ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2026-27ನೇ ಶೈಕ್ಷಣಿಕ ಸಾಲಿನ ಎನ್ಎಸ್ಎಸ್ ಘಟಕದ ಚಟುವಟಿಕೆಗಳನ್ನು ಆಗಸ್ಟ್ 29 ರಂದು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ಸಹಯೋಗದ ನಿರ್ದೇಶಕ ಪ್ರೊ. ಹರಿಕೃಷ್ಣ ಭಟ್ ಅವರು ಆಹ್ವಾನಿತ ಗಣ್ಯರು ಹಾಗೂ ಸುಮಾರು 250 ಎನ್ಎಸ್ಎಸ್ ಸ್ವಯಂಸೇವಕರ ಸಮ್ಮುಖದಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ವಹಿಸಿದ್ದರು.
ದೀಪ ಬೆಳಗಿಸುವ ಮೂಲಕ ಘಟಕವನ್ನು ಔಪಚಾರಿಕವಾಗಿ ಉದ್ಘಾಟಿಸಲಾಯಿತು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರೊ. ಹರಿಕೃಷ್ಣ ಭಟ್ ಅವರು ಸುರತ್ಕಲ್ ನ ಅಂದಿನ ಕೆ.ಆರ್.ಇ.ಸಿ ಯ ಎನ್ಎಸ್ಎಸ್ ಸ್ವಯಂಸೇವಕರಾಗಿದ್ದ ತಮ್ಮ 55 ವರ್ಷಗಳ ಹಳೆಯ ನೆನಪುಗಳನ್ನು ಮೆಲುಕುಹಾಕಿಕೊಂಡರು. ಶಿಕ್ಷಣದ ಜೊತೆಗೆ ಸಮಾಜಕ್ಕೆ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವವನ್ನು ಅವರು ತಿಳಿಸಿದರು ಮತ್ತು ಪ್ರತಿಯೊಬ್ಬ ವಿದ್ಯಾರ್ಥಿಯು ಒಂದಲ್ಲ ಒಂದು ರೂಪದಲ್ಲಿ ಸೇವೆಯ ಮೂಲಕ ಸಮಾಜಕ್ಕೆ ಕೊಡುಗೆ ನೀಡುವಂತೆ ಪ್ರೋತ್ಸಾಹಿಸಿದರು.
ಡಾ. ನಿರಂಜನ್ ಎನ್. ಚಿಪ್ಲುಂಕರ್ ಅವರು ಎನ್ಎಸ್ಎಸ್ ಘಟಕಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು ಮತ್ತು ಇತ್ತೀಚಿನ ವರ್ಷಗಳಲ್ಲಿ ಎನ್ಎಸ್ಎಸ್ ಕೈಗೊಂಡ ವಿವಿಧ ಚಟುವಟಿಕೆಗಳನ್ನು ಶ್ಲಾಘಿಸಿದರು. ಸಮುದಾಯ ಸೇವೆ ಮತ್ತು ಸಾಮಾಜಿಕ ಜವಾಬ್ದಾರಿಯ ಕಡೆಗೆ ತಮ್ಮ ಪ್ರಯತ್ನಗಳನ್ನು ಮುಂದುವರಿಸಲು ಅವರು ಸ್ವಯಂಸೇವಕರನ್ನು ಪ್ರೋತ್ಸಾಹಿಸಿದರು.
ಘಟಕದ ಪ್ರಮುಖ ಸದಸ್ಯರಿಗೆ ಎನ್ಎಸ್ಎಸ್ ಗುರುತಿನ ಚೀಟಿಗಳನ್ನು ಗಣ್ಯರು ಇದೇ ಸಂದರ್ಭದಲ್ಲಿ ವಿತರಿಸಿದರು. ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ನಾಗೇಶ್ ಪ್ರಭು ಉಪಸ್ಥಿತರಿದ್ದರು.
ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಧನಂಜಯ ಬಿ. ಸ್ವಾಗತಿಸಿದರೆ, ಎನ್ಎಸ್ಎಸ್ ಘಟಕದ ವಿದ್ಯಾರ್ಥಿ ನಾಯಕಿ ಸ್ಪೂರ್ತಿ ಬೈಲೂರ್ ವಂದಿಸಿದರು. ಲಿಕಿತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


