ಸಂತ ಫಿಲೋಮಿನಾ ಪ.ಪೂ.ಕಾಲೇಜಿನಲ್ಲಿ 'ಫಿಲೋ ಪ್ರತಿಭಾ- 2026' ಪ್ರೌಢಶಾಲಾ ಮಟ್ಟದ ಸ್ಪರ್ಧೆ

Upayuktha
0

 


ಪುತ್ತೂರು :  ನಮ್ಮ ಕಲಿಕೆ ಪೂರ್ಣವಾಗಬೇಕಾದರೆ ಒಂದು ವ್ಯಕ್ತಿಯನ್ನು ರೂಪಿಸುವ ಎಲ್ಲಾ ಚಟುವಟಿಕೆಗಳು ಹುಟ್ಟಿಕೊಳ್ಳಬೇಕು. ತರಗತಿಯೊಳಗಿನ ಪಠ್ಯಕ್ರಮದ ಶಿಕ್ಷಣವು ಕೇವಲ 25 ಪ್ರತಿಶತ ಸಹಕಾರಿಯಾಗಿದ್ದು, ಉಳಿದಂತೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣವನ್ನು ಮಾಡುತ್ತವೆ ಎಂದು ಪುತ್ತೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್. ಸಿ ಹೇಳಿದರು.
        
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಆಗಸ್ಟ್ 6 ರಂದು ಕಾಲೇಜಿನ ಬೆಳ್ಳಿ ಹಬ್ಬದ ಸಭಾಂಗಣದಲ್ಲಿ ನಡೆದ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಆಯೋಜಿಸಲಾದ ಜಿಲ್ಲಾಮಟ್ಟದ 'ಫಿಲೋ ಪ್ರತಿಭಾ - 2026' ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಳಿಗೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅತ್ಯಂತ ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಈ ವೇದಿಕೆಯನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಂಡು, ತಮ್ಮ ಪ್ರತಿಭೆಗಳನ್ನು ಅನಾವರಣ ಗೊಳಿಸಬೇಕು ಎಂದು  ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
        
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪುಸ್ತಕ ಜ್ಞಾನದ ಜೊತೆಗೆ ವ್ಯಕ್ತಿತ್ವ ವಿಕಸನಗೊಳ್ಳುವ ಅನಿವಾರ್ಯತೆ ಇದೆ. ಅದಕ್ಕಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆಯನ್ನು ನೀಡುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ  ಫಿಲೋ ಪ್ರತಿಭಾ ಕಾರ್ಯಕ್ರಮವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ, ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಸುಮಾರು 68 ವರ್ಷಗಳ ಇತಿಹಾಸ ಹೊಂದಿದ್ದು, ಪುತ್ತೂರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಾ ಬಂದಿದೆ.
ವಿವಿಧ ಪ್ರೌಢ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿ, ಶುಭ ಹಾರೈಸಿದರು.
        
ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಆಂಥೋನಿ ಒಲಿವೇರಾ ಹಾಗೂ ಫಿಲೋ ಪ್ರತಿಭಾ 2026  ನಿರ್ದೇಶಕಿ ಸುಮಾ ಪಿ. ಆರ್ ಮತ್ತು ರೋಹಿತ್ ಕುಮಾರ್ ಟಿ ಉಪಸ್ಥಿತರಿದ್ದರು. 

ದಕ್ಷಿಣ ಕನ್ನಡ ಜಿಲ್ಲೆಯ 37 ಪ್ರೌಢಶಾಲೆಗಳ 750ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ರಸಪ್ರಶ್ನೆ, ಇಂಗ್ಲಿಷ್ ವಿಚಾರ ಸಂಕಿರಣ, ಪೆನ್ಸಿಲ್ ಸ್ಕೆಚ್, ಮಣ್ಣಿನ ಮಾದರಿ ತಯಾರಿ, ವಿಜ್ಞಾನ ಮಾದರಿ ತಯಾರಿ,  ದೇಶ ಭಕ್ತಿ ಗಾಯನ, ಕೊಲಾಜ್ ತಯಾರಿಕೆ, ತ್ಯಾಜ್ಯದಿಂದ ಉಪಯುಕ್ತ ವಸ್ತು ತಯಾರಿ, ಫೇಸ್ ಪೈಂಟಿಂಗ್, ಛದ್ಮ ವೇಷ, ಲಾಂಚಿಂಗ್ ಪ್ರಾಡಕ್ಟ್, ಕನ್ನಡ ಕಂಠ ಪಾಠ, ರಂಗೋಲಿ ಹಾಗೂ ಜಾನಪದ ನೃತ್ಯ  ಹೀಗೆ 14 ವಿವಿಧ ಸ್ಪರ್ಧೆಗಳು ನಡೆದವು.
        
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರೌಢಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ರಕ್ಷಕ - ಶಿಕ್ಷಕ ಸಂಘದ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
          
ಕಾಲೇಜಿನ  ವಿದ್ಯಾರ್ಥಿಗಳು ಪ್ರಾರ್ಥಿಸಿ, 'ಫಿಲೋ ಪ್ರತಿಭಾ 2026' ನಿರ್ದೇಶಕಿ ಸುಮಾ ಪಿ. ಆರ್
ಅತಿಥಿಗಳನ್ನು ಸ್ವಾಗತಿಸಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಗುಣಿಕಾ ಗುರುಪ್ರಸಾದ್ ವಂದಿಸಿ, ಉಪನ್ಯಾಸಕಿ ಸವಿತಾ ಮೊಂತೇರೋ ನಿರೂಪಿಸಿದರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top