ಉಡುಪಿ: ಆಯುಷ್ಮಾನ್
ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಿಂದ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಶಿಫಾರಸ್ಸು ಮಾಡಿದಾಗ ರೋಗಿಗಳಿಗೆ ಅಗತ್ಯ ಚಿಕಿತ್ಸಾ ನೆರವುಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ
ಅಧಿಕಾರಿಗಳಿಗೆ ಉಡುಪಿ - ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ
ಪೂಜಾರಿ ಸೂಚನೆ ನೀಡಿದರು.
ಅವರು
ಇಂದು ನಗರದ ಮಣಿಪಾಲ ರಜತಾದ್ರಿಯ
ಜಿಲ್ಲಾ ಪಂಚಾಯತ್ ಡಾ.ವಿ.ಎಸ್
ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ
ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ
ಮಾತನಾಡುತ್ತಿದ್ದರು.
ಸರಕಾರ
ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ
ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವು ಅವಶ್ಯವಿರುವವರಿಗೆ ಲಭ್ಯವಾಗುವಂತೆ
ನೋಡಿಕೊಳ್ಳುವುದು ನಮ್ಮಗಳ ಜವಾಬ್ದಾರಿ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲಾ ಸರಕಾರಿ ಆಸ್ಪತ್ರೆಗಳಿಗೆ ಶಿಫಾರಸ್ಸು ಆದಂತಹ ರೋಗಿಗಳಿಗೆ ಚಿಕಿತ್ಸಾ ನೆರವು ದೊರಕುತ್ತಿಲ್ಲ ಎಂಬ ದೂರುಗಳು ಪದೇ
ಪದೇ ಕೇಳಿ ಬರುತ್ತಿವೆ. ಇವರುಗಳಿಗೆ
ಅಗತ್ಯ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಲು ಕೋ- ಆರ್ಡಿನೇಟರ್ಗಳನ್ನು
ಸಹ ನೇಮಕ ಮಾಡಿದ್ದರೂ ಸಹ
ಸರಿಯಾಗಿ ಸ್ಪಂದಿಸಿ, ಸಹಕಾರ ನೀಡುತ್ತಿಲ್ಲ. ಈ ಬಗ್ಗೆ ಸೂಕ್ತ
ಕ್ರಮ ವಹಿಸಬೇಕು ಎಂದರು.
ಕೊಂಕಣ ರೈಲ್ವೆಗೆ ನೀರು ಸರಬರಾಜು ಮಾಡುವ ಕಾಮಗಾರಿಯನ್ನು ಆದ್ಯತೆಯ ಮೇಲೆ ಶೀಘ್ರದಲ್ಲಿಯೇ ಪ್ರಾರಂಭಿಸಬೇಕು. ಈಗಾಗಲೇ ನಗರಸಭೆ ವತಿಯಿಂದ ರೈಲ್ವೆ ನಿಲ್ದಾಣ ಹಾಗೂ ವಸತಿ ಗೃಹಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ರೈಲಿಗಳಿಗೆ ನೀರನ್ನು ಒದಗಿಸಲು ನೀರಿನ ಮೂಲವನ್ನು ಗುರುತಿಸುವುದರೊಂದಿಗೆ ಕಾಮಗಾರಿ ಕೈಗೊಳ್ಳಬೇಕು. ಇದಕ್ಕೆ ಜಿಲ್ಲಾ ಪಂಚಾಯತ್ನ ನೀರು ನೈರ್ಮಲ್ಯ ವಿಭಾಗದ ತಾಂತ್ರಿಕ ಸಲಹೆಯನ್ನು ಪಡೆಯಬೇಕು ಎಂದರು.
