ನಿಖರವಾದ ಹಾಗೂ ವೈಜ್ಞಾನಿಕ ನಿರ್ಧಾರಗಳಿಗೆ ಸಂಖ್ಯಾಶಾಸ್ತ್ರ ಅಡಿಪಾಯ: ಡಾ. ಅಂತೀಶ್ ಆರ್
ಉಜಿರೆ: ಸಂಖ್ಯಾಶಾಸ್ತ್ರವೆಂದರೆ ಕೇವಲ ಅಂಕಿ-ಅಂಶಗಳ ಸಂಗ್ರಹವಲ್ಲ, ಇದು ಮಾಹಿತಿಯನ್ನು ಸಂಗ್ರಹಿಸಿ, ವರ್ಗೀಕರಿಸಿ, ವಿಶ್ಲೇಷಿಸುವ ತಂತ್ರಗಾರಿಕೆ. ಎಲ್ಲಾ ಕ್ಷೇತ್ರಗಳಲ್ಲೂ ಇವುಗಳ ಆಧಾರದ ಮೇಲೆ ನಿಖರವಾದ ಹಾಗು ವೈಜ್ಞಾನಿಕ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ರಾಷ್ಟ್ರದ ಅಭಿವೃದ್ಧಿ, ಯೋಜನೆಗಳ ರೂಪುರೇಷೆ, ಸಂಪನ್ಮೂಲಗಳ ಸಮರ್ಪಕ ಬಳಕೆ ಮತ್ತು ಸಾರ್ವಜನಿಕ ನೀತಿಗಳ ಯಶಸ್ವಿ ಅನುಷ್ಠಾನದಲ್ಲಿ ಸಂಖ್ಯಾಶಾಸ್ತ್ರವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಜಿರೆಯ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಅಂತೀಶ್ ಆರ್ ಅಭಿಪ್ರಾಯಪಟ್ಟರು.
ಇವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನದ ಅಂಗವಾಗಿ ಆಯೋಜಿಸಿದ್ದ ಸಂಖ್ಯಾಶಾಸ್ತ್ರ ದಿನ ಆಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿದರು.
ಭಾರತದಲ್ಲಿ ಪ್ರತಿವರ್ಷ ಜೂನ್ 29ರಂದು ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಭಾರತದ ಶ್ರೇಷ್ಠ ಸಂಖ್ಯಾಶಾಸ್ತ್ರಜ್ಞ, ಯೋಜನಾಕಾರ, ಅರ್ಥಶಾಸ್ತ್ರಜ್ಞ ಹಾಗೂ ವಿಶ್ವವಿಖ್ಯಾತ ವಿಜ್ಞಾನಿ ಪ್ರಶಾಂತ ಚಂದ್ರ ಮಹಾಲನೋಬಿಸ್ ಅವರ ಕೊಡುಗೆಯನ್ನು ನೆನಪಿಸಲಾಗುತ್ತದೆ. ಸಂಖ್ಯಾಶಾಸ್ತ್ರ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಅಪ್ರತಿಮ ಸೇವೆಯನ್ನು ಗೌರವಿಸುವುದರ ಜೊತೆಗೆ, ರಾಷ್ಟ್ರದ ಅಭಿವೃದ್ಧಿಯಲ್ಲಿ ಸಂಖ್ಯಾಶಾಸ್ತ್ರದ ಮಹತ್ವವನ್ನು ಜನಸಾಮಾನ್ಯರಿಗೆ ಪರಿಚಯಿಸುವ ಉದ್ದೇಶದಿಂದ ಭಾರತ ಸರ್ಕಾರವು 2007ರಿಂದ ರಾಷ್ಟ್ರೀಯ ಸಂಖ್ಯಾಶಾಸ್ತ್ರ ದಿನವನ್ನು ಆಚರಿಸುತ್ತಿದೆ.
ಪ್ರಶಾಂತ ಚಂದ್ರ ಮಹಾಲನೋಬಿಸ್ ಅವರು ಭಾರತದ ಸಂಖ್ಯಾಶಾಸ್ತ್ರ ಕ್ಷೇತ್ರಕ್ಕೆ ಹೊಸ ದಿಕ್ಕನ್ನು ನೀಡಿದ ಮಹಾನ್ ವಿಜ್ಞಾನಿಗಳಲ್ಲಿ ಒಬ್ಬರು. ಅವರು ಸ್ಥಾಪಿಸಿದ ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಇನ್ಸ್ಟಿಟ್ಯೂಟ್ (Indian Statistical Institute - ISI) ಇಂದು ವಿಶ್ವದ ಪ್ರಮುಖ ಸಂಖ್ಯಾಶಾಸ್ತ್ರೀಯ ಸಂಶೋಧನಾ ಸಂಸ್ಥೆಗಳಲ್ಲಿ ಒಂದಾಗಿದೆ. ಅವರು ರೂಪಿಸಿದ ಮಹಾಲನೋಬಿಸ್ ದೂರ (Mahalanobis Distance) ಎಂಬ ಸಂಖ್ಯಾಶಾಸ್ತ್ರೀಯ ಪರಿಕಲ್ಪನೆ ಇಂದಿಗೂ ದತ್ತಾಂಶ ವಿಶ್ಲೇಷಣೆ, ಕೃತಕ ಬುದ್ಧಿಮತ್ತೆ, ಯಂತ್ರ ಅಧ್ಯಯನ ಹಾಗೂ ವೈಜ್ಞಾನಿಕ ಸಂಶೋಧನೆಗಳಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತಿದೆ. ಮಾದರಿ ಸಮೀಕ್ಷೆ (Sample Survey) ವಿಧಾನವನ್ನು ಭಾರತದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಹಾಗು ವಿಜ್ಞಾನ ವಿಭಾಗದ ಡೀನ್ ಡಾ. ಸವಿತಾ ಕುಮಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ವಿದ್ಯಾರ್ಥಿನಿ ಶಿಲ್ಪಾ ಸ್ವಾಗತಿಸಿ, ಭೂಮಿಕಾ ನಿರೂಪಿಸಿ, ವಿದ್ಯಾರ್ಥಿನಿ ಶ್ರಾವ್ಯ ವಂದಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಉಪನ್ಯಾಸಕಿ ಮಂಜುಳಾ ಸಂಯೋಜಿಸಿದರು.


