ಪುತ್ತೂರು: ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ. ಶಿಕ್ಷಣದ ಮುಖ್ಯ ಉದ್ದೇಶ ಜ್ಞಾನಾರ್ಜನೆಯ ಜೊತೆಗೆ ಮುಂದಿನ ಬದುಕಿಗೆ ಬೇಕಾಗುವ ಮೌಲ್ಯಗಳ ಅರಿವು. ಈ ಎರಡು ಉದ್ದೇಶಗಳೊಂದಿಗೆ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಪರಿಪೂರ್ಣ ವ್ಯಕ್ತಿತ್ವದ ಅನಾವರಣ ಈ ಕ್ಯಾಂಪಸ್ ನಲ್ಲಿ ನಡೆಯುತ್ತಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಡಾ. ವಿಶಾಲ್ ಪಿಂಟೋ ಹೇಳಿದರು.
ಅವರು ಜೂ 13 ರಂದು ಕಾಲೇಜು ಸಭಾಂಗಣದಲ್ಲಿ ನಡೆದ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2026 - 27ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಕಾಲದಲ್ಲಿ ಜ್ಞಾನ ಹಾಗೂ ಆರೋಗ್ಯ ಅತ್ಯಂತ ಪ್ರಮುಖ ಅಂಶಗಳಾಗಿದ್ದು, ವಿದ್ಯಾರ್ಥಿಗಳು ಈ ಎರಡು ವಿಷಯಗಳ ಬಗ್ಗೆ ಹೆಚ್ಚು ಕಾಳಜಿಯನ್ನು ವಹಿಸಬೇಕು. ಕಠಿಣ ಪರಿಶ್ರಮ ಮತ್ತು ಉತ್ತಮ ಮೌಲ್ಯಗಳು ವ್ಯಕ್ತಿಗಳನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಬಲ್ಲದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಹೂಗುಚ್ಛ ನೀಡಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗುಣಿಕಾ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ. ಎ, ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್. ಕೆ ಸಹಿತ ತರಗತಿವಾರು ಪ್ರತಿನಿಧಿಗಳು, ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಪ್ರಮಾಣ ವಚನವನ್ನು ಬೋಧಿಸಿದರು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ - ಶಿಕ್ಷಕ ಸಂಘದ ಉಪಾಧ್ಯಕ್ಷ ದಿವ್ಯಾ ಅನಿಲ್ ರೈ ಹಾಗೂ ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದು,
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗುಣಿಕಾ ಗುರುಪ್ರಸಾದ್ ಸ್ವಾಗತಿಸಿ, ಕಾರ್ಯದರ್ಶಿ ಲಯ ತೇಜ. ಎ ಅತಿಥಿಗಳನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್. ಕೆ ವಂದಿಸಿ, ವಿದ್ಯಾರ್ಥಿನಿ ಸ್ವಿನಿಕಾ ವಿಯೋಲ ಕ್ರಾಸ್ತಾ ಕಾರ್ಯಕ್ರಮವನ್ನು ನಿರೂಪಿಸಿದರು.


