ಬೆಂಗಳೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ 14ನೆಯ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನವನ್ನು ಬೆಂಗಳೂರಿನ ವಿಜಯನಗರದ 'ಶ್ರೀ ಬಸವೇಶ್ವರ ಸುಜ್ಞಾನ ಮಂಟಪ'ದಲ್ಲಿ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
1988ರ ನಂತರ ದೀರ್ಘಾವಧಿಯ ಬಳಿಕ ರಾಜಧಾನಿಯಲ್ಲಿ ಈ ಕೇಂದ್ರ ಸಮ್ಮೇಳನ ನಡೆಯುತ್ತಿರುವುದು ವಿಶೇಷವಾಗಿದೆ. ನಾಡಿನ ಹಿರಿಯ ಸಾಹಿತಿ ನಾಡೋಜ ಗೊ.ರು. ಚನ್ನಬಸಪ್ಪ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ. ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಮಠದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮತ್ತು ಸಿದ್ದಗಂಗಾ ಕ್ಷೇತ್ರದ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ 'ಕಲ್ಯಾಣ ಸಂಗಮ' ಸ್ಮರಣ-ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಚಿವ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಎಂ.ಬಿ. ಪಾಟೀಲ್ 'ಮಹಾಮನೆ' ವಿಶೇಷ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ತಿಳಿಸಿದ್ದಾರೆ.
ಸಮ್ಮೇಳನದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ, ಮಹಿಳಾ ಸಂವೇದನೆ ಸೇರಿದಂತೆ ವಿವಿಧ ವೈಚಾರಿಕ ಗೋಷ್ಠಿಗಳು ಮತ್ತು ಆಧುನಿಕ ವಚನ ಗೋಷ್ಠಿ ನಡೆಯಲಿವೆ. ಶ್ರೀಮತಿ ವೈಜಯಂತಿ ಕಾಶಿ ತಂಡದಿಂದ ನೃತ್ಯರೂಪಕ ಹಾಗೂ ಎಂ.ಡಿ. ಪಲ್ಲವಿ, ಸಂಗೀತಾ ಕಟ್ಟಿ ಸೇರಿದಂತೆ ಪ್ರಸಿದ್ಧ ಕಲಾವಿದರಿಂದ ವಚನ ಗಾಯನ ಇರಲಿದೆ. ಸಮಾರೋಪ ಸಮಾರಂಭದ ಸಾನಿಧ್ಯವನ್ನು ತೋಂಟದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು, ಹುಬ್ಬಳ್ಳಿ ಮೂರುಸಾವಿರ ಮಠದ ಶ್ರೀ ಗುರುಸಿದ್ದ ರಾಜಯೋಗೀಂದ್ರ ಮಹಾಸ್ವಾಮಿಗಳು ಮತ್ತು ಭಾಲ್ಕಿ ಮಠದ ಡಾ. ಶ್ರೀ ಬಸವಲಿಂಗ ಪಟ್ಟದ್ದೇವರು ವಹಿಸಲಿದ್ದಾರೆ.
ಸಮಾರೋಪದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಧಕರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಸಚಿವ ಈಶ್ವರ್ ಬಿ. ಖಂಡ್ರೆ ಶರಣ ಸಾಹಿತ್ಯದ ಅನುಭಾವ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಡಾ. ಪ್ರಭಾಕರ್ ಕೋರೆ, ಶಾಸಕ ಬಿ.ವೈ. ವಿಜಯೇಂದ್ರ, ಬಿ.ಎಸ್. ಪರಮಶಿವಯ್ಯ ಮತ್ತು ನಾಡೋಜ ಎಸ್. ಷಡಕ್ಷರಿ ಪಾಲ್ಗೊಳ್ಳಲಿದ್ದಾರೆ. ಕೊನೆಯಲ್ಲಿ ನಾಗರತ್ನ ಹಡಗಲಿ ತಂಡದಿಂದ ನೃತ್ಯರೂಪಕ ಹಾಗೂ 'ಶಿವರಾತ್ರಿ' ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಡಾ. ಸಿ. ಸೋಮಶೇಖರ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


