ಕಲಬುರಗಿ: ಪ್ರಸಿದ್ಧ ವೈದ್ಯ ಹಾಗೂ ಸಾಹಿತಿ, ನಾಡೋಜ ಡಾ. ಪಿ.ಎಸ್. ಶಂಕರ್ ಅವರ ಧರ್ಮಪತ್ನಿ ಹಾಗೂ 'ಡಾ. ಪಿ.ಎಸ್. ಶಂಕರ ಪ್ರತಿಷ್ಠಾನ'ದ ಅಧ್ಯಕ್ಷೆ ಶ್ರೀಮತಿ ಅಂಬಿಕಾ ಶಂಕರ್ (82) ಅವರು ತೀವ್ರ ಹೃದಯಾಘಾತದಿಂದ ಸೋಮವಾರ (ಆಗಸ್ಟ್ 10) ಬೆಳಿಗ್ಗೆ 9.30ಕ್ಕೆ ನಿಧನರಾದರು.
ಕಳೆದ 25 ವರ್ಷಗಳಿಂದ ಡಾ. ಪಿ.ಎಸ್. ಶಂಕರ ಪ್ರತಿಷ್ಠಾನದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅಂಬಿಕಾ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ವೈದ್ಯಕೀಯ ರಂಗದಲ್ಲಿ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಂಸ್ಥೆಯನ್ನು ಮುನ್ನಡೆಸಿದ್ದರು. ಮಾನವೀಯ ಮೌಲ್ಯಗಳ ಪ್ರತಿಪಾದಕಿಯಾಗಿ ಹಾಗೂ ಸರಳ-ಸಜ್ಜನಿಕೆಯ ವ್ಯಕ್ತಿತ್ವದಿಂದ ಅಪಾರ ಜನಪ್ರಿಯತೆ ಗಳಿಸಿದ್ದರು.
ಮೃತರು ಪತಿ ಡಾ. ಪಿ.ಎಸ್. ಶಂಕರ್, ಪುತ್ರ ದೀಪಕ್ (ಎಂಜಿನಿಯರ್), ಪುತ್ರಿ ಡಾ. ರೂಪಾ (ಅರಿವಳಿಕೆ ತಜ್ಞೆ) ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಆಗಸ್ಟ್ 12ರಂದು ಅಂತ್ಯಕ್ರಿಯೆ:
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ಬುಧವಾರ (ಆಗಸ್ಟ್ 12) ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ನ್ಯೂ ರಾಘವೇಂದ್ರ ಕಾಲೋನಿಯ ವಿದ್ಯುತ್ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗಣ್ಯರ ಸಂತಾಪ:
ಅಂಬಿಕಾ ಶಂಕರ್ ಅವರ ಅಗಲಿಕೆಗೆ ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್ ವಿ. ಗುತ್ತೇದಾರ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕಡೇಚೂರ್, ಶ್ರೀಮತಿ ಬಾಲಮ್ಮ ಮಹಾದೇವಪ್ಪ ಕಡೇಚೂರ್ ಪ್ರತಿಷ್ಠಾನದ ಟ್ರಸ್ಟಿ ಡಾ. ರಾಜೇಶ್ ಕಡೇಚೂರ್, ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥ ಡಾ. ಸದಾನಂದ ಪೆರ್ಲ, ಕಲಬುರಗಿ ಜಿಲ್ಲಾ ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ನರಸಿಂಹ ಮೆಂಡನ್, ಮಹಾನಗರ ಪಾಲಿಕೆ ಉಪ ಆಯುಕ್ತರಾದ ಶ್ರೀಮತಿ ಪ್ರಮೀಳಾ ಎಂ.ಕೆ., ಸವಿತಾ ಗುತ್ತೇದಾರ್ ಹಾಗೂ ಲತಾ ಶ್ರೀನಿವಾಸ ಆಚಾರ್ಯ ಸೇರಿದಂತೆ ಹಲವು ರಂಗಗಳ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

