ಕಾನೂನು ವಿದ್ಯಾರ್ಥಿಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಕುಮಾರ್ ಎಂ. ಎನ್.
ಪುತ್ತೂರು: ನಗರದಲ್ಲಿರುವ ವಿವೇಕಾನಂದ ಕಾನೂನು ಮಹಾವಿದ್ಯಾಲಯದ 38ನೇ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೇಂದ್ರ ಸರ್ಕಾರದ ಸೀನಿಯರ್ ಪ್ಯಾನೆಲ್ ವಕೀಲರು, ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಬೆಂಗಳೂರು D. R. I ಮತ್ತು DGGI ಸೀನಿಯರ್ ಸ್ಟ್ಯಾಂಡಿಂಗ್ ವಕೀಲರಾದ ಕುಮಾರ್ ಎಮ್. ಎನ್ ರವರು ಇದೇ ವೇಳೆ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ನೂತನ ವೆಬ್ಸೈಟ್ ಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಯುವ ಮನಸ್ಸುಗಳ ಓದಿನ ಅಭ್ಯಾಸವೇ ಅವರ ಬದುಕಿನ ಶಕ್ತಿ ಕೇಂದ್ರ. ಪುಸ್ತಕವು ವ್ಯಕ್ತಿಯ ಚಿಂತನೆಗೆ ದಿಕ್ಕು ತೋರಿಸುವ ಗುರುವಾಗಿದೆ. ವಿದ್ಯಾರ್ಥಿಗಳ ಸಾಧನೆ ಎಂದರೆ ಕೇವಲ ಅಂಕಗಳಲ್ಲ. ವ್ಯಕ್ತಿತ್ವ ನಿರ್ಮಾಣವೂ ಅದರ ಜೊತೆಗೆ ಮಹತ್ವದ್ದಾಗಿದೆ. ಶಿಕ್ಷಣ ಎಂದರೆ ಉದ್ಯೋಗ ಸಿಗುವ ಮಾರ್ಗ ಮಾತ್ರವಲ್ಲ. ಅದು ವ್ಯಕ್ತಿತ್ವ ನಿರ್ಮಾಣದ ಮೂಲನೆಲೆಯಾಗಿದೆ. ಕಾನೂನು ವಿದ್ಯಾರ್ಥಿಗಳು ಸತತ ಅಭ್ಯಾಸದೊಂದಿಗೆ ತಮ್ಮ ಧ್ವನಿಯನ್ನು ಸ್ವಸ್ಥ ಸಮಾಜ ನಿರ್ಮಾಣದತ್ತ ರವಾನಿಸಬೇಕು. ಯುವಜನಾಂಗ ಮಾನವೀಯತೆಯೊಂದಿಗೆ ಕೈಜೋಡಿಸಿದಾಗ ಸಮಾಜದಲ್ಲಿ ನಿಜವಾದ ಬದಲಾವಣೆ ನಡೆಯುತ್ತದೆ ಎಂದ ಅವರು, ಕಾಲೇಜು ನಡೆಸುತ್ತಿರುವ ನೈತಿಕತೆ ಆಧಾರಿತ ಶೈಕ್ಷಣಿಕ ಚಟುವಟಿಕೆಗಳನ್ನು ಶ್ಲಾಘಿಸಿ, ಸಂಸ್ಥೆಯ ಮುಂದಿನ ಬೆಳವಣಿಗೆಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಭಾರತೀಯ ಸಂಸ್ಕೃತಿಗೆ ತನ್ನದೆಯಾದ ವಿಶೇಷ ಪರಿಕಲ್ಪನೆಯ ಸ್ಥಾನ ಮಾನಗಳಿದ್ದು, ಈ ನಿಟ್ಟಿನಲ್ಲಿ ಭಾರತೀಯ ಸನಾತನ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಮ್ಮ ದೇಶದ ಸಂಸ್ಕೃತಿಯನ್ನು, ಹೊರದೇಶದವರು ಅಳವಡಿಸಿಕೊಂಡು ನೆಮ್ಮದಿ ಜೀವನ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮುಂದಿನ ಪಿಳಿಗೆ ನೆಮ್ಮದಿ ಜೀವನ ನಡೆಸಲು ನಮ್ಮ ತನವನ್ನು ಉಳಿಸಿ ಬೆಳಸಿಕೊಂಡು ಹೋಗುವುದು ಅತಿ ಅಗತ್ಯವಾಗಿದೆ ಎಂದರು. ಜೊತೆಗೆ ಯಾರು ಮುಂದಿನ ಪೀಳಿಗೆ ಹೆಮ್ಮೆ ಹಾಗೂ ಸ್ವಾಭಿಮಾನದಿಂದ ಬದುಕುವಂತೆ ಮಾಡುತ್ತಾರೋ ಅವರ ಜೀವನ ಸಾರ್ಥಕ ಎಂಬ ಮಾತಿದೆ. ಸಮಾಜಕ್ಕೋಸ್ಕರ ನಾವು ಸೇವೆ ಸಲ್ಲಿಸಬೇಕು. ಅಂತಹ ಕೆಲಸವನ್ನು ಕಾನೂನು ವಿದ್ಯಾರ್ಥಿಗಳಾದ ನೀವೆಲ್ಲ ಮಾಡಬೇಕು ಎಂದು ಕರೆ ನೀಡಿದರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಸುರೇಂದ್ರ ಕಿಣಿ ಜಿ. ಮಾತನಾಡಿ, ಕಾಲೇಜಿನ ಸಾಧನೆಗಳ ಕುರಿತು ವಿವರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಂಚಾಲಕರಾದ ವಿಜಯನಾರಾಯಣ ಕೆ.ಎಂ., ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ.ಕೆ. ರವೀಂದ್ರ ಹಾಗೂ ಮಹಾವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಸಂಧ್ಯಾ ಪಿ. ಎಂ. ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಅಕ್ಷತಾ ಎ.ಪಿ. ವಾರ್ಷಿಕ ವರದಿ ಓದಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಉಜಿತ್ ಶ್ಯಾಮ್ ಸಿ. ಕೆ. ವಿದ್ಯಾರ್ಥಿ ಪರಿಷತ್ ನ ಕಾರ್ಯ ಚಟುವಟಿಕೆಗಳ ವರದಿ ವಾಚನ ಮಾಡಿದರು. ವಿದ್ಯಾರ್ಥಿ ಪರಿಷತ್ ಕಾರ್ಯದರ್ಶಿ ವೇಗನ್ ಎ. ಎಲ್. ಸ್ವಾಗತಿಸಿ, ವಿದ್ಯಾರ್ಥಿ ಪರಿಷತ್ ಜೊತೆ ಕಾರ್ಯದರ್ಶಿ ಪ್ರಿಯಾ ಎಸ್. ವಂದಿಸಿದರು. ವಿದ್ಯಾರ್ಥಿ ದಿಲೀಪ್ ಬಿ. ಎಸ್. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರು, ವಕೀಲರ ಸಂಘದ ಸದಸ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


