ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ದಕ ಸಂಘದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಗ್ರಂಥಾಲಯ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತರುವ ಜಯರಾಮ ಪಿ. ಹಾಗು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕಛೇರಿ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಎಸ್. ಸತ್ಯನಾರಾಯಣ ಜುಲೈ 31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
ಜಯರಾಮ ಪಿ. ಅವರು ಪಡ್ನೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿ, ಸರಕಾರಿ ಪ್ರೌಢ ಶಾಲೆ ಕೊಂಬೆಟ್ಟಿನಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಪಡೆದು, 1994ರಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕಾವಲುಗಾರನಾಗಿ ವೃತ್ತಿ ಅರಂಭಿಸಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಬಳಿಕ ಸಂಸ್ಥೆಯ ಗ್ರಂಥಾಲಯದಲ್ಲಿ ನಾಲ್ಕನೇ ದರ್ಜೆಯ ನೌಕರನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಪುತ್ತೂರು ಗೃಹ ರಕ್ಷಕ ದಳದಲ್ಲಿ ಸೆಕ್ಷನ್ ಲೀಡರ್ ಆಗಿ ಕವಾಯಿತು ಮಾಡಿದ್ದಾರೆ. ಜೊತೆಗೆ ಪ್ರವಾಹ ರಕ್ಷಣಾ ತರಬೇತಿ, ಅಗ್ನಿ ಶಾಮಕ ತರಬೇತಿ, ರೈಫಲ್ ತರಬೇತಿ ಪಡೆದುಕೊಂಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಸಕ್ರೀಯ ಸದಸ್ಯನಾಗಿ, ಬನ್ನೂರು ಶಾಲಾ ಅಭಿವೃದ್ದಿ ಕಮಿಟಿಯ ಸದಸ್ಯನಾಗಿ, ವಿವೇಕಾನಂದ ಉದ್ಯೋಗ ಸಹಕಾರಿ ಸಂಘದ ಸದಸ್ಯನಾಗಿ ಸೇವೆ ಸಲ್ಲಿಸಿದ್ದಾರೆ.
ಎಸ್.ಸತ್ಯನಾರಾಯಣ ಅವರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನಲ್ಲಿ ತಮ್ಮ ವಿದ್ಯಾಭ್ಯಾಸ ಪೂರೈಸಿ, 1989ರಲ್ಲಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ತಮ್ಮ ವೃತ್ತಿ ಆರಂಭಿಸಿದರು. ನಂತರ 1990ರಲ್ಲಿ ಪುತ್ತೂರು ವಿವೇಕಾನಂದ ಪದವಿ ಕಾಲೇಜಿಗೆ ಸೇರ್ಪಡೆಹೊಂದಿ 11 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಬಳಿಕ ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ವರ್ಗಾವಣೆಗೊಂಡು, ಒಟ್ಟು 36 ವರ್ಷ ಸುದೀರ್ಘ ಕಾಲ ಕಾರ್ಯನಿರ್ವಹಿಸಿರುತ್ತಾರೆ. ಸಂಸ್ಥೆಗೆ ಅತ್ಯುತ್ತಮ ಸೇವೆಯನ್ನು ಸಲ್ಲಿಸಿರುವ ಈ ಈರ್ವರು ನಾಳೆ ನಿವೃತ್ತಿ ಹೊಂದಲಿದ್ದಾರೆ. ಇವರ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂಬುದು ಸಂಸ್ಥೆಯ ಹಾರೈಕೆಯಾಗಿದೆ.


