ಮಂಗಳೂರು: ನಾಗರಿಕರೆಲ್ಲರು ಆರ್ಥಿಕವಾಗಿ ಸಬಲರಾಗಲು ಪ್ರಯತ್ನಿಸಿ. ಇದರಿಂದ ದೇಶಕ್ಕೆ ಸಾಕಷ್ಟು ಕೊಡುಗೆ ನೀಡಿದಂತಾಗುತ್ತದೆ. ಅದು ಕೂಡ ದೇಶಸೇವೆಯೇ ಆಗಿದೆ ಎಂದು ಭಾರತೀಯ ಸೇನೆಯ ನಿವೃತ್ತ ಸೇನಾನಿ ಕರ್ನಲ್ ಮನೋಜ್ ಆರ್ ಅಭಿಪ್ರಾಯಪಟ್ಟರು.
ನಗರದ ಹಂಪನಕಟ್ಟೆಯಲ್ಲಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಶನಿವಾರ ಆಯೋಜಿಸಲಾಗಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ದ್ವಜಾರೋಹನದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಗಡಿ ಭದ್ರತೆ ಸೇರಿದಂತೆ ಆಂತರಿಕ ನೈಸರ್ಗಿಕ ವಿಕೋಪಗಳ ಸಂದರ್ಭಗಳಲ್ಲಿ ಸುರಕ್ಷತಾ ಕಾರ್ಯಗಳಲ್ಲಿ ಸಾಕಷ್ಟು ಕೊಡುಗೆಯನ್ನು ನೀಡುತ್ತಾ ಬಂದಿರುವ ಭಾರತೀಯ ಸೇನೆ ದೇಶದ ಜನರ ರಕ್ಷಣೆಗೆ ಸದಾ ಸಿದ್ಧವಿರುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ. ಜಯವಂತ ನಾಯಕ್, ಸಾವಿರಾರು ಜನರ ಪ್ರಾಣತ್ಯಾಗದ ಪ್ರತೀಕವಾಗಿ ಸಿಕ್ಕಿರುವ ಈ ಸ್ವಾತಂತ್ರ್ಯವನ್ನು ಸಂರಕ್ಷಿಸಿಕೊಂಡು ಹೋಗಬೇಕಿರುವ ಮಹತ್ವದ ಜವಾಬ್ದಾರಿ ಇಂದಿನ ಯುವ ಪೀಳಿಗೆಗಿದೆ ಎಂದು ತಿಳಿಸಿದರು. ಇದೀಗ ನಮಗೆ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದ್ದು, ಆರ್ಥಿಕ ಸ್ವಾತಂತ್ರ್ಯ ಸಿಗುವ ಅಗತ್ಯವಿದೆ. ಹಸಿವು, ಬಡತನ, ನಿರುದ್ಯೋಗ ನಿರ್ಮೂಲನೆ ಆಗಬೇಕಿದೆ. ಆಗ ಮಾತ್ರ ಸಿಕ್ಕಿದ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.
ಎನ್ ಸಿ ಸಿ ಭೂದಳ ಅಧಿಕಾರಿ ಮೇಜರ್ ಡಾ ಜಯರಾಜ್ ಎನ್ ಪ್ರಾಸ್ತಾವಿಕ ನುಡಿಗಳನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ. ಗಾಯತ್ರಿ ನಿರೂಪಿಸಿದರು. ಎನ್ ಸಿ ಸಿ ನೌಕಾದಳ ಅಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಪ್ರೊ. ಯತೀಶ್ ಕುಮಾರ್ ವಂದಿಸಿದರು. ವೇದಿಕೆಯಲ್ಲಿ ಎನ್ ಎಸ್ ಎಸ್ ಅಧಿಕಾರಿ ಡಾ. ಸುರೇಶ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ ಹರಿದಾಸ್ ಕೂಳೂರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