ಇಂದ್ರಾಳಿ
ರೈಲ್ವೆ ನಿಲ್ದಾಣದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಸಮರ್ಪಕವಾಗಿಲ್ಲದೇ ಮಳೆಗಾಲದಲ್ಲಿ ವಾಹನಗಳ ನಿಲುಗಡೆಗೆ ತೊಂದರೆ ಉಂಟಾಗುತ್ತಿವೆ ಎಂಬ ದೂರುಗಳು ಸಾರ್ವಜನಿಕರಿಂದ
ಕೇಳಿ ಬರುತ್ತಿವೆ. ಈ ಬಗ್ಗೆ ಸೂಕ್ತ
ಕ್ರಮ ವಹಿಸಬೇಕು ಎಂದ ಅವರು, ರೈಲ್ವೆ
ನಿಲ್ದಾಣಕ್ಕೆ ಪ್ರಸ್ತುತ ಇರುವ ರಸ್ತೆ ಅಗಲೀಕರಣಕ್ಕೆ
ಭೂ ಸ್ವಾಧೀನ ಕೈಗೊಳ್ಳಲು ಪ್ರಸ್ತಾವನೆಯನ್ನು ಕಳುಹಿಸಿಕೊಡಬೇಕು. ಇದರ ಜೊತೆಗೆ ಬದಲಿ
ರಸ್ತೆ ವ್ಯವಸ್ಥೆಗೂ ಕ್ರಮ ವಹಿಸಬೇಕು ಎಂದರು.
ಜಿಲ್ಲೆಯ
ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿದೆ. ಈಗಾಗಲೇ 196 ಟವರ್ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ 115 4-ಜಿ ಗೆ ಉನ್ನತೀಕರಿಸಲಾಗಿದೆ.
ಬಾಕಿ ಉಳಿದವುಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕು ಎಂದ ಅವರು, ವಿದ್ಯುಚ್ಛಕ್ತಿ
ಕಡಿತದ ಸಂದರ್ಬದಲ್ಲಿ ಬಿ.ಎಸ್.ಎನ್.ಎಲ್ ನೆಟ್ವರ್ಕ್ಗಳು ಲಭ್ಯವಾಗುತ್ತಿಲ್ಲ. ಇವುಗಳಿಗೆ ಅಗತ್ಯವಿರುವ ಬ್ಯಾಟರಿ ಅಳವಡಿಕೆ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ಈಗಾಗಲೇ
80 ಟವರ್ಗಳಿಗೆ
46 ಹೊಸ ಬ್ಯಾಟರಿಗಳು ಅಳವಡಿಸಲಾಗಿದ್ದು, ಉಳಿದವುಗಳಿಗೆ ಕೂಡಲೇ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ
ನೀಡಿದರು.
ಮನೆ
ಮನೆಗೆ ಎಲ್.ಪಿ.ಜಿ
ಗ್ಯಾಸ್ ಸಂಪರ್ಕ ನೀಡುವ ಕಾಮಗಾರಿಯನ್ನು ಅದಾನಿ ಕಂಪನಿ ವತಿಯಿಂ ಕೈಗೊಳ್ಳಲಾಗಿತ್ತು. ಕಾಮಗಾರಿಯ್ನನು ಕಳೆದ 10 ವರ್ಷಗಳಿಂದ ಕೈಗೊಳ್ಳಲಾಗುತ್ತಿದೆ. ಆದರೆ ಇವುಗಳ ಅನುಷ್ಠಾನ
ಸಮರ್ಪಕವಾಗಿ ಆಗದೇ ಇರುವ ಬಗ್ಗೆ
ಬೇಸರ ವ್ಯಕ್ತಪಡಿಸಿದ ಅವರು, ಮುಂದಿನ ಜೂನ್ ಮಾಹೆ ಒಳಗಾಗಿ
ಪೈಪ್ಲೈನ್
ಕಾಮಗಾರಿ ಮುಗಿಸುವುದರೊಂದಿಗೆ ಸಾರ್ವಜನಿಕರಿಗೆ ಗ್ಯಾಸ್ ಸಂಪರ್ಕ ಒದಗಿಸಬೇಕು ಎಂದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ಕ್ಷೇತ್ರಕ್ಕೆ ಒಟ್ಟು 9 ಕಾಮಗಾರಿಗಳಿಗೆ ಅನುಮೋದನೆ ನೀಡಿದ್ದು, ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಪೂರ್ಣಗೊಳಿಸಬೆಕು. ಅಗತ್ಯವಿರುವ ಭೂ-ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದರು.
