ಮಂಗಳೂರು: ನಗರದ ಎಸ್ ಸಿ ಎಸ್ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಮತ್ತು ಕ್ರೀಡಾಕೂಟ ಸಂಘದ ವತಿಯಿಂದ ಆಗಸ್ಟ್ 31ರಂದು ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಸ್ಮರಣಾರ್ಥ ಆಯೋಜಿಸಲಾದ ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕ್ರೀಡೆ, ದೈಹಿಕ ಕ್ಷಮತೆ, ಶಿಸ್ತು, ತಂಡ ಮನೋಭಾವ ಹಾಗೂ ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಮೂಡಿಸುವ ಉದ್ದೇಶವನ್ನು ಹೊಂದಿತ್ತು.
ಬೆಳಿಗ್ಗೆ 11.45ಕ್ಕೆ ಸಂಸ್ಥೆಯ ಗೀತೆಯೊಂದಿಗೆ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರಿನ ಎಸ್.ಡಿ.ಎಂ. ಕಾಲೇಜ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಭರತ್ ಕುಮಾರ್ ಜೈನ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಮತ್ತು ದೈಹಿಕ ಕ್ಷಮತೆಯ ಮಹತ್ವವನ್ನು ಸುದೀರ್ಘವಾಗಿ ವಿವರಿಸಿದರು. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಶಿಸ್ತು, ಆತ್ಮವಿಶ್ವಾಸ, ತಂಡ ಮನೋಭಾವ ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸಿಕೊಳ್ಳಲು ಸಾಧ್ಯ ಎಂದು ಅವರು ಪ್ರೋತ್ಸಾಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಹಾರ್ದಿಕ್ ಪಿ. ಚೌಹಾಣ್ ಅವರು, ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ದೈಹಿಕ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳು ಸಮತೋಲನದ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕ್ರೀಡಾ ಮತ್ತು ಕ್ರೀಡಾಕೂಟ ಸಂಘದ ಸಹ ಸಂಚಾಲಕ ದೀಕ್ಷಿತ್ ಅವರು ರಾಷ್ಟ್ರೀಯ ಕ್ರೀಡಾ ದಿನದ ಮಹತ್ವ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಯ ಪಾತ್ರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಕಲ್ಯಾಣ ಮಾರ್ಗದರ್ಶಕರಾದ ತಿಲಕ್ ಗೌಡ ಅವರು ‘ಫಿಟ್ ಇಂಡಿಯಾ’ ಪ್ರತಿಜ್ಞಾವಿಧಿ ಬೋಧಿಸಿದರು.
ತೃತೀಯ ಬಿ.ಸಿ.ಎ. ವಿದ್ಯಾರ್ಥಿನಿ ರೀಶಲ್ ಡಿಸೋಜಾ ಅವರು ಮೇಜರ್ ಧ್ಯಾನ್ ಚಂದ್ ಅವರ ಕ್ರೀಡಾ ಸಾಧನೆ ಹಾಗೂ ಭಾರತೀಯ ಕ್ರೀಡಾಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಯನ್ನು ವಿಶೇಷವಾಗಿ ಸ್ಮರಿಸಿದರು. ವಿದ್ಯಾರ್ಥಿ ಕಲ್ಯಾಣ ಪರಿಷತ್ತಿನ ಅಧ್ಯಕ್ಷೆ ಸಾನ್ವಿ ಎಂ.ಎಸ್ ಸ್ವಾಗತಿಸಿ, ತೃತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಶ್ರಾವ್ಯ ಜೆ. ಎಸ್. ಕಾರ್ಯಕ್ರಮ ನಿರೂಪಿಸಿದರು. ತೃತೀಯ ಬಿ.ಸಿ.ಎ ವಿದ್ಯಾರ್ಥಿ ಸುಶಾಂತ್ ಎ. ಸುವರ್ಣ ವಂದನಾರ್ಪಣೆ ಸಲ್ಲಿಸಿದ ನಂತರ ರಾಷ್ಟ್ರಗೀತೆಯೊಂದಿಗೆ ಔಪಚಾರಿಕ ಕಾರ್ಯಕ್ರಮ ಮುಕ್ತಾಯವಾಯಿತು.
ಮಧ್ಯಾಹ್ನ 2.30ಕ್ಕೆ ಕಾಲೇಜಿನ ಕ್ರೀಡಾಂಗಣದಲ್ಲಿ “ಏಕ್ ಘಂಟಾ ಖೇಲ್ ಕೆ ಮೈದಾನ್ ಮೇ– ಒಂದು ಗಂಟೆ ಕ್ರೀಡಾಂಗಣದಲ್ಲಿ” ಎಂಬ ಆಶಯದಡಿ ಕಾರ್ಯಕ್ರಮದ ಎರಡನೇ ಹಂತ ನಡೆಯಿತು. ಈ ವೇಳೆ ವಿದ್ಯಾರ್ಥಿಗಳು ಸಾಮೂಹಿಕ ಓಟ, ದೈಹಿಕ ವ್ಯಾಯಾಮ ಹಾಗೂ ಸಾಮೂಹಿಕ ಏರೋಬಿಕ್ಸ್ಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿದರು. ಜೊತೆಗೆ ಆಯೋಜಿಸಲಾಗಿದ್ದ ವಿವಿಧ ಸಾಂಪ್ರದಾಯಿಕ ಆಟಗಳು ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ ಹಾಗೂ ಸಾಮೂಹಿಕ ಭಾಗವಹಿಸುವಿಕೆಯನ್ನು ಹೆಚ್ಚಿಸಲು ನೆರವಾದವು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

