ಮಂಗಳೂರು: ಕಲ್ಕೂರ ಪ್ರತಿಷ್ಠಾನ (ರಿ) ಮಂಗಳೂರು ಇವರ ಸಹಯೋಗದೊಂದಿಗೆ ಸಾವಯವ ಕೃಷಿಕ ಗ್ರಾಹಕ ಬಳಗವು ಮಂಗಳೂರಿನ ಕದ್ರಿ ಕಂಬಳ ರಸ್ತೆಯ ಮಲ್ಲಿಕಾ ಬಡಾವಣೆಯ ‘ಮಂಜುಪ್ರಸಾದ’ ಆವರಣದಲ್ಲಿ ಆಯೋಜಿಸಿದ್ದ ಎರಡು ದಿನಗಳ ‘ಹಲಸು ಮಾವು ಮೇಳ’ವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.
ಪೇಜಾವರ ಶ್ರೀಗಳ ಸಂಸ್ಮರಣೆ ಹಾಗೂ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಷಷ್ಠ್ಯಬ್ಧ ಸಂಭ್ರಮಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ‘60 ನಾಡು ನುಡಿ ಜಾಗೃತಿ ಸಮ್ಮೇಳನ ಸರಣಿ’ ಕಾರ್ಯಕ್ರಮಗಳ ಭಾಗವಾಗಿ ಜೂನ್ 20 ಮತ್ತು 21ರಂದು ಈ ಮೇಳವನ್ನು ಆಯೋಜಿಸಲಾಗಿತ್ತು.
ಕಣ್ಮನ ಸೆಳೆದ 225ನೇ ಗಡಿನಾಡ ಸಾಂಸ್ಕೃತಿಕ ಉತ್ಸವ
ಮೇಳದ ಭವ್ಯ ಸಾಂಸ್ಕೃತಿಕ ವೇದಿಕೆಯಲ್ಲಿ ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ‘ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ) ಕಾಸರಗೋಡು’ ತಂಡದವರಿಂದ 225ನೇ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳ ವೈವಿಧ್ಯಮಯ ಪ್ರದರ್ಶನಗಳು ಜರುಗಿದವು.
ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಅವರ ಜನಪದ ನೃತ್ಯ, ಸ್ಮಯ ಸ್ಕಂದ ಅವರ ಯಕ್ಷ ನೃತ್ಯ ಹಾಗೂ ಸಾರ್ವಿ ಸ್ಕಂದ ಕಲಾವಿದರ ರಿಂಗ್ ನೃತ್ಯ ಸೇರಿದಂತೆ ವಿವಿಧ ಪ್ರಕಾರದ ಕಲಾ ಪ್ರದರ್ಶನಗಳು ನೆರೆದಿದ್ದ ಕಲಾಭಿಮಾನಿಗಳ ಮನಸೂರೆಗೊಂಡವು. ಕರಾವಳಿಯ ಸಾಂಪ್ರದಾಯಿಕ ಹಾಗೂ ಜಾನಪದ ಕಲೆಗಳ ಈ ಅನಾವರಣಕ್ಕೆ ಸಾರ್ವಜನಿಕರಿಂದ ಅಪಾರ ಶ್ಲಾಘನೆ ವ್ಯಕ್ತವಾಯಿತು.
ಕಲಾವಿದರಿಗೆ ಗೌರವ ಸಮರ್ಪಣೆ
ಇದೇ ಸಂದರ್ಭದಲ್ಲಿ ಕಲಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಗಡಿನಾಡಿನ ಕಲಾವಿದರನ್ನು ಕಲ್ಕೂರ ಪ್ರತಿಷ್ಠಾನದ ವತಿಯಿಂದ ಪ್ರಶಸ್ತಿ ಪತ್ರ ಹಾಗೂ ಗೌರವ ಸ್ಮರಣಿಕೆ ನೀಡಿ ಅತ್ಯಂತ ಗೌರವಾನ್ವಿತವಾಗಿ ಸತ್ಕರಿಸಲಾಯಿತು.
ಮೇಳಕ್ಕೆ ಆಗಮಿಸಿದ್ದ ನೂರಾರು ಸಾರ್ವಜನಿಕರು ಒಂದೆಡೆ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣುಗಳ ಸುವಾಸನೆ ಹಾಗೂ ವಿಶಿಷ್ಟ ಸ್ವಾದವನ್ನು ಆಸ್ವಾದಿಸುತ್ತಾ, ಇನ್ನೊಂದೆಡೆ ಗಡಿನಾಡ ಕಲಾವಿದರ ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು.
ಸಮಾರಂಭದಲ್ಲಿ ಕಲ್ಕೂರ ಪ್ರತಿಷ್ಠಾನದ ಪ್ರಮುಖರಾದ ಪ್ರದೀಪ್ ಕುಮಾರ್ ಕಲ್ಕೂರ, ಪೂರ್ಣಿಮ ಪೇಜಾವರ, ಅಬೂಬಕ್ಕರ್, ಶ್ರೀಕೃಷ್ಣ, ರವೀಂದ್ರ ಅಡ್ವರ್ಬ್ ಲೋಬೊ ಸೇರಿದಂತೆ ಸಾಮಾಜಿಕ ಹಾಗೂ ಸಾಂಸ್ಕೃತಿಕ ವಲಯದ ಪ್ರಮುಖ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


