ಮಂಗಳೂರು: ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ 2026-27 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಅತಿಥಿಗಳು, ಸಂಚಾಲಕರು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಜ್ಯೋತಿ ಬೆಳಗಿಸಿ ವಿದ್ಯಾರ್ಥಿ ಪರಿಷತ್ತನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಂಸಿಸಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಅನಿಲ್ ಲೋಬೊ ಮಾತನಾಡಿ, ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳುವುದು ಬಹಳ ಮುಖ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರೂ ಆಗಿರುವ ವಂ. ಐವನ್ ಮೈಕಲ್ ರೊಡ್ರಿಗಸ್ ಮಾತನಾಡಿ, ವಿದ್ಯಾರ್ಥಿ ಜೀವನವು ಕೇವಲ ಶಿಕ್ಷಣಕ್ಕೆ ಸೀಮಿತವಾಗಿರದೆ, ಶಿಸ್ತು, ನಾಯಕತ್ವ, ಸಮಯಪ್ರಜ್ಞೆ ಮತ್ತು ವ್ಯಕ್ತಿತ್ವ ವಿಕಸನವನ್ನು ರೂಢಿಸಿಕೊಳ್ಳುವ ಸುವರ್ಣಾವಕಾಶವಾಗಿದೆ ಎಂದರು.
ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ಶೇಖ್ ಜಾಕಿರ್, ಉಪಾಧ್ಯಕ್ಷೆ ಕು. ಸಿಂಚನ, ವಿವಿಧ ಕ್ಷೇತ್ರದ ಕಾರ್ಯದರ್ಶಿಗಳು ಮತ್ತು ಇತರ ಪದಾಧಿಕಾರಿಗಳಿಗೆ ಗಣ್ಯರು ಬ್ಯಾಡ್ಜ್ಗಳನ್ನು ವಿತರಿಸಿ ಗೌರವಿಸಿದರು. ನಂತರ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮೆಲ್ವಿನ್ ವಾಸ್ ಇವರು ನೂತನ ಸದಸ್ಯರಿಗೆ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಕ್ಯಾಂಪಸ್ ನಿರ್ದೇಶಕರು ಹಾಗೂ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ| ಆಲ್ವಿನ್ ಸೆರಾವೊ, ಮಿಲಾಗ್ರಿಸ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರಾದ ಉದಯ ಫೆರ್ನಾಂಡಿಸ್ , ಮಿಲಾಗ್ರಿಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಡಿಕ್ಸನ್ ಡಿಸೋಜಾ , ಕಾರ್ಯದರ್ಶಿ ಶ್ರೀಮತಿ ಜಸಿಂತಾ ಫೆರ್ನಾಂಡಿಸ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲಿಡ್ವಿನ್ ಫರ್ನಾಂಡಿಸ್ ನಿರೂಪಿಸಿ, ಕಾರ್ಯಕ್ರಮದ ಸಂಯೋಜಕಿ ಶೆರಿಲ್ ಪಿಂಟೊ ಅವರು ನೆರೆದ ಸರ್ವರನ್ನು ಸ್ವಾಗತಿಸಿದರು. ಕಾಲೇಜು ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಝೈನ್ ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕೊನೆಯಲ್ಲಿ ಕಾಲೇಜು ಗೀತೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ



