ಉಡುಪಿ: ಜಿಲ್ಲೆಯಲ್ಲಿ
ಜೂನ್ 21 ರಂದು ನಡೆಯಲಿರುವ ನೀಟ್
(ಯುಜಿ) ಮರು ಪರೀಕ್ಷೆಯಲ್ಲಿ ಯಾವುದೇ
ಲೋಪದೋಷ ಉಂಟಾಗದಂತೆ ಪಾರದರ್ಶಕವಾಗಿ ಪರೀಕ್ಷೆ
ನಡೆಸಲು ಅಗತ್ಯವಿರುವ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ
ಸೂಚನೆ ನೀಡಿದರು.
ಅವರು
ಇಂದು ನಗರದ ಮಣಿಪಾಲ ರಜತಾದ್ರಿಯ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನೀಟ್ ಮರು
ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ಸಂಬಂಧ ಆಯೋಜಿಸಲಾದ
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ
ಮಾತನಾಡಿದರು.
ನ್ಯಾಷನಲ್
ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನೀಟ್ ಮರು ಪರೀಕ್ಷೆಯು
ಜೂನ್ 21 ರಂದು ಜಿಲ್ಲೆಯ ಒಟ್ಟು
6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ 938 ಬಾಲಕರು, 2032 ಬಾಲಕಿಯರು, 7 ಪಿಡಬ್ಯ್ಲೂ ಬಿ.ಡಿ
ಅಭ್ಯರ್ಥಿಗಳು ಹಾಗೂ 1 ಸ್ಕ್ರೈಬ್ ಸೌಲಭ್ಯ ಪಡೆದಿರುವ
ಅಭ್ಯರ್ಥಿಗಳು ಸೇರಿದಂತೆ ಒಟ್ಟು 2970 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ವಿದ್ಯಾರ್ಥಿಗಳಿಗೆ ಗೊಂದಲ ಉಂಟಾಗದಂತೆ ಪರೀಕ್ಷಾ ಕಾರ್ಯವನ್ನು
ನಡೆಸಬೇಕು. ವಿದ್ಯಾರ್ಥಿಗಳು ಯಾವುದೇ ರೀತಿಯ ಗೊಂದಲವಾಗದಂತೆ ನಿರಾಳವಾಗಿ ಪರೀಕ್ಷೆ
ಬರೆಯಲು ಪೂರಕ ವಾತಾವರಣ ನಿರ್ಮಿಸಬೇಕು
ಎಂದರು.
ನೀಟ್
ಮರು ಪರೀಕ್ಷೆಯು ಜೂನ್ 21 ರಂದು ಮಧ್ಯಾಹ್ನ 2 ರಿಂದ
ಸಂಜೆ 5.15 ರ ವರೆಗೆ ನಡೆಯಲಿದೆ.
ಕಳೆದ ಬಾರಿಗಿಂತ ಈ ಬಾರಿ ವಿದ್ಯಾರ್ಥಿಗಳಿಗೆ
ಹೆಚ್ಚುವರಿಯಾಗಿ 15 ನಿಮಿಷಗಳ ಕಾಲಾವಕಾಶವನ್ನು ನೀಡಲಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ನಿಯಮಾನುಸಾರ ಒಂದು ಗಂಟೆ ಹೆಚ್ಚುವರಿ
ಸಮಯಾವಕಾಶ ಇರಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ
ವರೆಗೆ ವಿದ್ಯಾರ್ಥಿಗಳ ಪರಿಶೋಧನೆ ಕಾರ್ಯವನ್ನು ನಡೆಸಿ, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಿಗೆ ತೆರಳಲು ಅನುವು ಮಾಡಿಕೊಡಬೇಕು, ನಂತರ ಬರುವ ವಿದ್ಯಾರ್ಥಿಗಳಿಗೆ
ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಎಂದರು.
ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ಗಳು, ಕ್ಯಾಲ್ಕುಲೇಟರ್, ಬ್ಲ್ಯೂ ಟೂತ್
ಡಿವೈಸ್, ಇಯರ್ ಫೋನ್ಸ್ ಸೇರಿದಂತೆ
ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಮತ್ತು
ವಾಲೆಟ್ಸ್, ಹ್ಯಾಂಡ್ ಬ್ಯಾಗ್ ಧರಿಸುವುದು ನಿಷೇಧಿಸಲಾಗಿದೆ ಎಂದ ಅವರು, ಪರೀಕ್ಷೆಗಳು
ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರಬೇಕು ಹಾಗೂ ತಮ್ಮ ಪರೀಕ್ಷಾ
ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಮೂಲ
(ಒರಿಜಿನಲ್) ಗುರುತಿನ ಚೀಟಿಯೊಂದಿಗೆ (ಕಾಲೇಜಿನ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ
ಮತ್ತಿತರ ಮೂಲಪ್ರತಿ) ಸೂಚನೆಯಲ್ಲಿ ತಿಳಿಸಿರುವಂತೆ 2 ಭಾವಚಿತ್ರಗಳೊಂದಿಗೆ ಪರೀಕ್ಷೆಗೆ ಹಾಜರಿರಬೇಕು ಎಂದರು.
