ಧರ್ಮಸ್ಥಳದಲ್ಲಿ 12ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Upayuktha
0

 


ಉಜಿರೆ: ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ “ಯೋಗ” ಆಗಿದ್ದು ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಹೇಳಿದರು.

ಅವರು ಭಾನುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ೧೨ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ನಮ್ಮ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯಭಾಗ್ಯ ರಕ್ಷಣೆಗೆ ಯೋಗ ಸಹಕಾರಿಯಾಗಿದೆ. ಆಧುನಿಕ ಜೀವನಶೈಲಿ, ಆಹಾರ-ವಿಹಾರ ವಿಧಾನದಿಂದಾಗಿ ನಾವು ಅನೇಕ ಒತ್ತಡಗಳಿಗೆ ಒಳಗಾಗುತ್ತಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನಕ್ಕೆ ಯೋಗ ಸಹಕಾರಿಯಾಗಿದೆ.
ಜಾಗತಿಕ ಮಟ್ಟದಲ್ಲಿ ಯೋಗಕ್ಕೆ ಪ್ರಚಾರ ನೀಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.

ರಾಜೀವ್‌ಗಾಂಧಿ ಆರೋಗ್ಯ ವಿ.ವಿ. ಉಪಕುಲಪತಿ ಡಾ. ಭಗವಾನ್ ಬಿ.ಸಿ. ಆನ್‌ಲೈನ್  ಮೂಲಕ ಸಂದೇಶ ನೀಡಿ, ಯೋಗಾಭ್ಯಾಸ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಬೇಕು. ರಾಜೀವ್‌ಗಾಂಧಿ ಆರೋಗ್ಯ ವಿ.ವಿ.ಯ ೪೦೦ ಕಾಲೇಜುಗಳಲ್ಲಿ ೪೫೦೦೦ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.




ರಾಜೀವ್‌ಗಾಂಧಿ ಆರೋಗ್ಯ ವಿ.ವಿ. ಯ ಪಠ್ಯಕ್ರಮ ಅಭಿವೃದ್ಧಿ ಕೇಂದ್ರದ ಪ್ರಭಾರ ನಿರ್ದೇಶಕ ಡಾ. ಷಣ್ಮುಖಪ್ಪ ಮಾತನಾಡಿ, ಉಜಿರೆಯ ಎಸ್.ಡಿ.ಎಂ. ಪ್ರಕೃತಿಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಕಾಲೇಜು ಆಶ್ರಯದಲ್ಲಿ ವರ್ಷಕ್ಕೊಂದು ಗ್ರಾಮವನ್ನು ದತ್ತು ತೆಗೆದುಕೊಂಡು ಗ್ರಾಮೀಣ ಪ್ರದೇಶದ ಜನರಿಗೆ ಯೋಗಾಭ್ಯಾಸದ ತರಬೇತಿ ನೀಡಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ ೧೮ ಯೋಗವಿಜ್ಞಾನ ಮತ್ತು ಪ್ರಕೃತಿಚಿಕಿತ್ಸಾ ಪದವಿ ಕಾಲೇಜುಗಳಿದ್ದು ಉಜಿರೆ ಕಾಲೇಜು ಮತ್ತು ಶಾಂತಿವನ ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಸೇವೆ ಮತ್ತು ಸಾಧನೆಗೆ ಅಭಿನಂದಿಸಿದರು.
ಉಜಿರೆಯ ಕಾಲೇಜಿನಲ್ಲಿ ಅನಸ್ತೇಶಿಯಾ ಮತ್ತು ಅಕ್ಯುಪಂಕ್ಚರ್‌ನಲ್ಲಿ ಸ್ನಾತಕೋತ್ತರ ಪದವಿ ತರಗತಿಗಳಿಗೆ ಅನುಮತಿ ಕೋರಿದ್ದು ಸದ್ಯದಲ್ಲೆ ಅನುಮೋದನೆ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು. ಜೂನ್ ೨೧ ಅತೀ ದೀರ್ಘವಾದ ಹಗಲು ಇರುವುದರಿಂದ ವಿಶ್ವದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಗುತ್ತದೆ ಎಂದರು.

ಶಾಂತಿವನ ಪ್ರಕೃತಿಚಿಕಿತ್ಸಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ ಶೆಟ್ಟಿ ವರದಿ ಸಾದರಪಡಿಸಿ ಶಾಲಾ-ಕಾಲೇಜುಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯೋಗ ಶಿಬಿರ ನಡೆಸಿ, ಆರೋಗ್ಯ ರಕ್ಷಣೆ ಬಗ್ಯೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಬೆಂಗಳೂರಿನ ಕುಮಾರಿ ಚಿನ್ಮಯಿ ಅವರಿಗೆ “ಯೋಗರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಾಮೂಹಿಕ ಯೋಗ ಪ್ರದರ್ಶನ ನಡೆಸಲಾಯಿತು.


ಎಸ್.ಡಿ.ಎಂ. ಯೋಗವಿಜ್ಞಾನಗಳ ಮತ್ತು ಪ್ರಕೃತಿಚಿಕಿತ್ಸಾ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಉಪಪ್ರಾಂಶುಪಾಲರಾದ ಡಾ. ಸುಜಾತ, ಕೆ.ಜೆ. ಧನ್ಯವಾದವಿತ್ತರು.
ಡಾ. ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top