ಬೆಂಗಳೂರು: ನಗರದ ಗುಡ್ ಶೆಫರ್ಡ್ ಆಡಿಟೋರಿಯಂನಲ್ಲಿ ಸೆಪ್ಟೆಂಬರ್ 11 ಮತ್ತು 12 ರಂದು ಆಯೋಜಿಸಲಾಗಿರುವ ಪ್ರಸಿದ್ಧ ಸ್ಟ್ಯಾಂಡ್-ಅಪ್ ಕಾಮಿಡಿಯನ್ ವೀರ್ ದಾಸ್ ಅವರ ಹಾಸ್ಯ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸುವಂತೆ ಆಗ್ರಹಿಸಿ ಅಶೋಕನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿವೆ.
ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಶ್ರೀರಾಮ ಸೇನೆಯ ಮೋಹನ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ನಾರಾಯಣ ಗೌಡ ಸೇರಿದಂತೆ ಹಲವಾರು ಪ್ರಮುಖ ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಿದರು.
ಸಂಘಟನೆಗಳ ಪ್ರಮುಖ ಆಕ್ಷೇಪಗಳು:
ದೇಶ ಹಾಗೂ ಮಹಿಳೆಯರಿಗೆ ಅವಮಾನ: ವೀರ್ ದಾಸ್ ಅವರು ಈ ಹಿಂದೆ ಅಂತರಾಷ್ಟ್ರೀಯ ವೇದಿಕೆಯಲ್ಲಿ "I Come From Two Indias" ಎಂಬ ಕಾರ್ಯಕ್ರಮದ ಮೂಲಕ ಭಾರತೀಯ ಸಮಾಜ ಮತ್ತು ಮಹಿಳೆಯರನ್ನು ಅತ್ಯಂತ ಕೆಟ್ಟದಾಗಿ ಚಿತ್ರಿಸಿ, ದೇಶದ ಗೌರವಕ್ಕೆ ಧಕ್ಕೆ ತಂದಿದ್ದಾರೆ.
ಧಾರ್ಮಿಕ ಭಾವನೆಗೆ ಧಕ್ಕೆ: ಹಾಸ್ಯದ ನೆಪದಲ್ಲಿ ಹಿಂದೂ ದೇವತೆಗಳನ್ನು ಹಾಗೂ ಧಾರ್ಮಿಕ ನಂಬಿಕೆಗಳನ್ನು ಹೀಯಾಳಿಸುವುದು ಇವರ ಚಾಳಿಯಾಗಿದ್ದು, ಇದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುವ ಸಾದ್ಯತೆಯಿದೆ.
ಹಿಂದಿನ ಪ್ರಕರಣಗಳು: 2021ರಲ್ಲಿ ವಾಷಿಂಗ್ಟನ್ನಲ್ಲಿ ಅವರು ನೀಡಿದ್ದ ಹೇಳಿಕೆಗಳ ವಿರುದ್ಧ ಈಗಾಗಲೇ ದೆಹಲಿ ಮತ್ತು ಮುಂಬೈನಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ತೀವ್ರ ವಿರೋಧದ ಹಿನ್ನೆಲೆಯಲ್ಲಿ 2022ರಲ್ಲೂ ಬೆಂಗಳೂರಿನಲ್ಲಿ ಇವರ ಕಾರ್ಯಕ್ರಮ ರದ್ದಾಗಿತ್ತು ಎಂಬುದನ್ನು ಸಮಿತಿ ನೆನಪಿಸಿದೆ.
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಧರ್ಮ ಹಾಗೂ ದೇಶದ ಅಖಂಡತೆಯನ್ನು ಅವಮಾನಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಪೊಲೀಸರು ತಕ್ಷಣವೇ ಕಾರ್ಯಕ್ರಮದ ಅನುಮತಿಯನ್ನು ಮರುಪರಿಶೀಲಿಸಿ, ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕಾರ್ಯಕ್ರಮದಲ್ಲಿ ಧರ್ಮ ಅಥವಾ ರಾಷ್ಟ್ರೀಯ ಚಿಹ್ನೆಗಳಿಗೆ ಅವಮಾನವಾದರೆ, ಅದಕ್ಕೆ ಆಯೋಜಕರು ಹಾಗೂ ಸಂಬಂಧಪಟ್ಟ ಇಲಾಖೆಗಳೇ ನೇರ ಹೊಣೆ ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ರಾಜ್ಯ ಸಮನ್ವಯಕರಾದ ಮೋಹನ್ ಗೌಡ ಎಚ್ಚರಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


