ಪುತ್ತೂರು: ಮಕ್ಕಳಿಗೆ ವಾಸ್ತವವನ್ನು ತಿಳಿ ಹೇಳಬೇಕು. ವಾಸ್ತವವನ್ನು ವಿದ್ಯಾರ್ಥಿಗಳು ಅರಿತಾಗ ಅವರಿಗೆ ಜವಾಬ್ದಾರಿಯ ಅರಿವಾಗುತ್ತದೆ. ಈ ಮೂಲಕ ಹಲವಾರು ಸಮಸ್ಯೆಗಳಿಗೆ ಪರಿಹಾರವನ್ನು ಕಂಡು ಕೊಳ್ಳಬಹುದು ಎಂದು ಕೆ.ವಿ.ಜಿ. ಪಾಲಿಟೆಕ್ನಿಕ್ ಕಾಲೇಜು, ಸುಳ್ಯ ಇಲ್ಲಿನವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಚಂದ್ರಶೇಖರ ಬಿಳಿನೆಲೆ ಹೇಳಿದರು.
ಜುಲೈ 25 ರಂದು ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಭಾಭವನದಲ್ಲಿ ನಡೆದ 2026- 27ನೇ ಸಾಲಿನ ರಕ್ಷಕ- ಶಿಕ್ಷಕ ಸಂಘದ ಮಹಾಸಭೆಯ ಸಂಪನ್ಮೂಲ ವ್ಯಕ್ತಿಯಾಗಿ 'ಪೋಷಕರು- ಶಿಕ್ಷಕರ ಸಹಭಾಗಿತ್ವ: ಮಕ್ಕಳ ಯಶಸ್ಸಿನ ಕೀಲಿ' ಯ ಕುರಿತು ಚಿಂತನ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಸಂಸ್ಕಾರವನ್ನು ನೀಡುವ ಹೆಚ್ಚಿನ ಜವಾಬ್ದಾರಿಯನ್ನು ಪೋಷಕರು ತೆಗೆದುಕೊಳ್ಳಬೇಕು. ಪೋಷಕರ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ಉಪನ್ಯಾಸಕರು ನೀಡಬಹುದು. ಶಿಕ್ಷಕರು ಮತ್ತು ಪೋಷಕರು ಒಂದಾಗಿ ಮಕ್ಕಳ ಭವಿಷ್ಯಕ್ಕಾಗಿ ಕೆಲಸಮಾಡಬೇಕಾಗಿದೆ. ಉತ್ತಮ ವಾತಾವರಣದಲ್ಲಿ ಬೆಳೆದ ಮಕ್ಕಳಿಗೆ, ಗುಣಮಟ್ಟದ ಶಿಕ್ಷಣ ಮತ್ತು ಶ್ರೇಷ್ಠ ಸಂಸ್ಕಾರ ಸಾಕಷ್ಟು ಅವಕಾಶಗಳನ್ನು ನೀಡುತ್ತದೆ. ವಿದ್ಯಾರ್ಥಿಗಳಿಗೆ ಜೀವನದ ಪಾಠವನ್ನು ಕಲಿಸುವ ಕೆಲಸವನ್ನು ಇಂತಹ ಶಿಕ್ಷಕ ಪೋಷಕರ ಸಭೆಗಳು ಮಾಡಬೇಕಾಗಿದ್ದು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಈ ಪ್ರಯತ್ನ ಶ್ಲಾಘನೀಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾಯಿ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ.ಫಾ. ಜಾನ್ ಬಾಪ್ಟಿಸ್ಟ್ ಸಲ್ದಾನ್ಹ ಮಾತನಾಡಿ, ಪದವಿ ಪೂರ್ವ ಶಿಕ್ಷಣದ ನಂತರ ನಮ್ಮದೇ ಸಂಸ್ಥೆಯಲ್ಲಿ ಉತ್ತಮ ಕೋರ್ಸ್ ಗಳನ್ನೂ ಆರಂಭಿಸಿದ್ದು, ತಾವು ಇದರ ಪ್ರಯೋಜನವನ್ನು ಪಡೆಯಬಹುದು. ಇಂದಿನ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ಬೇಕಾಗಿರುವುದು ನಮ್ಮ ನಡತೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು ಜಾಗೃತರಾಗಿದ್ದು, ತಮ್ಮ ಉತ್ತಮ ನಡತೆಯ ಮೂಲಕವೇ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಬದಲಾವಣೆಯನ್ನು ತರಬಹುದು ಎಂದು ಹೇಳಿದರು.
2026- 27ನೇ ಸಾಲಿನ ನೂತನ ಉಪಾಧ್ಯಕ್ಷರಾಗಿ ಡಾನ್ ಬಾಸ್ಕೋ ಕ್ಲಬ್ನ ಸದಸ್ಯರಾದ ಆಂಟೋನಿ ಒಲಿವೇರಾ ಇವರನ್ನು ಆಯ್ಕೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪುತ್ತೂರು ಮಾಯಿ ದೆ ದೇವುಸ್ ಚರ್ಚ್ ನ ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷರಾದ ರೋಶನ್ ಲಾಸ್ರಾದೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ರಕ್ಷಕ- ಶಿಕ್ಷಕ ಸಂಘದ ಕಾರ್ಯದರ್ಶಿ ಅಶ್ವಿನಿ ಕೆ ಸ್ವಾಗತಿಸಿ, 2025-26ನೇ ಸಾಲಿನ ಲೆಕ್ಕಪತ್ರವನ್ನು ಕೋಶಾಧಿಕಾರಿ ಸಂಜಯ್ ಎಸ್ ಮಂಡಿಸಿ, ವಂದಿಸಿದರು. ಉಷಾ ಎ ಕಾರ್ಯಕ್ರಮ ನಿರೂಪಿಸಿದರು.


