ಕರಾವಳಿ ಕ್ರಾಂತಿ: ತುಳು ಭಾಷೆಗೆ ಆಡಳಿತ ಮಾನ್ಯತೆ, ದಕ್ಷಿಣ ಕನ್ನಡ ‘ಮಂಗಳೂರು’ ಮರುನಾಮಕರಣಕ್ಕೆ ಜನಾಭಿಪ್ರಾಯ ಸಂಗ್ರಹ

Upayuktha
0

ಮಂಗಳೂರಿನಲ್ಲಿ ಪ್ರಥಮ ಸಚಿವ ಸಂಪುಟ ಸಭೆ: ಕರಾವಳಿ-ಮಲೆನಾಡು ಅಭಿವೃದ್ಧಿಗೆ ₹32,611 ಕೋಟಿ ಕೊಡುಗೆ




ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ದಶಕಗಳ ಕನಸಾದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡುವುದು ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಮಗ್ರ ಅಭಿವೃದ್ಧಿಗೆ 32,611 ಕೋಟಿ ರೂಪಾಯಿಗಳ ಬೃಹತ್ ಯೋಜನೆಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಚಾರಿತ್ರಿಕ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.


ಬೆಂಗಳೂರಿನಿಂದಾಚೆಗೆ ಪ್ರಥಮ ಬಾರಿಗೆ ಮಂಗಳೂರಿನಲ್ಲಿ ನಡೆದ ಈ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿಗಳು, ಒಟ್ಟು ಅನುಮೋದಿತ ಮೊತ್ತದಲ್ಲಿ 16,000 ಕೋಟಿ ರೂ. ಗ್ರಾಮೀಣ ಸಂಪರ್ಕ ರಸ್ತೆ ಹಾಗೂ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಕಾಯ್ದಿರಿಸಲಾಗಿದ್ದು, ಉಳಿದ ಮೊತ್ತವನ್ನು ಕರಾವಳಿ ಭಾಗದ ಯೋಜನೆಗಳಿಗೆ ವಿನಿಯೋಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.


ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಧಾರಗಳು

ತುಳು ಭಾಷೆಗೆ ಆಡಳಿತ ಭಾಷೆಯ ಮಾನ್ಯತೆ: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಲಾಗುವುದು. ಜನರ ಭಾವನೆ ಹಾಗೂ ಬದುಕನ್ನು ಗೌರವಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.


‘ಮಂಗಳೂರು’ ಜಿಲ್ಲೆಯಾಗಿ ಮರುನಾಮಕರಣ: ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಮಂಗಳೂರಿನ ಹೆಸರನ್ನು ಇಡೀ ‘ದಕ್ಷಿಣ ಕನ್ನಡ’ ಜಿಲ್ಲೆಗೆ ಮರುನಾಮಕರಣ ಮಾಡುವ ಪ್ರಸ್ತಾಪವಿದೆ. ಈ ಕುರಿತು ಕರಡು ಅಧಿಸೂಚನೆ ಹೊರಡಿಸಿ, 1 ತಿಂಗಳ ಕಾಲ ಸಾರ್ವಜನಿಕರಿಂದ ಜನಾಭಿಪ್ರಾಯ ಸಂಗ್ರಹಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.


ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026: ಕರಾವಳಿ ಮತ್ತು ಮಲೆನಾಡು ಭಾಗಕ್ಕೆ ನೂತನ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುತ್ತಿದ್ದು, ಇಲ್ಲಿನ ಪ್ರವಾಸೋದ್ಯಮ ಯೋಜನೆಗಳನ್ನು ಮೂಲಸೌಕರ್ಯ ಯೋಜನೆಗಳೆಂದು ಪರಿಗಣಿಸಿ ಹೂಡಿಕೆದಾರರಿಗೆ ಹೆಚ್ಚಿನ ಸವಲತ್ತು ಹಾಗೂ ಪ್ರೋತ್ಸಾಹಕಗಳನ್ನು ನೀಡಲಾಗುವುದು.


ಮೀನುಗಾರಿಕೆ ಮತ್ತು ಶೈಕ್ಷಣಿಕ ಯೋಜನೆಗಳು:

150 ಎಕರೆ ಪ್ರದೇಶದಲ್ಲಿ ಬೃಹತ್ ಮೀನುಗಾರಿಕೆ ಪಾರ್ಕ್ ನಿರ್ಮಾಣ.

ಹೊಸದಾಗಿ ‘ಫಿಷರೀಸ್ ಅಂಡ್ ಬ್ಲೂ ಎಕಾನಮಿ ಯೂನಿವರ್ಸಿಟಿ’ (Fisheries & Blue Economy University) ಸ್ಥಾಪನೆ.

ಪ್ರಸ್ತುತ ಇರುವ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿ ಪ್ರವೇಶಾತಿ ಸಾಮರ್ಥ್ಯವನ್ನು 60 ರಿಂದ 200 ಸೀಟುಗಳಿಗೆ ಹೆಚ್ಚಳ.

ಆರೋಗ್ಯ ಕ್ಷೇತ್ರದಲ್ಲಿ ಬೃಹತ್ ಯೋಜನೆ: ಪುತ್ತೂರಿನಲ್ಲಿ 549 ಕೋಟಿ ರೂ. ವೆಚ್ಚದಲ್ಲಿ ನೂತನ ಸರ್ಕಾರಿ ವೈದ್ಯಕೀಯ ಕಾಲೇಜು (Medical College) ಸ್ಥಾಪನೆಗೆ ಅನುಮೋದನೆ.


ಸಭೆಯ ಇತರ ಮುಖ್ಯಾಂಶಗಳು


ವಿಕೇಂದ್ರೀಕರಣಕ್ಕೆ ಒತ್ತು:

ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ಮುಂದಿನ 15 ತಿಂಗಳ ಅವಧಿಯಲ್ಲಿ ರಾಜ್ಯದ ವಿವಿಧ 10 ರಿಂದ 12 ಆಯಕಟ್ಟಿನ ಸ್ಥಳಗಳಲ್ಲಿ ಸಚಿವ ಸಂಪುಟ ಸಭೆ ನಡೆಸುವ ಗುರಿ ಹೊಂದಲಾಗಿದೆ.


ಕರಾವಳಿ ಅಭಿವೃದ್ಧಿಗೆ ಬದ್ಧತೆ:

ದಕ್ಷಿಣ ಕನ್ನಡ ಜಿಲ್ಲೆಯು ದೇಶಕ್ಕೆ 6 ರಾಷ್ಟ್ರೀಕೃತ ಬ್ಯಾಂಕುಗಳನ್ನು ನೀಡಿದ, ಶಿಕ್ಷಣ, ಆರೋಗ್ಯ ಮತ್ತು ಬಂದರು ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಿಲ್ಲೆಯಾಗಿದೆ. ಈ ಭಾಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಿಎಂ ಹೇಳಿದರು.


ಕಸ್ತೂರಿರಂಗನ್ ವರದಿ ಕುರಿತು ಸಮಾಲೋಚನೆ:

ಸಂಪುಟ ಸಭೆಯ ಬಳಿಕ ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಭೆ ನಡೆಸಲಾಗುವುದು ಹಾಗೂ ಶೀಘ್ರದಲ್ಲೇ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top