೆ ಎಂದು ಹೇಳಿದರು.
ಇಂತಹ ಘೋಷಣೆಗಳ ಮೂಲಕ ಸರ್ಕಾರ ಒಂದು ಸಮುದಾಯಕ್ಕೆ ಮಾತ್ರ ಹೆಚ್ಚಿನ ಆದ್ಯತೆ ನೀಡಿರುವಂತೆ ಕಾಣುತ್ತದೆ ಎಂದು ಅವರು ಆರೋಪಿಸಿದರು. ಇದೇ ವೇಳೆ ರಾಜ್ಯದ ರೈತರು, ವಿದ್ಯಾರ್ಥಿಗಳು, ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರು, ಬಡಜನರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರ ಸಮಸ್ಯೆಗಳಿಗೆ ತಕ್ಕ ಮಟ್ಟಿನ ಗಮನ ನೀಡಲಾಗಿಲ್ಲ ಎಂದು ಅವರು ಟೀಕಿಸಿದರು.
ಇದಲ್ಲದೆ ಕರಾವಳಿ ಕರ್ನಾಟಕ ಪ್ರದೇಶವನ್ನು ಬಜೆಟ್ನಲ್ಲಿ ಕಡೆಗಣಿಸಲಾಗಿದೆ ಎಂದು ಹೇಳಿದ ಕಾರ್ಣಿಕ್, ಆ ಭಾಗಕ್ಕೆ ಕೇವಲ ಎರಡು ಪೊಲೀಸ್ ಠಾಣೆಗಳ ಘೋಷಣೆ ಮಾತ್ರ ಮಾಡಿರುವುದು ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹೇಳಿದರು.
ಒಟ್ಟಾರೆ, ಈ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗಿಂತಲೂ ಒಂದು ನಿರ್ದಿಷ್ಟ ಸಮುದಾಯದತ್ತ ಹೆಚ್ಚಿನ ಒಲವು ತೋರಿಸುವಂತಿದೆ ಎಂದು ಅವರು ಆರೋಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


