ಬಿ.ಸಿ. ರೋಡ್‌, ಪುಂಜಾಲಕಟ್ಟೆ ಸೇರಿ NH 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 64 ಕೋಟಿ ರೂ. ಮಂಜೂರು: ಸಂಸದ ಕ್ಯಾ.ಚೌಟ

Upayuktha
0

 

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್‌ನಿಂದ ಪೂಂಜಾಲಕಟ್ಟೆವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್‌ನಿಂದ ಗಾಣದಪಡ್ಪು ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 64 ಕೋಟಿ ರೂ. ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

 

ಈ ಕಾಮಗಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿರುವ ಸಂಸದರು, ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್‌ನಿಂದ ಪುಂಜಾಲಕಟ್ಟೆವರೆಗಿನ ಸುಮಾರು 20 ಕಿಮೀ ಹೆದ್ದಾರಿಯ ನಿರ್ವಹಣೆ ಕಾಮಗಾರಿಗಳಿಗಾಗಿ ಒಟ್ಟು 34.53 ಕೋಟಿ ರೂ.ಗಳ ಅನುದಾನವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಜೂರು ಮಾಡಿದೆ. ಬಿ.ಸಿ. ರೋಡ್ ಜಂಕ್ಷನ್‌ನಿಂದ ಬಂಟ್ವಾಳ ಕಡೆಗೆ ಹೋಗುವ ಹೆದ್ದಾರಿಯಲ್ಲಿ ಶ್ರೀ ನಾರಾಯಣಗುರು ಮಂದಿರದವರೆಗಿನ ರಸ್ತೆ ಅಗಲೀಕರಣಕ್ಕೆ ಬಾಕಿಯಿದೆ. ಈ ಭಾಗದ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸುವುದಕ್ಕೆ ಒಟ್ಟು 22.59 ಕೋಟಿ ರೂ.ಗಳ ಅನುದಾನ ದೊರೆತಿದೆ ಎಂದು ಹೇಳಿದ್ದಾರೆ.

 

ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್ ಜಂಕ್ಷನ್, ಚಾರ್ಮಾಡಿ ಘಾಟಿಯಲ್ಲಿ ರಸ್ತೆಗಳ ನಿರ್ವಹಣೆ ಕಾಮಗಾರಿಗಾಗಿ 6.92 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಈ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡರೆ ನಮ್ಮ ಭಾಗದ ಸುಗಮ ಸಂಚಾರ ಹಾಗೂ ಆರ್ಥಿಕ ಪ್ರಗತಿಗೆ ಹೊಸ ವೇಗ ಸಿಗಲಿದೆ. ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕೆಲಸಗಳಿಗೆ ಹಾಗೂ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವುದಕ್ಕೆ ಕೇಂದ್ರ ಸರ್ಕಾರದಿಂದ ಸೂಕ್ತ ಅನುದಾನ ದೊರೆಯುತ್ತಿರುವುದರಿಂದ ಜಿಲ್ಲೆಯಲ್ಲಿ ವಾಹನಗಳು ಹಾಗೂ ಸರಕು ವಾಹನಗಳ ಸುಗಮ ಸಂಚಾರಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ಕಾಮಗಾರಿ ಪ್ರಗತಿಯಲ್ಲಿ

 

ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ಹೆದ್ದಾರಿ ಸುಮಾರು 613.665 ಕೋಟಿ ವೆಚ್ಚದಲ್ಲಿ ದ್ವಿಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ. ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿಯಾದ 73ರಲ್ಲಿ ಬಿ.ಸಿ. ರೋಡ್‌ನಿಂದ ಪೂಂಜಾಲಕಟ್ಟೆವರೆಗೆ ಹೆದ್ದಾರಿ ನಿರ್ವಹಣೆಗೆ ಈಗ ಅನುದಾನ ಮಂಜೂರಾದ ಹಿನ್ನಲೆ ಶೀಘ್ರದಲ್ಲೇ ಕಾಮಗಾರಿ ಕೂಡ ಆರಂಭವಾಗಲಿದೆ. ಬಿ.ಸಿ. ರೋಡ್ ಜಂಕ್ಷನ್ ಬಳಿಯ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೂ ಚಾಲನೆ ದೊರೆಯಲಿದೆ. ಆ ಮೂಲಕ, ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಜಾಲ ಮತ್ತಷ್ಟು ಉನ್ನತೀಕರಣಗೊಳ್ಳುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 


Post a Comment

0 Comments
Post a Comment (0)
To Top