ಪರೀಕ್ಷಾ
ಕೇಂದ್ರಗಳಲ್ಲಿ ಸಿಸಿಟಿವಿ ಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅಭ್ಯರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು. ಪ್ರಶ್ನೆ ಪತ್ರಿಕೆ ತರಿಸಿಕೊಳ್ಳಲು, ಉತ್ತರ ಪತ್ರಿಕೆ ರವಾನೆಗೆ ಅನುಕೂಲವಾಗುವಂತೆ ವಾಹನ ಸಿದ್ಧವಾಗಿಟ್ಟುಕೊಳ್ಳಬೇಕು. ಪರೀಕ್ಷಾ ಕೇಂದ್ರಗಳ
ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ ನಿರಂತರ ವಿದ್ಯುತ್
ಸಂಪಕ್ ಕಲ್ಪಿಸುವಂತೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ ಅವರು, ತುರ್ತು ಸಂದರ್ಭಗಳನ್ನು ಎದುರಿಸಲು ಅನುಕೂಲವಾಗುವಂತೆ ಅಗ್ನಿ ಶಾಮಕ ವಾಹನಗಳು ಸನ್ನಧ್ಧರಾಗಿರಬೇಕು.
ಮುಂಜಾಗ್ರತೆಯಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು.
ನೀಟ್
ಮರುಪರೀಕ್ಷೆ ಸಂಬಂಧ ನಿಯೋಜಿಸಲಾದ
ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದರೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯವಿರುವ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವುದೇ
ಸಣ್ಣ ಲೋಪಕ್ಕೂ ಅವಕಾಶ ನೀಡದಂತೆ ಅಧಿಕಾರಿಗಳು ಹೆಚ್ಚು ಮಾರ್ಗಸೂಚಿಯನ್ವಯ ಜಾಗರೂಕರಾಗಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದರು.
ನೀಟ್
ಪರೀಕ್ಷೆಯ ಜಿಲ್ಲಾ ನೋಡಲ್ ಅಧಿಕಾರಿಯಾದ ಉಡುಪಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಎನ್.ಕರೀಂ ಖಾನ್
ಮಾತನಾಡಿ, ನೀಟ್ ಮರು ಪರೀಕ್ಷೆಯು
ಜಿಲ್ಲೆಯ ಆರು ಪರೀಕ್ಷಾ ಕೇಂದ್ರಗಳಾದ
ಅಜ್ಜರಕಾಡು ಡಾ.ಜಿ.ಶಂಕರ್
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಕೋಟ ವಿವೇಕ ಪಿ.ಯು ಕಾಲೇಜು, ಉಡುಪಿಯ
ಎಂ.ಜಿ.ಎಂ ಪಿಯು
ಕಾಲೇಜು, ಉಡುಪಿಯ ಸರ್ಕಾರಿ ಪಿ.ಯು ಬೋರ್ಡ್,
ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು
ಹಾಗೂ ಬ್ರಹ್ಮಾವರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ
ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ
ಕಡೆಯಿಂದ ಮೆಟಲ್ ಡಿಡೆಕ್ಟರ್ ಅಳವಡಿಸಲಾಗಿದ್ದು, ಬಾಲಕ ಹಾಗೂ ಬಾಲಕಿಯರಿಗೆ
ಪ್ರತ್ಯೇಕವಾಗಿ ಪ್ರಿಸ್ಕಿಂಗ್ ನಡೆಸಲಾಗುವುದು. ಬಯೋಮೆಟ್ರಿಕ್ ದೃಢೀಕರಣದ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಪರೀಕ್ಷೆ ಮುಗಿದ ನಂತರ ಓ.ಎಂ.ಆರ್ ಶೀಟ್ಗಳನ್ನು ವ್ಯವಸ್ಥಿತವಾಗಿ ಜೋಡಿಸಿ, ಮಾರ್ಗಸೂಚಿಯನುಸಾರ ಕ್ರಮ ವಹಿಸಬೇಕೆಂದರು.
ಸಭೆಯಲ್ಲಿ
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಪದವಿ ಪೂರ್ವ ಶಿಕ್ಷಣ
ಇಲಾಖೆಯ ಉಪನಿರ್ದೇಶಕ ಮಾರುತಿ, ನೀಟ್ ಪರೀಕ್ಷೆಯ ಡೆಪ್ಯೂಟಿ
ಸಿಟಿ ಕೋ-ಆರ್ಡಿನೇಟರ್ ಆದ
ಕೇಂದ್ರೀಯ ವಿದ್ಯಾಲಯದ ಶಿಕ್ಷಕ ವಸಂತ ಪದ್ಮಶಾಲಿ, ವಿವಿಧ
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


