ಮಂಗಳೂರು: ದೇಶದ ಜನಮನಗಳನ್ನು ಒಂದುಗೂಡಿಸಲು ಹಿಂದಿ ಭಾಷೆಯಿಂದ ಮಾತ್ರ ಸಾಧ್ಯ. ಇದು ಜನ ಭಾಷೆಯಾಗಿರುವುದರಿಂದ ಎಲ್ಲಾ ಭಾಗದ ಜನರನ್ನು ಹತ್ತಿರ ತರುತ್ತದೆ ಎಂದು ನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಪ್ರಬಂಧಕ ಕೃಷ್ಣಕುಮಾರ್ ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭಾವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಿಂದಿ ಅಧ್ಯಾಪಕರ ಸಂಘ ಮತ್ತು ವಿಶ್ವವಿದ್ಯಾಲಯ ಕಾಲೇಜಿನ ಹಿಂದಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಶಿಕ್ಷಣ ನೀತಿಯ ನಾಲ್ಕನೇ ಸೆಮಿಸ್ಟರ್ ಪಠ್ಯಕ್ರಮದ ಹಿಂದಿ ಕಾರ್ಯಾಗಾರ-2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಭಾಷೆ ಪ್ರಮುಖ ಸಾಧನವಾಗಿದ್ದು, ಮನುಷ್ಯ-ಮನುಷ್ಯರ ನಡುವೆ ಸಂಬಂಧ ಬೆಸೆಯಲು ಸಹಕಾರಿಯಾಗಿದೆ. ಮಕ್ಕಳಿಗೆ ಬಾಲ್ಯದಲ್ಲಿ ಮಾತೃ ಭಾಷೆಯಲ್ಲೇ ಶಿಕ್ಷಣ ನೀಡಬೇಕು. ಮಾತೃ ಭಾಷೆಯಿಂದ ಮಕ್ಕಳು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್., ಕಾಲೇಜಿನಲ್ಲಿ ಹಿಂದಿ ವಿಭಾಗ ಪಠ್ಯದ ಬೋಧನೆ ಜೊತೆಗೆ ಭಾಷೆಯನ್ನು ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಪ್ರೋತ್ಸಾಹ ನೀಡುತ್ತಾರೆ. ಆ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಉತ್ತಮ ವೃತ್ತಿಪರರಾಗುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯ ನಾನಾ ಪದವಿ ಕಾಲೇಜುಗಳಲ್ಲಿ ಹಿಂದಿ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ವಿವಿಧ ಹಿಂದಿ ಅಧ್ಯಾಪಕರನ್ನು ಇದೇ ವೇಳೆ ಸನ್ಮಾನಿಸಲಾಯಿತು. ಅಲ್ಲದೇ, ವಿಭಾಗದ ವತಿಯಿಂದ ಪಿಎಚ್ಡಿ ಪದವಿ ಪಡೆದ ಸಂಶೋಧನಾರ್ಥಿಗಳನ್ನು ಗೌರವಿಸಲಾಯಿತು.
ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಹಿಂದಿ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಮುರಳೀಧರ್ ನಾಯಕ್, ವಿಭಾಗಕ್ಕೆ 50,000 ರೂ. ಮೌಲ್ಯದ ಪುಸ್ತಕ ಮತ್ತು ಕಪಾಟನ್ನು ಕೊಡುಗೆಯಾಗಿ ನೀಡಿದರು.
ಇದೇ ವೇಳೆ, ವಿಭಾಗದ ಮುಖ್ಯಸ್ಥೆ ಪ್ರೊ. ಸುಮ ಟಿ. ಆರ್., ಸ್ನಾತಕೋತ್ತರ ಹಿಂದಿ ವಿಭಾಗದ ಸಂಯೋಜಕಿ ಪ್ರೊ.ನಾಗರತ್ನ ರಾವ್, ಡಾ. ಕಲ್ಪನಾ ಪ್ರಭು, ಡಾ. ನಾಗರತ್ನ ಶೆಟ್ಟಿ, ಡಾ. ರಶ್ಮಿ ಸೇರಿದಂತೆ ನಾನಾ ಕಾಲೇಜುಗಳ ಹಿಂದಿ ಉಪನ್ಯಾಸಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