ಕುಸುಮ್ -ಬಿ ಯೋಜನೆಯಡಿ ರೈತರ ಜಮೀನಿಗೆ ಪಂಪ್ಸೆಟ್ ಅಳವಡಿಸುವ ಪ್ರಗತಿ ಕಡಿಮೆ ಇದ್ದು, ಇದರ ಪ್ರಗತಿಯನ್ನು ಹೆಚ್ಚಿಸಬೇಕು ಎಂದ ಅವರು, ಕುಸುಮ್ -ಸಿ ಯೋಜನೆಯಡಿ ಜಿಲ್ಲೆಗೆ ಕೇಂದ್ರದಿಂದ ಬಿಡುಗಡೆಯಾದ 20 ಕೋಟಿ ರೂ. ಗಳ ಅನುದಾನ ಬಿಡುಗಡೆ ಆಗಿದ್ದು, ಇದರ ಅನುಷ್ಠಾನ ಆಗಬೇಕು ಎಂದ ಅವರು, ಕುಸುಮ್- ಸಿ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿರುವ ಭೂಮಿಯ ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಲ್
ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆ ನಳ
ನೀರನ್ನು ಒದಗಿಸುವ ಪೈಪ್ಲೈನ್ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ. ಇವುಗಳಿಗೆ ನೀರಿನ ಮೂಲಗಳನ್ನು ಗುರುತಿಸಿ, ನಿರಂತರ ನೀರನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಬಹುಗ್ರಾಮ
ಕುಡಿಯುವ ನೀರು ಯೋಜನೆಗಳ ಕಾಮಗಾರಿಗಳನ್ನು
ಸಹ ಆದ್ಯತೆಯ ಮೇಲೆ ಪೂರ್ಣಗೊಳಿಸುವುರೊಂದಿಗೆ ಗ್ರಾಮೀಣ ಭಾಗದಲ್ಲಿ
ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.
ನಗರ
ಹಾಗೂ ಗ್ರಾಮೀಣ ಭಾಗಗಳಲ್ಲಿ ಘನತ್ಯಾಜ್ಯ ವಿಲೇವಾರಿ ಗಳು ವೈಜ್ಞಾನಿಕವಾಗಿ ಕೈಗೊಳ್ಳಲು
ಆದ್ಯತೆ ನೀಡಬೇಕು. ಆದರೆ, ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಘನತ್ಯಾಜ್ಯಗಳನ್ನು ಎಸೆಯುತ್ತಿರುವುದು ಕಂಡು ಬರುತ್ತಿದೆ. ಈ
ಬಗ್ಗೆ ಪಿ.ಡಿ.ಓ
ಗಳು ಹಾಗೂ ಸ್ಥಳೀಯ ಸಂಸ್ಥೆಯವರು
ಕಸ ಎಲ್ಲೆಂದರಲ್ಲಿ ಎಸೆಯುವವರಿಗೆ ದಂಡ ವಿಧಿಸುವುದರೊಂದಿಗೆ ನೈರ್ಮಲ್ಯ
ಕಾಪಾಡುವಲ್ಲಿ ಮುಂದಾಗಬೇಕು ಎಂದರು.
ಶೈಕ್ಷಣಿಕ
ವರ್ಷದಲ್ಲಿ ಪಿ.ಯು.ಸಿ
ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಡುಪಿ
ಜಿಲ್ಲೆಯು ಉತ್ತಮ ಫಲಿತಾಂಶ ಲಭಿಸಿರುವ ಹಿನ್ನೆಲೆ, ವಿದ್ಯಾರ್ಥಿಗಳು, ಶಿಕ್ಷಕರುಗಳು, ಪೋಷಕರು ಹಾಗೂ ಇಲಾಖೆಯ ಅಧಿಕಾರಿಗಳಿಗೆ
ಪ್ರಶಂಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ
ಶಾಸಕರುಗಳಾದ ಯಶ್ಪಾಲ್ ಎ ಸುವರ್ಣ, ಗುರುರಾಜ್
ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್
ಕೊಡ್ಗಿ ಹಾಗೂ ಗುರ್ಮೆ ಸುರೇಶ್
ಶೆಟ್ಟಿ, ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ
ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ
ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ.ಎಫ್.ಓ
ರುಥ್ರೇನ್ ಪಿ, ವೈಲ್ಡ್ಲೈಫ್ ಡಿ.ಎಫ್.ಓ ಶಿವರಾಮ್
ಎಂ ಬಾಬು, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ
ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


